ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸುಳ್ಳು ಸುದ್ದಿ, ದ್ವೇಷ ಭಾಷಣದ ವಿರುದ್ಧ ಕಾನೂನು ಕ್ರಮ ಜರುಗಿಸಿ: ಸಿಎಂ ಸೂಚನೆ

CM Siddaramaiah: ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರಿಸಬೇಕು. ಮಾದಕ ದ್ರವ್ಯ ದಂಧೆಯನ್ನು ಮಟ್ಟ ಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸುಳ್ಳು ಸುದ್ದಿ, ದ್ವೇಷ ಭಾಷಣದ ವಿರುದ್ಧ ಕಾನೂನು ಕ್ರಮ ಜರುಗಿಸಿ: ಸಿಎಂ

Profile Prabhakara R May 31, 2025 9:26 PM

ಬೆಂಗಳೂರು: ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ (fake news and hate speech) ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.

ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆಯಲ್ಲಿ ಮಾತನಾಡಿರುವ ಅವರು, ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರಿಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸಂಬಂಧ ಕಾನೂನು ತಿದ್ದುಪಡಿ ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

2023ರಲ್ಲಿ 6767 ಪ್ರಕರಣಗಳು, 2024ರಲ್ಲಿ 4188 ಪ್ರಕರಣಗಳು ದಾಖಲಾಗಿವೆ. ಈ ವರ್ಷ ಇದುವರೆಗೆ 1793 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಗಳಲ್ಲಿ ಮಾದಕ ದ್ರವ್ಯ ದಂಧೆಯನ್ನು ಮಟ್ಟ ಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕಾಯ್ದೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ. ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಜಿಲ್ಲಾಧಿಕಾರಿಗಳು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಎಲ್ಲಾ ಸಹಕಾರ ಪೊಲೀಸ್ ಇಲಾಖೆಗೆ ನೀಡಬೇಕು. ಗೂಂಡಾ ಕಾಯ್ದೆಯಡಿ ಬಾಕಿಯಿರುವ ಎಲ್ಲಾ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ.

ರೈಲ್ವೆ ಯೋಜನೆಗಳಿಗೆ ಕಾಲಮಿತಿಯೊಳಗೆ ಭೂಸ್ವಾಧೀನ ಕಾರ್ಯ ಮುಗಿಯಲಿ

ರಾಜ್ಯದಲ್ಲಿ ಒಟ್ಟು 9 ರೈಲ್ವೆ ಯೋಜನೆಗಳು ಅನುಷ್ಠಾನ ಹಂತದಲ್ಲಿದ್ದು, ಇದಕ್ಕೆ ಅಗತ್ಯವಾದ ಭೂಸ್ವಾಧೀನ ಕಾರ್ಯವನ್ನು ಆಯಾ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತಾಣಗಳನ್ನು ಗುರುತಿಸಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ. ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಸುರಕ್ಷತಾ ಸಪ್ತಾಹಗಳನ್ನು ಕಾಟಾಚಾರಕ್ಕೆ ನಡೆಸಬಾರದು. ಅಪಘಾತಗಳು ಹೆಚ್ಚು ನಡೆಯುವ ಸ್ಥಳ (Black spots) ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಅಪಘಾತ ಪ್ರಮಾಣ ಯಾವುದೇ ಕಾರಣಕ್ಕೂ ಹೆಚ್ಚಾಗುವುದನ್ನು ಒಪ್ಪಲು ಸಾಧ್ಯವಿಲ್ಲ. ಇದಕ್ಕೆ ಜಿಲ್ಲಾಧಿಕಾರಿ ಅವರೇ ಹೊಣೆ ಎಂದು ಸಿಎಂ ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನೂ ಓದಿ | Karnataka Public Schools: ಸಿಎಸ್‌ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು ಕಠಿಣ ಕ್ರಮ ಕೈಗೊಂಡರೆ ಮೈಕ್ರೋ ಫೈನಾನ್ಸ್ ಹಾವಳಿಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮಟ್ಟ ಹಾಕಲು ಸಾಧ್ಯವಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ಕಾರ್ಮಿಕ ವರ್ಗಗಳನ್ನು ಗುರುತಿಸಲಾಗಿದ್ದು, ಇದುವರೆಗೆ 25,61,105 ಕಾರ್ಮಿಕರನ್ನು ನೋಂದಾಯಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಈ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು. ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು ಎಂದು ತಿಳಿಸಿದರು.