ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bike taxi: ರಾಜ್ಯದಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿ ಜೂನ್‌ 16ರಿಂದ ಬಂದ್‌, ಹೈಕೋರ್ಟ್‌ ನಿಲುವು ಅಚಲ

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್, ಓಲಾ, ಬೈಕ್ ಟ್ಯಾಕ್ಸಿಗಳ ಮಾಲೀಕರು ಮತ್ತಿತರರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ರಾಜ್ಯದಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿ ಜೂನ್‌ 16ರಿಂದ ಬಂದ್‌

ಹರೀಶ್‌ ಕೇರ ಹರೀಶ್‌ ಕೇರ Jun 14, 2025 7:49 AM

ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳ (bike taxi) ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ (Karnataka high court) ನಿರಾಕರಿಸಿದ್ದು, ಈ ಮೊದಲೇ ನೀಡಲಾಗಿದ್ದ ನಿಲುಗಡೆ ಆದೇಶವನ್ನು ಮತ್ತೆ ಊರ್ಜಿತಗೊಳಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕಿರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್‌ಗೆ ಹೇಳಿದರು.

ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಯೆಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್​​ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್​​ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎನ್ಐ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್(ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಮೇಲ್ಮನವಿ ಸಲ್ಲಿಸಿದ್ದರು.