ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

World Kidney Day: ವಿಶ್ವ ಕಿಡ್ನಿ ದಿನಾಚರಣೆ: ಜಾಗೃತಿಗಾಗಿ ಬೃಹತ್ ವಾಕ್‌ಥಾನ್

World Kidney Day: ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಬೆಂಗಳೂರಿನ ಎನ್‌ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ವಾಕ್ ಥಾನ್ ಆಯೋಜಿಸಿತ್ತು. ಈ ಕುರಿತ ವಿವರ ಇಲ್ಲಿದೆ.

ವಿಶ್ವ ಕಿಡ್ನಿ ದಿನಾಚರಣೆ: ಜಾಗೃತಿಗಾಗಿ ಬೃಹತ್ ವಾಕ್‌ಥಾನ್

Profile Siddalinga Swamy Mar 12, 2025 8:49 PM

ರಾಮನಗರ: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕಿಡ್ನಿ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎನ್‌ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಆರಂಭವಾಗಿ ನಗರದ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ವಾಕ್ ಥಾನ್ ಆಯೋಜಿಸಿತ್ತು. ವಿಶ್ವ ಕಿಡ್ನಿ ದಿನಾಚರಣೆಯ (World Kidney Day) ಹಿನ್ನೆಲೆಯಲ್ಲಿ ಆಯೋಜನೆಗೊಂಡ ಈ ವಾಕ್‌ಥಾನ್‌ಗೆ ರಾಮನಗರದ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಚಂದ್ರಯ್ಯ ಆರ್. ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಆರೋಗ್ಯವೇ ಭಾಗ್ಯ ಎಂಬ ಮಾತು ಎಂದಿಗೂ ಅನ್ವಯಿಸುವಂಥದ್ದು. ಅಧಿಕಾರ, ಸಂಪತ್ತು, ಹಣ ಕಳೆದುಕೊಂಡರೆ ಮತ್ತೆ ಗಳಿಸಬಹುದು. ಆದರೆ ಆರೋಗ್ಯ ಕಾಪಾಡಿಕೊಳ್ಳುವುದು ಮಾತ್ರ ಅತೀ ಮುಖ್ಯ. ಗಂಭೀರ ಸಮಸ್ಯೆಗಳಿಗೆ ತುತ್ತಾಗಿ ಆಪತ್ತು ತಂದುಕೊಳ್ಳುವುದಕ್ಕಿಂತ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರಂಭದಲ್ಲೇ ತೊಂದರೆಗೆ ಚಿಕಿತ್ಸೆ ಪಡೆಯಬಹುದು. ಎನ್‌ಯು ಆಸ್ಪತ್ರೆಯು ಆಯೋಜಿಸಿರುವ ಈ ವಾಕ್ ಥಾನ್ ಅರ್ಥಪೂರ್ಣವಾದದ್ದು. ಈ ಮೂಲಕ ಸಾರ್ವಜನಿಕರು ಕಿಡ್ನಿಯ ಮಹತ್ವ ಅರಿತುಕೊಳ್ಳಬೇಕು ಎಂದರು.

ಈ ವರ್ಷದ ಕಿಡ್ನಿ ದಿನದ ವಿಷಯ ನಿಮ್ಮ ಕಿಡ್ನಿಗಳು ಆರೋಗ್ಯವಾಗಿವೆಯೇ? ಬೇಗ ಪರೀಕ್ಷಿಸಿ, ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿʼ ಎಂಬುದರ ಕುರಿತು ಮಾತನಾಡಿದ ಎನ್‌ಯು ಆಸ್ಪತ್ರೆಯ ಹಿರಿಯ ಯೂರಾಲಜಿಸ್ಟ್ ಡಾ ವಿನೋದ್ ಕುಮಾರ್ ಪಿ. ಮಾತನಾಡಿ, ದೇಶದಲ್ಲಿ ಸುಮಾರು 20 ರಿಂದ 25 ಕೋಟಿ ಜನಗಳು ಒಂದಿಲ್ಲಾ ಒಂದು ರೀತಿಯ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಿಡ್ನಿ ಆರೋಗ್ಯ ಅದೆಷ್ಟು ಮುಖ್ಯವೆಂದರೆ ಹೃದಯ ಹಾಗೂ ಮೆದುಳಿಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತೇವೆಯೋ ಅಷ್ಟೇ. ಆದಕಾರಣ ಕಿಡ್ನಿ ಸಮಸ್ಯೆಗಳನ್ನ ನಿರ್ಲಕ್ಷಿಸುವುದು ಅಪಾಯಕಾರಿ. ನಿಯಮಿತವಾಗಿ ಪರೀಕ್ಷಿಸಿಕೊಳ್ಳುವ ಮೂಲಕ ಅಪಾಯ ಎದುರಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.

ಎನ್‌ಯು ಆಸ್ಪತ್ರೆಯ ಡಾ ನಿತಿನ್ ನಾಯಕ್ ಮಾತನಾಡಿ, ನೀರು ಸೇವನೆ ಕಿಡ್ನಿ ಆರೋಗ್ಯಕ್ಕೆ ಅದೆಷ್ಟು ಸಹಕಾರಿ ಎಂಬುದನ್ನು ಒತ್ತಿ ಹೇಳಿದರು. ʼಕಿಡ್ನಿಗೆ ಸಂಬಂಧಿಸಿದ ಇಂದಿನ ಅನೇಕ ಸಮಸ್ಯೆಗಳಿಗೆ ಮೂಲ ಕಾರಣವೇ ಜೀವನಶೈಲಿ. ಹೀಗಾಗಿ ಆರೋಗ್ಯಕರ ಡಯಟ್ ಪಾಲಿಸುವುದು ತುಂಬಾನೇ ಮುಖ್ಯ. ಹಾಗೇ ಸಾಧ್ಯವಾದಷ್ಟು ನೀರನ್ನು ಹೆಚ್ಚು ಸೇವಿಸಿ. ಜಂಕ್ ಫುಡ್ ಸಂಪೂರ್ಣ ಕಡಿಮೆ ಮಾಡಿ. ಬೊಜ್ಜು ಬರದಂತೆ ಎಚ್ಚರವಹಿಸಿ. ಈ ಮೂಲಕ ಕಿಡ್ನಿ ಆರೋಗ್ಯವಾಗಿರುವಂತೆ ನೋಡಿಕೊಳ್ಳಬಹುದುʼ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಮಾತನಾಡಿದರು.

ಈ ಸುದ್ದಿಯನ್ನೂ ಓದಿ | Karnataka Weather: ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು; ರಾಜ್ಯದಲ್ಲಿ ಮುಂದಿನ 6 ದಿನ ಹೇಗಿರಲಿದೆ ಹವಾಮಾನ?

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಶ್ರೀಧರ್ ಬಿ.ಎನ್., ಕರ್ನಾಟಕ ಐಎಂಎ ಉಪಾಧ್ಯಕ್ಷ ಡಾ. ಮಳವೇಗೌಡ, ರಾಮನಗರ ಐಎಂಎ ಅಧ್ಯಕ್ಷ ಡಾ.ಸಂಪಂಗಿ ರಾಮಯ್ಯ, ರಾಮನಗರ ಐಎಂಎ ಕಾರ್ಯದರ್ಶಿ ಡಾ.ಮಧುಸೂದನ್, ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್‌ನ ಡಾ. ಮಹಮ್ಮದ್ ಸೈಯ್ಯದ್ ಅಹಮದ್ ಎನ್. ಹಾಗೂ ಆರ್.ಪಿ. ಪ್ರದೀಪ್ ಉಪಸ್ಥಿತರಿದ್ದರು. ವಾಕ್‌ ಥಾನ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.