ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kurubara Sangha: 34 ಕೋಟಿ ರೂ. ವೆಚ್ಚದಲ್ಲಿ ಕುರುಬರ ಸಂಘದ ನೂತನ ಕಟ್ಟಡ ನಿರ್ಮಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

Kurubara Sangha: ಕಾಗಿನೆಲೆ ಗುರುಪೀಠದ ಶಾಖಾಮಠದ ಭಕ್ತರ ಭಂಡಾರದ ಕುಟೀರಕ್ಕೆ ಹಿಂದೆ ನಾನೇ ಶಂಕುಸ್ಥಾಪನೆ ಮಾಡಿ, ಈಗ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಕಾಗಿನೆಲೆ ಗುರುಪೀಠದ ಸ್ವಾಮಿಗಳು ಶಾಖಾಮಠದ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬರ ಸಂಘದ ನೂತನ ಕಟ್ಟಡ  ನಿರ್ಮಿಸಲು ಕ್ರಮ: ಸಿಎಂ

Profile Prabhakara R Jul 6, 2025 10:34 PM

ಬೆಂಗಳೂರು, ಜುಲೈ 6: ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಸಮಾಜದ ಬಂಧುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತಾವರೆಕೆರೆ ಬಳಿಯ ಕೆತೋಹಳ್ಳಿಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ ಕೇಶದ ತಾರಕಾನಂದಪುರಿ ಮಹಾಸ್ವಾಮಿಗಳ 19ನೇ ವರ್ಷದ ಪುಣ್ಯರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ ಭಂಡಾರದ ಕುಟೀರವನ್ನು (Kurubara Sangha) ಲೋಕಾರ್ಪಣೆ ಮಾಡಿದ ನಂತರ ಸಿಎಂ ಮಾತನಾಡಿದರು.

ಕಾಗಿನೆಲೆ ಗುರುಪೀಠದ ಶಾಖಾಮಠದ ಭಕ್ತರ ಭಂಡಾರದ ಕುಟೀರಕ್ಕೆ ಹಿಂದೆ ನಾನೇ ಶಂಕುಸ್ಥಾಪನೆ ಮಾಡಿ, ಈಗ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಕಾಗಿನೆಲೆ ಗುರುಪೀಠದ ಸ್ವಾಮಿಗಳು ಶಾಖಾಮಠದ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. 10 ಕೋಟಿ ರೂ.ಬೆಲೆಬಾಳುವ ಆಸ್ತಿಯನ್ನು ಒಂದು ಎಕರೆ ಜಾಗವನ್ನು ಮಹೇಶ್ ಅವರು ಕೊಟ್ಟಿದ್ದು ಶ್ಲಾಘನೀಯ. ಅವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಮುಖ್ಯಮಂತಿಗಳು ಅರ್ಪಿಸಿದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಯಾವುದೇ ಕಟ್ಟಡಗಳನ್ನು ಅತ್ಯಂತ ಕ್ಷಿಪ್ರವಾಗಿ ಕಟ್ಟುತ್ತಾರೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು, ಎರಡೇ ವರ್ಷಗಳಲ್ಲಿ ಭಕ್ತರಿಂದ ವಂತಿಗೆ ಪಡೆದು ನಿರ್ಮಾಣ ಮಾಡಿದ್ದಾರೆ. ಸಚಿವ ಸುರೇಶ್ ಅವರು 50 ಲಕ್ಷ ರೂ.ಗಳ ದೇಣಿಗೆ ನೀಡಿದ್ದು, ಈ ಕಾರ್ಯಕ್ಕೆ ವಂತಿಗೆ ನೀಡಿದ ಎಲ್ಲರಿಗೂ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಅರ್ಪಿಸಿದರು. ಕುಟೀರವನ್ನು ನಿರ್ಮಾಣ ಮಾಡಲು ಎಲ್ಲರ ಸಹಾಯ ಪಡೆದಿದ್ದಾರೆ. ಸುಮಾರು 4 ಕೋಟಿ ಯಷ್ಟು ಹಣವನ್ನು ವೆಚ್ಚ ಮಾಡಿದ್ದು, ಇತರರು ವಸ್ತುಗಳ ರೂಪದಲ್ಲಿ ದೇಣಿಗೆ ನೀಡಿದ್ದಾರೆ.

CM Siddaramaiah (34)

ಮಠ ಬೆಳೆಯಬೇಕು. ಬೆಳೆಯಬೇಕಾದರೆ ಜನರಿಂದಲೇ ಬೆಳೆಯಬೇಕು. ಮಠಮಾನ್ಯಗಳು ಬೆಳೆಯಬೇಕಾದರೆ ಜನರಿಂದ ಮಾತ್ರ ಸಾಧ್ಯ. ಸರ್ಕಾರದ ಮೇಲೆ ಅವಲಂಬಿತವಾದರೆ ಬೆಳೆಯಲು ಸಾಧ್ಯವಿಲ್ಲ. 1992ರಲ್ಲಿ ಪ್ರಾರಂಭವಾದ ಮಠವನ್ನು ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 25 ಲಕ್ಷ ರೂ.ಗಳ ನೀಡಲು ಮುಂದಾದಾಗ, ಅದನ್ನು ನಿರಾಕರಿಸಲಾಯಿತು ಎಂದು ಸ್ಮರಿಸಿದರು. ಉದ್ಯಮಿ ಹರಿ ಖೋಡೆಯವರು ಮಠ ಕುರುಬರ ಮಠವಲ್ಲ, ದಲಿತರು, ಅಲ್ಪಸಂಖ್ಯಾತರು ಹಾಗೂ ಮಠವನ್ನು ಹೊಂದಿಲ್ಲದವರಿಗೆ ಸೇರಿದ ಮಠ ಎಂದು ಘೋಷಣೆ ಮಾಡಿದ್ದರು ಎಂದು ತಿಳಿಸಿದರು.

ಜನರಲ್ಲಿ ಜಾಗೃತಿ ಮೂಡಿಸಲು ಮಠದ ಅಗತ್ಯವಿದೆ

ಜನರಲ್ಲಿ ಜಾಗೃತಿ ಮೂಡಿಸಲು ಮಠದ ಅಗತ್ಯವಿದೆ. ಶಿಕ್ಷಣ, ಆರೋಗ್ಯ, ಸಂಘಟನೆ ಸಾಧ್ಯವಾಗುತ್ತಿರಲಿಲ್ಲ. ಜಾತ್ಯತೀತ ಸಮಾಜ ನಿರ್ಮಾಣ ಮಾಡಬೇಕು ಎಂದು ಬಸವಾದಿ ಶರಣರು, ಕನಕದಾಸರು, ಮಹಾತ್ಮ ಗಾಂಧಿ, ಅಂಬೇಡ್ಕರ್ ಹಾಗೂ ಸಂವಿಧಾನ ಹೇಳಿರುವುದು. ಸರ್ವೋದಯವಾಗಬೇಕೆಂದು ಇವರೆಲ್ಲರೂ ಕರೆ ನೀಡಿದ್ದರು. ಕುವೆಂಪು ಅವರು ಸರ್ವರಿಗೂ ಸಮಪಾಲು, ಸಮಬಾಳು ಇರಬೇಕೆಂದು ಕರೆ ನೀಡಿದರು. ಅಂತಿಮವಾಗಿ ಸಮ ಸಮಾಜ ನಿರ್ಮಾಣವಾಗಬೇಕು ಎಂದರು. ವಿಚಾರ ಕ್ರಾಂತಿಕಾರರನ್ನು ನೆನೆದು ಸ್ಫೂರ್ತಿ ಪಡೆಯುವ ಕೆಲಸವಾಗಬೇಕು ಎಂದರು.

ಶಿಕ್ಷಣ ಪಡೆದು ಗುಲಾಮಗಿರಿಯಿಂದ ದೂರವಾಗಬೇಕು

ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಜಾತಿಯತೆ ವಾಸ್ತವವಾಗಿದ್ದು, ಶಿಕ್ಷಣ, ಸಂಘಟನೆ, ಹೋರಾಟಗಳನ್ನು ಶೋಷಿತ ವರ್ಗದ ಜನರು ಪಾಲಿಸಬೇಕಾದ ಅಂಶಗಳು. ಇಲ್ಲದಿದ್ದರೆ ಜಾತಿ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಶೋಷಿತ ವರ್ಗಗಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ. ವಿದ್ಯೆಯಿಂದ ಮಾತ್ರ ಸ್ವಾಭಿಮಾನ ಬೆಳೆದು ಮನುಷ್ಯರಾಗಲು ಸಾಧ್ಯ. ಇಲ್ಲವೇ ಗುಲಾಮಗಿರಿ ನಮ್ಮಲ್ಲಿ ಮನೆಮಾಡುತ್ತದೆ. ಸಮುದಾಯವನ್ನು ಬೆಳೆಸಿ ಇತರರನ್ನು ಬೆಳೆಸಿ ಎಂದು ತಿಳಿಸಿದರು.

80 ಎಕರೆ ಸರ್ಕಾರಿ ಜಮೀನನ್ನು ವಿವಿಧ ಸಮಾಜದ ಮಠಮಾನ್ಯಗಳಿಗೆ ನೀಡಲು ಪರಿಶೀಲನೆ

ಕಾಗಿನೆಲೆ ಮಹಾಸಂಸ್ಥಾನದ ಪೀಠದ ವತಿಯಿಂದ ಸಮಾಜಮುಖಿ ಕೆಲಸಗಳಾಗುತ್ತಿರುವುದು ಶ್ಲಾಘನೀಯ. ಇದಕ್ಕೆ ಶ್ರಮಿಸುತ್ತಿರುವ ಜಗದ್ಗುರು ನಿರಂಜನಾನಂದ ಸ್ವಾಮಿ ಹಾಗೂ ಶಾಖಾಮಠದ ಸ್ವಾಮೀಜಿಗಳಿಗೆ ಅಭಿನಂದಿಸುತ್ತೇನೆ. ಮೈಸೂರಿನಲ್ಲಿ ಯಾಂದಳ್ಳಿ ಗ್ರಾಮದಲ್ಲಿ 12 ಎಕರೆ ಜಾಗವನ್ನು ನೀಡಲಾಗಿದ್ದು, ಭವನ ನಿರ್ಮಾಣವನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಬೆಂಗಳೂರಿನ ಬನಶಂಕರಿಯಲ್ಲಿ ಕಾನೂನು ಕಾಲೇಜು ಮತ್ತು ಯುಪಿಎಸ್‌ಸಿ ತರಬೇತಿಗಾಗಿ ಕಟ್ಟಡವನ್ನು ಈಗಾಗಲೇ ನಿರ್ಮಿಸಲಾಗಿದೆ. ಕುರುಬರ ಸಂಘದ ನೂತನ ಕಟ್ಟಡ ನಿರ್ಮಾಣವನ್ನು 34 ಕೋಟಿ ರೂ. ಕೈಗೆತ್ತಿಕೊಳ್ಳಲಾಗಿದೆ. ಮೈಸೂರು ಜಿಲ್ಲೆಯಲ್ಲಿ 300 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಮತ್ತು ಯುಪಿಎಸ್‌ಸಿ ತರಬೇತಿ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿರುವ ಶ್ರೀ ಕಾಗಿನೆಲೆ ಗುರುಪೀಠದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಬೆಂಗಳೂರು ದಕ್ಷಿಣ ತಾಲೂಕಿನ ವ್ಯಾಪ್ತಿಯಲ್ಲಿ 80 ಎಕರೆ ಸರ್ಕಾರಿ ಜಮೀನನ್ನು ವಿವಿಧ ಸಮಾಜದ ಮಠಮಾನ್ಯಗಳಿಗೆ ಹಂಚುವ ಬಗ್ಗೆ ಸರ್ಕಾರ ಪರಿಶೀಲಿಸಿದೆ. ವಿವಿಧ ಸಮಾಜದ ಸ್ವಾಮೀಜಿಗಳು ಕೋರಿದಂತೆ ಸಮಾಜದ ಅಭಿವೃದ್ಧಿಗೆ ಅನುದಾನವನ್ನು ನೀಡಲು ಪರಿಶೀಲಿಸಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ | CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ: ಸಿದ್ದರಾಮಯ್ಯ ನೇಮಕ ಕುರಿತು ಕಾಂಗ್ರೆಸ್‌ ಸ್ಪಷ್ಟನೆ

ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷ ಜಗದ್ಗುರು ನಿರಂಜನಾನಂದ ಸ್ವಾಮಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ, ಸಚಿವರಾದ ಬೈರತಿ ಸುರೇಶ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವ ಬಂಡೆಪ್ಪ ಕಾಶ್ಯಂಪುರ, ಬಸವರಾಜ ಶಿವಣ್ಣ, ಹುಲಿನಾಯ್ಕರ್, ಆರ್.ಶಂಕರ್, ಶಾಸಕರಾದ ಮಂಜುನಾಥ್, ಶ್ರೀನಿವಾಸ್, ಭೀಮಸೇನಾ ಚಿಮ್ಮನಕಟ್ಟಿ ಸೇರಿ ಗಣ್ಯರು ಉಪಸ್ಥಿತರಿದ್ದರು.