ಉಡುಪಿ: ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ (Banu Mushtaq) ಅವರನ್ನು ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪೋಸ್ಟ್ ಮಾಡಿದ್ದ ಇಬ್ಬರ ಮೇಲೆ ಉಡುಪಿ ಜಿಲ್ಲೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಸರ್ಕಾರದ ತೀರ್ಮಾನ ವಿರೋಧಿಸಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೊಲ್ಲೂರಿನ ನಿವಾಸಿ ಜಗದೀಶ್, ಕಾರ್ಕಳ ತಾಲೂಕಿನ ನಿಟ್ಟೆಯ ಸುದೀಪ್ ಶೆಟ್ಟಿ ಎಂಬುವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೊಲ್ಲೂರಿನ ನಿವಾಸಿ ಜಗದೀಶ್ ತಮ್ಮ ಪೋಸ್ಟ್ನಲ್ಲಿ, “ಇದು ತಪ್ಪು, ಇದು ಒಂದು ಧರ್ಮದ ತುಷ್ಟೀಕರಣ, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ. ಸರ್ಕಾರ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಬರೆದಿದ್ದರು. ಕೊಲ್ಲೂರು ಪೊಲೀಸರು ಅವರ ವಿರುದ್ಧ ಬಿಎನ್ಎಸ್ ಸೆಕ್ಷನ್ 353(2) (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಾರ್ಕಳ ತಾಲೂಕಿನ ನಿಟ್ಟೆಯ ಸುದೀಪ್ ಶೆಟ್ಟಿ ಎಂಬವರು, “ದಸರಾ ಹಿಂದೂಗಳ ಸಾಂಸ್ಕೃತಿಕ ಉತ್ಸವ. ಹಿಂದೂ ಸಂಪ್ರದಾಯಗಳನ್ನು ಒಪ್ಪದ ವ್ಯಕ್ತಿಯಿಂದ ದಸರಾ ಉದ್ಘಾಟಿಸಿ ಹಿಂದೂ ಭಾವನೆಗಳಿಗೆ ಸರ್ಕಾರ ಪದೇ ಪದೇ ನೋವುಂಟು ಮಾಡುತ್ತಿದೆ” ಎಂದು ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಬಿಎನ್ಎಸ್ನ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.