ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

BJP Padayatra: ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಲಿಂಗಸುಗೂರು, ಸೆ.1: ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಲಿಂಗಸುಗೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನ ಎಂದು ಅವರು ಹೇಳಿದರು.

“ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ”. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಡಿಕೆಶಿ ಅವರೇ, ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಮೂಡಿರುವ ಆಕ್ರೋಶವೇ ಬಿಜೆಪಿ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ವಿಜಯೇಂದ್ರ ಹೇಳಿದರು.

ಭ್ರಷ್ಟಾಚಾರವನ್ನು ರಕ್ಷಿಸುವ ಸರ್ಕಾರವನ್ನು ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

BJP Padayatra (2)

ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮೊದಲ ಹಂತದ ಜಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕಾಯಿತು. ಬಿಜೆಪಿ ಹೋರಾಟ ತೀವ್ರಗೊಳಿಸಿದ ಬಳಿಕ ಸರ್ಕಾರ ಆತುರಾತುರವಾಗಿ ರಾಜೀನಾಮೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಯಿತು ಎಂದು ವಿಜಯೇಂದ್ರ ಹೇಳಿದರು.

ವಿಪಕ್ಷ ನಾಯಕ ಆರ್. ಅಶೋಕ್ ಅವರು ಅಹೋರಾತ್ರಿ ಹೋರಾಟ ಘೋಷಿಸಿದ ತಕ್ಷಣವೇ ಸದನದ ಕಲಾಪವನ್ನು ಮೊಟಕುಗೊಳಿಸಿ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಿತು. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ನಡೆಸಿದ ಅಹೋರಾತ್ರಿ ಹೋರಾಟದ ಪರಿಣಾಮವಾಗಿ ಮೊದಲ ಹಂತದ ಜಯ ದೊರೆತಿದೆ ಎಂದರು.

BJP Padayatra (4)

“ದಲಿತರ ಪರ ಮೊಸಳೆ ಕಣ್ಣೀರು; ವಾಲ್ಮೀಕಿ ನಿಗಮದ ₹187 ಕೋಟಿ ಹಗರಣಕ್ಕೆ ಉತ್ತರ ಕೊಡಿ”

ದಲಿತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ₹187 ಕೋಟಿ ಹಣದ ದುರುಪಯೋಗದ ಆರೋಪ ಕೇಳಿಬಂದಿದೆ. ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಾದ ಹಣವೇ ದುರುಪಯೋಗವಾಗಿರುವಾಗ ಸರ್ಕಾರದ ದಲಿತಪರ ಕಾಳಜಿ ಎಲ್ಲಿದೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

SCP-TSP ಯೋಜನೆಗಳಡಿ ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಆರೋಪಗಳಿಗೂ ಸರ್ಕಾರ ಉತ್ತರ ನೀಡಬೇಕು. ಡಿ.ಕೆ. ಶಿವಕುಮಾರ್ ಅವರೇ, ದಲಿತರ ಹಣದ ವಿಚಾರದಲ್ಲಿ ರಾಜ್ಯದ ಜನತೆಗೆ ಸ್ಪಷ್ಟ ಉತ್ತರ ನೀಡಿ ಎಂದು ಆಗ್ರಹಿಸಿದರು.

BJP Padayatra (3)

“ರಾಜಣ್ಣ ಅವರ ವಿಚಾರದಲ್ಲಿ ನಿಮ್ಮ ದಲಿತಪರ ಕಾಳಜಿ ಎಲ್ಲಿತ್ತು?”

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮತದಾನ ಅಕ್ರಮಗಳ ಕುರಿತು ಮಾತನಾಡಿದ್ದಕ್ಕಾಗಿ ರಾಜೀನಾಮೆ ಪಡೆಯಲಾಗಿದೆ. ಆಗ ನಿಮ್ಮ ದಲಿತಪರ ಕಾಳಜಿ ಎಲ್ಲಿತ್ತು? ಎಂದು ವಿಜಯೇಂದ್ರ ಪ್ರಶ್ನಿಸಿದರು.

ದಲಿತರ ಪರ ಭಾಷಣ ಮಾಡುವುದರಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ. ದಲಿತರ ಹಣ, ಹಕ್ಕು ಮತ್ತು ಬದುಕನ್ನು ರಕ್ಷಿಸುವ ಜವಾಬ್ದಾರಿಯನ್ನು ಸರ್ಕಾರ ನಿಭಾಯಿಸಬೇಕು ಎಂದರು.

“ದಲಿತರ ಅಭಿವೃದ್ಧಿಗೆ ನಿಗಮಗಳನ್ನು ಕೊಟ್ಟಿದ್ದು ಬಿಜೆಪಿ; ನಿಗಮಗಳ ಹಣಕ್ಕೆ ಕನ್ನ ಹಾಕಿದ್ದು ಕಾಂಗ್ರೆಸ್”

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತದಲ್ಲಿ ವಾಲ್ಮೀಕಿ ಹಾಗೂ ಬೋವಿ ಅಭಿವೃದ್ಧಿ ನಿಗಮಗಳಂತಹ ಸಂಸ್ಥೆಗಳನ್ನು ಸ್ಥಾಪಿಸಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿತ್ತು.

ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ಅಭಿವೃದ್ಧಿ ನಿಗಮಗಳ ಹಣ ದುರುಪಯೋಗವಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಬಡವರು ಮತ್ತು ಶೋಷಿತ ಸಮುದಾಯಗಳಿಗೆ ತಲುಪಬೇಕಾದ ಯೋಜನೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಹೇಳಿದರು.

BJP Padayatra (6)

“ದಲಿತ ಯುವಕನ ಹತ್ಯೆ; ಸರ್ಕಾರದ ಮೌನ ಏಕೆ?”

ವಾಲ್ಮೀಕಿ ಸಮುದಾಯದ ಯುವಕನ ಹತ್ಯೆ ಸೇರಿದಂತೆ ರಾಜ್ಯದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಸರ್ಕಾರ ಗಂಭೀರವಾಗಿ ಸ್ಪಂದಿಸಬೇಕು. ಘಟನೆಗಳ ನಂತರ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಬೇಕಿತ್ತು. ಆದರೆ ಅಧಿಕಾರದ ದರ್ಪದಿಂದ ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು.

ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯ ಬಳಿಕ ಅವರ ಕುಟುಂಬಕ್ಕೆ ನೀಡಿದ ನೆರವಿನ ರೀತಿಯಲ್ಲೇ, ಸಂಕಷ್ಟದಲ್ಲಿರುವ ಪ್ರತಿಯೊಂದು ಕುಟುಂಬಕ್ಕೂ ಸರ್ಕಾರ ಮಾನವೀಯವಾಗಿ ಸ್ಪಂದಿಸಬೇಕು ಎಂದರು.

“ರೈತರು ಸಂಕಷ್ಟದಲ್ಲಿದ್ದಾರೆ; ಮುಖ್ಯಮಂತ್ರಿ ಮಾತ್ರ ರಿಯಲ್ ಎಸ್ಟೇಟ್‌ನಲ್ಲಿ ಬ್ಯುಸಿ”

ರಾಜ್ಯದಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿದೆ. 175 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದ್ದರೂ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ನಿಜವಾಗಿ ಎಷ್ಟು ಬರ ಇದೆ ಎಂಬುದೇ ಸರ್ಕಾರಕ್ಕೆ ಗೊತ್ತಿದೆಯೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಸಾವಿರಾರು ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಸುಮಾರು 45 ಸಾವಿರ ಕುಟುಂಬಗಳು ಮನೆಗಳಿಗೆ ಬೀಗ ಹಾಕಿಕೊಂಡು ಊರು ತೊರೆದಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ವರದಿಗಳಿವೆ. ಆದರೆ ರೈತರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಟೀಕಿಸಿದರು.

“ಯಡಿಯೂರಪ್ಪ ನೆರೆ ಬಂದಾಗ ಮನೆ ಕಳೆದುಕೊಂಡವರಿಗೆ ₹5 ಲಕ್ಷ ನೀಡಿದ್ದರು; ಈ ಸರ್ಕಾರ ₹1 ಲಕ್ಷವೂ ನೀಡಲಿಲ್ಲ”

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾದಾಗ ಅವರು ಸುಮ್ಮನೆ ಕೂರಲಿಲ್ಲ. ರೈತರ ಹಾಗೂ ಸಂತ್ರಸ್ತರ ಬಳಿಗೆ ತೆರಳಿ ಅವರ ನೋವನ್ನು ಆಲಿಸಿದರು. ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ನೀಡಿದರು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಸಮರ್ಪಕ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

“ಯುವಕರ ಭವಿಷ್ಯದ ಜೊತೆ ಚೆಲ್ಲಾಟ: KPSC ಅಕ್ರಮಕ್ಕೆ ಕಡಿವಾಣ ಹಾಕಿ”

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳ ಆರೋಪಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ.

ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಯುವಕರ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ನೇಮಕಾತಿ ಅಕ್ರಮಗಳಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

“ಬಿಜೆಪಿ ಪಾದಯಾತ್ರೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಮುಂದಿನ ದೊಡ್ಡ ರಾಜೀನಾಮೆಗೆ ಸಿದ್ಧರಾಗಿ”

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ಬಿಜೆಪಿ ಪಾದಯಾತ್ರೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಸಂಪುಟದ ದೊಡ್ಡ ಸಚಿವರೊಬ್ಬರು ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ; ಇದನ್ನು ಬರೆದಿಟ್ಟುಕೊಳ್ಳಿ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಜನರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅಧಿಕಾರದಲ್ಲಿ ಮುಂದುವರಿಯಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಿಲ್ಲ. ಭ್ರಷ್ಟಾಚಾರ ಮತ್ತು ಜನವಿರೋಧಿ ಆಡಳಿತದ ವಿರುದ್ಧ ಬಿಜೆಪಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.

ಕಾಂಗ್ರೆಸ್‌ನ ಐದು ಗ್ಯಾರಂಟಿಗೆ ಬಿಜೆಪಿಯ ಆರನೇ ಗ್ಯಾರಂಟಿ; 2028ರಲ್ಲಿ ಎನ್‌ಡಿಎ ಸರ್ಕಾರ

ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿಗಳ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತದೆ. ಆದರೆ ರಾಜ್ಯದ ಜನರಿಗೆ ನಾನು ಆರನೇ ಗ್ಯಾರಂಟಿ ನೀಡುತ್ತೇನೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಇದು ಬಿಜೆಪಿಯ ಮಾತಲ್ಲ; ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಬೇಸತ್ತು ನೀಡಲಿರುವ ತೀರ್ಪು. ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ಮತ್ತು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

“ಬಿಜೆಪಿ ಹೋರಾಟ ಕಾಂಗ್ರೆಸ್ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೂ ಮುಂದುವರಿಯಲಿದೆ”

ಲಿಂಗಸುಗೂರಿನಿಂದ ಆರಂಭವಾಗಿರುವ ಈ ಪಾದಯಾತ್ರೆ ರಾಜ್ಯದ ಜನರ ಧ್ವನಿಯಾಗಿದೆ. ಇದು ಕೇವಲ ಬಿಜೆಪಿ ಕಾರ್ಯಕರ್ತರ ಪಾದಯಾತ್ರೆಯಲ್ಲ; ರೈತರು, ದಲಿತರು, ಬಡವರು, ಯುವಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ನಡೆಯುತ್ತಿರುವ ಜನಪರ ಹೋರಾಟ.

ಈ ಪಾದಯಾತ್ರೆ ಕರ್ನಾಟಕದ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆಯಲಿದೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತವನ್ನು ಬುಡಸಮೇತ ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.