ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಸಿಎಂ ಡಿಕೆಶಿ

DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jul 18, 2025 8:29 PM

ಬೆಂ.ದಕ್ಷಿಣ (ಚನ್ನಪಟ್ಟಣ): ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು (Old Student Association) ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಡಾ. ವೆಂಕಟಪ್ಪ ಅವರು ತಮ್ಮ ಕಣ್ವ ಫೌಂಡೇಶನ್‌ನಿಂದ ನಿರ್ಮಿಸಿರುವ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ, ಅವರು ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ಓದಿ ದೊಡ್ಡ ಮಟ್ಟಕ್ಕೆ ಬೆಳೆದಿರುವವರು ಆ ಶಾಲೆಯ ಕಲ್ಯಾಣಕ್ಕೆ ಅಗತ್ಯ ನೆರವು ನೀಡುತ್ತಾರೆ. ಇದಕ್ಕೆ ಅಗತ್ಯ ಸಂಘಟನೆ ಆಗಬೇಕು. ವೆಂಕಟಪ್ಪನವರು ಮಾಡಿರುವ ಸಾಹಸಕ್ಕೆ ಇನ್ನು ಹೆಚ್ಚಿನ ಜನ ಕೈ ಹಾಕಬೇಕು. ಇಂತಹ ಕೆಲಸಗಳು ಸಮಾಜದಲ್ಲಿ ಅವರ ಹೆಸರುಗಳನ್ನು ಶಾಶ್ವತವಾಗಿ ಉಳಿಸುತ್ತವೆ ಎಂದು ತಿಳಿಸಿದರು.

ಮಕ್ಕಳ ಕೈಯಲ್ಲಿ ಈ ಶಾಲೆ ಉದ್ಘಾಟನೆ ಮಾಡಿಸಿದ್ದೇವೆ. ನನ್ನಂತೆಯೇ ಈ ಊರಿನ ಮಕ್ಕಳು ಬೆಳೆಯಬೇಕು ಎಂಬ ವೆಂಕಟಪ್ಪನವರ ದೂರದೃಷ್ಟಿಯಿಂದ ಈ ಜ್ಯೋತಿಯನ್ನು ಬೆಳಗಿಸಲಾಗಿದೆ. ಶುಭಂ ಕರೋತಿ ಕಲ್ಯಾಣಂ ಆರೋಗ್ಯ, ಧನಸಂಪದಂ. ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಃ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ ಎಂದು ಇಲ್ಲಿರುವ ಎಲ್ಲಾ ಹಿರಿಯರು ಆಶೀರ್ವಾದ ಮಾಡಿದ್ದೇವೆ.

ʼದೀಪದಿಂದ ಜ್ಯೋತಿ ಬೆಳಗುತ್ತಿದ್ದು, ಅಕ್ಷರದಿಂದ ಬದುಕು ಬೆಳಗುತ್ತದೆ. ನಿಮ್ಮ ಶಿಕ್ಷಕರು ಹೇಳಿಕೊಟ್ಟ ಅಕ್ಷರದಿಂದ ನಿಮ್ಮ ಬದುಕು ಬೆಳಗಲಿ. ಎದೆಯೊಳಗೆ ಅಕ್ಷರ, ಭೂಮಿಗೆ ಬಿದ್ದ ಬೀಜ ಇಂದಲ್ಲ ನಾಳೆ ಫಲ ಕೊಟ್ಟೇ ಕೊಡುತ್ತದೆ. ನಾವು ಎಷ್ಟೇ ದೊಡ್ಡವರಾದರೂ ಕೊನೆಗೆ ಶಿಕ್ಷಕರಿಗೆ ಕೊಡುವ ಸ್ಥಾನಮಾನವನ್ನು ಬೇರೆಯವರಿಗೆ ನೀಡುವುದಿಲ್ಲ. ಅನ್ನ ಹೊಟ್ಟೆ ತುಂಬಿಸುತ್ತದೆ. ಆದರೆ ಅಕ್ಷರ ಹೊಟ್ಟೆ ತುಂಬಿಸಲು ಮಾರ್ಗದರ್ಶನ ನೀಡುತ್ತದೆ. ಇಡೀ ರಾಜ್ಯದಲ್ಲಿ 2 ಸಾವಿರ ಸಿಎಸ್ಆರ್ ಶಾಲೆ ನಿರ್ಮಿಸಲು ಸರ್ಕಾರ ಸಂಕಲ್ಪ ಮಾಡಿದೆ. ಶಿಕ್ಷಣ ನನ್ನ ನೆಚ್ಚಿನ ಕ್ಷೇತ್ರ. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣ ಪ್ರೇಮಿ, ಆಸಕ್ತಿಯಲ್ಲಿ ರಾಜಕಾರಣಿ ಎಂದು ಹೇಳುತ್ತಿರುತ್ತೇನೆ. ನನಗೆ ಉತ್ತಮ ಶಿಕ್ಷಣ ಕೊಡಿಸಲು ನಮ್ಮ ತಂದೆ ತಾಯಿ ನನ್ನನ್ನು ಬೆಂಗಳೂರಿನಲ್ಲಿ ಶಾಲೆಗೆ ಸೇರಿಸಿದರು. ನಾನು ಕಲಿತ ಸ್ವಲ್ಪ ವಿದ್ಯೆಯಿಂದ ಇಲ್ಲಿಯವರೆಗೂ ಬೆಳೆದಿದ್ದೇನೆʼ ಎಂದರು.

ಸಿಎಸ್ಆರ್ ಶಾಲೆ ನಿರ್ಮಿಸಬೇಕು ಎಂದು ಸಚಿವ ಸಂಪುಟ ಉಪ ಸಮಿತಿ ಮಾಡಿ ನನ್ನದೇ ಆದ ರೂಪುರೇಷೆಗಳನ್ನು ನೀಡಿದ್ದೇನೆ. ಮನಮೋಹನ್ ಸಿಂಗ್ ಅವರ ಸರ್ಕಾರ ದೊಡ್ಡ ಕಂಪನಿಗಳಿಗೆ ವಾರ್ಷಿಕವಾಗಿ ಶೇ.2ರಷ್ಟು ಹಣವನ್ನು ಸಿಎಸ್ಆರ್ ಕಾರ್ಯಕ್ರಮ ರೂಪಿಸುವಂತೆ ಮಾಡಿದರು ಎಂದು ಹೇಳಿದರು.

ಬೆಂಗಳೂರು, ಚನ್ನಪಟ್ಟಣದ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಕೆಂಗಲ್ ಹನುಮಂತಯ್ಯ ಅವರು ನಗರಸಭೆ ಅಧ್ಯಕ್ಷರಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 6 ಲಕ್ಷ ಮಾತ್ರ ಇತ್ತು. ಇಂದು 1.40 ಕೋಟಿಗೆ ಏರಿದೆ. ಇದನ್ನು ನಿಯಂತ್ರಿಸಬೇಕು. ಜನ ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ವಲಸೆ ಬರುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡಿದರೆ ಈ ವಲಸೆ ತಪ್ಪಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ʼನಾವು ಶಾಲೆಗಳಿಗಾಗಿ ಕೆಲವು ಜಾಗ ದಾನ ಮಾಡಿದ್ದೇವೆ. ಆದರೆ ವೆಂಕಟಪ್ಪನವರು ನಿಸ್ವಾರ್ಥದಿಂದ ಸರ್ಕಾರಿ ಶಾಲೆ ನಿರ್ಮಾಣಕ್ಕೆ 14 ಕೋಟಿ ವೆಚ್ಚ ಮಾಡಿರುವುದು ನಿಜಕ್ಕೂ ಶ್ಲಾಘನೀಯʼ ಎಂದರು.

ಪ್ರತಿ ಶಾಸಕರ ಕ್ಷೇತ್ರಕ್ಕೆ ಸಿಎಂ 50 ಕೋಟಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, ʼನಾವು ಬಜೆಟ್‌ನಲ್ಲಿ ಈ ತೀರ್ಮಾನ ಮಾಡಿದ್ದೆವು. ಇದಕ್ಕಾಗಿ ಸುಮಾರು 8 ಸಾವಿರ ಕೋಟಿಯಷ್ಟು ಅನುದಾನ ಮೀಸಲಿಡಲಾಗಿತ್ತು. ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರಿಗೆ ಈ ಅನುದಾನ ನೀಡುತ್ತೇವೆ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಶಾಸಕರ ವಿವೇಚನೆಗೆ ಅವಕಾಶ ನೀಡಿ ಅನುದಾನ ನೀಡಲಾಗಿದೆʼ ಎಂದರು.

ಬಿಜೆಪಿ ಶಾಸಕರಿಗೆ ಅನುದಾನ ನೀಡಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌ ಅವರು, ʼಈಗಷ್ಟೇ ಅನುದಾನ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಎಲ್ಲರೂ ತಾಳ್ಮೆಯಿಂದ ಇರಬೇಕು. ಅವರ ಕಾಲದಲ್ಲಿ ಅವರು ಎಷ್ಟು ಕೊಟ್ಟಿದ್ದರು ಎಂದು ಹೇಳಲಿ. ನನ್ನ ಕ್ಷೇತ್ರಕ್ಕೆ ನಿಗದಿಯಾಗಿದ್ದ ಮೆಡಿಕಲ್ ಕಾಲೇಜನ್ನು ಅವರು ಕಿತ್ತುಕೊಂಡರು. ಅವರು ಅದನ್ನು ಮರೆತಿದ್ದಾರಾ? ನಾವು ಆ ಕೆಲಸ ಮಾಡುವುದಿಲ್ಲʼ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾಲಿ ಇದೆ 2,500 ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ

ಬೆಂಗಳೂರಿನ 40 ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿರುವ ಬಗ್ಗೆ ಕೇಳಿದಾಗ, ʼಯಾರೂ ಈ ಬಗ್ಗೆ ಗಾಬರಿಯಾಗುವ ಅಗತ್ಯವಿಲ್ಲ. ನಮ್ಮ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದ್ದಾರೆʼ ಎಂದು ಹೇಳಿದರು.‌ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟೀಸ್ ನೀಡಿರುವ ಬಗ್ಗೆ ಕೇಳಿದಾಗ, ʼನಾನು ಈ ವಿಚಾರದ ಬಗ್ಗೆ ಅಧ್ಯಯನ ಮಾಡುತ್ತಿದ್ದು, ನಂತರ ಇದಕ್ಕೆ ಪ್ರತಿಕ್ರಿಯೆ ನೀಡುತ್ತೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.