ಬೆಂಗಳೂರು : 2028ಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ (2028 elections) ನಡೆಯಲಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ನಾನೇ ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿ ಆಗಿರುತ್ತೇನೆ. ಅಲ್ಲದೆ 2028ರಲ್ಲಿ ವಿಧಾನಸಭೆ ಚುನಾವಣೆಯೂ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದಿದ್ದರು. ಇದೀಗ ಸತೀಶ್ ಜಾರಕಿಹೊಳಿ ಕೂಡ 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಬಾರಿಯೂ ಅವರೇ ಸಿಎಂ ಆಗುತ್ತಾರೆ ಅಂತ ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಮುಗೀತು, ಆ ಕುರಿತು ಮತ್ತೆ ಚರ್ಚೆ ಮಾಡುವಂತಿಲ್ಲ ಎಂದು ಹೇಳಿದರು.
ನಾಯತ್ವ ಬದಲಾವಣೆ ಬಗ್ಗೆ ಹೆಚ್ಚು ಮಂದಿ ಮಾತನಾಡಿಲ್ಲ. ಶೇ.10 ರಷ್ಟು ಜನ ಮಾತನಾಡಿದ್ದಾರೆ. ಸುರ್ಜೇವಾಲಾ ಅವರೊಂದಿಗೂ ಯಾರೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಎಲ್ಲರೂ ಅನುದಾನ, ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಶೇ.10ರಷ್ಟು ಮಂದಿ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಅವರೆಲ್ಲರಿಗೂ ಸಿದ್ದರಾಮಯ್ಯ ಹೇಳಿಕೆಯಿಂದ ಕ್ಲಿಯರ್ ಸಂದೇಶ ನೀಡಿದಂತಾಗಿದೆ. ಸಿದ್ದರಾಮಯ್ಯ ಸಂದೇಶದಿಂದ ಮ್ಯಾಚ್ ಕ್ಲೋಸ್ ಎಂದರ್ಥ ಎಂದು ಹೇಳಿದರು.
ಇದನ್ನೂ ಓದಿ: CM Siddaramaiah: ʼʼಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ; ಡಿಕೆಶಿ ಕೂಡ ಇದನ್ನೇ ಹೇಳಿದ್ದಾರೆʼʼ: ಸಿದ್ದರಾಮಯ್ಯ ಸ್ಪಷ್ಟನೆ