Actor Darshan: ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್?; ಆರೋಪಿಗಳ ಸ್ಥಳಾಂತರಕ್ಕೆ ಮುಂದಾದ ಜೈಲು ಅಧಿಕಾರಿಗಳು
Actor Darshan: ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್ಗೆ ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕವೇ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೋರ್ಟ್ ಅನುಮತಿ ನೀಡಿದರೆ ಆರೋಪಿಗಳನ್ನು ಜೈಲು ಅಧಿಕಾರಿಗಳು ಸ್ಥಳಾಂತರ ಮಾಡಲಿದ್ದಾರೆ.


ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ (Actor Darshan) ಮತ್ತು ಸಹ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದು, ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್ಗೆ ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಜೈಲು ಅಧಿಕಾರಿಗಳಿಂದ ನೇರವಾಗಿ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದೆ. ಬದಲಾಗಿ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ನ್ಯಾಯಾಲಯದ ಈ ಸೂಚನೆಯ ಮೇರೆಗೆ, ಜೈಲು ಸೂಪರಿಂಟೆಂಡೆಂಟ್ ಅವರು ಎಸ್ಪಿಪಿ ಅವರನ್ನು ಭೇಟಿ ಮಾಡಿ, ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಸ್ಥಳಾಂತರಕ್ಕೆ ಕಾರಣಗಳೇನು?:
ಆರೋಪಿಗಳ ರಾಜಾತಿಥ್ಯ ಮತ್ತು ಜೈಲು ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿಯ ರಾಜಾತಿಥ್ಯ ಪ್ರಕರಣವನ್ನು ಉಲ್ಲೇಖಿಸಿ, ಭದ್ರತಾ ಹಿತದೃಷ್ಟಿಯಿಂದ ಆರೋಪಿಗಳ ಸ್ಥಳಾಂತರ ಅತ್ಯಗತ್ಯ ಎಂದು ಮನವಿ ಮಾಡಲಾಗಿದೆ. ದರ್ಶನ್ ಅವರ ಜಾಮೀನು ರದ್ದು ಆದೇಶದ ಸಮಯದಲ್ಲಿ ಸುಪ್ರೀಂ ಕೋರ್ಟ್ ಜೈಲು ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಕಟುವಾಗಿ ಟೀಕಿಸಿತ್ತು. ನ್ಯಾಯಾಲಯದ ಈ ಖಂಡನೆಯಿಂದಾಗಿ, ಜೈಲು ಅಧಿಕಾರಿಗಳು ಯಾವುದೇ ಹೆಚ್ಚಿನ ವಿವಾದಗಳಿಗೆ ಅವಕಾಶ ನೀಡದಂತೆ ಆರೋಪಿಗಳನ್ನು ಬೇರೆಡೆಗೆ ವರ್ಗಾಯಿಸಲು ನಿರ್ಧರಿಸಿದ್ದಾರೆ.
ಈ ಸ್ಥಳಾಂತರದ ನಿರ್ಧಾರವು ಪ್ರಭಾವಿ ವ್ಯಕ್ತಿಗಳು ಬಂಧಿತರಾದಾಗ ಜೈಲುಗಳಲ್ಲಿ ಎದುರಾಗುವ ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಹೊಸ ದಿಕ್ಕನ್ನು ಸೂಚಿಸುತ್ತದೆ. ನ್ಯಾಯಾಲಯದ ಅಂತಿಮ ತೀರ್ಪು ಬಂದ ನಂತರವೇ ಈ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.
ಈ ಸುದ್ದಿಯನ್ನೂ ಓದಿ | Actor Darshan: ʼದಿ ಡೆವಿಲ್ʼ ಚಿತ್ರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ದರ್ಶನ್; ಪತಿಯ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮೀ
ಯಾರನ್ನು ಎಲ್ಲಿಗೆ ಶಿಫ್ಟ್ ಮಾಡಲಾಗುತ್ತದೆ?
ಆರೋಪಿಗಲ್ಲಿ ದರ್ಶನ್ ಬಳ್ಳಾರಿ ಜೈಲು, ಜಗದೀಶ್, ಲಕ್ಷ್ಮಣ್ ಶಿವಮೊಗ್ಗ ಜೈಲು, ನಾಗರಾಜ್ ಗುಲ್ಬರ್ಗಾ ಜೈಲು, ಪ್ರದೋಷ್ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧಿರಿದ್ದಾರೆ. ಪವಿತ್ರಾ ಗೌಡ, ಅನುಕುಮಾರ್ ಈ ಹಿಂದೆಯೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದರು.
ಜೈಲಿನಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖದೊಂದಿಗೆ ದಾಸನ ʼದರ್ಶನʼ, ನಗುಮೊಗದಲ್ಲಿ ಪವಿತ್ರಾ ಗೌಡ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಪುನಃ ಜೈಲು ಸೇರಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಇವರನ್ನು ಕಳುಹಿಸುವ ಮುನ್ನಾ ತೆಗೆದಿದ್ದ ಫೋಟೊಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಫೋಟೋದಲ್ಲಿ ನಟ ದರ್ಶನ್ (Actor Darshan) ಬೋಳು ತಲೆ, ಸುಕ್ಕುಗಟ್ಟಿದ ಮುಖ ಹಾಗೂ ಬಿಳಿಗಡ್ಡದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ ಅವರ ಗೆಳತಿ ಪವಿತ್ರಾ ಗೌಡ ಮಾತ್ರ ನಗುಮುಖದಲ್ಲಿರುವುದು ಕಂಡುಬಂದಿದೆ.
ನಟ ದರ್ಶನ್ ತೂಗುದೀಪ ಈ ಹಿಂದೆ ಜೈಲಿನಲ್ಲಿದ್ದಾಗ ವಿಗ್ ಧರಿಸಿಕೊಂಡಿದ್ದರು. ಆಗ ಪ್ರತಿಬಾರಿ ಅವರನ್ನು ಭೇಟಿಯಾಗಲು ಮನೆಯವರು ಜೈಲಿಗೆ ಹೋದಾಗ ವಿಗ್ ಹಾಕಿಕೊಂಡೇ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇದೀಗ ಜೈಲಿನೊಳಗೆ ಹೋಗುವ ಮುನ್ನ ನಟ ದರ್ಶನ್ ಅವರು ನಿಜರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ನಟಿ ಪವಿತ್ರಾ ಗೌಡ ಅವರು ಹಸನ್ಮುಖರಾಗಿಯೇ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಲು ಹೋದಾಗ ಮನೆಯಲ್ಲಿ ಮೇಕಪ್ ಮಾಡಿಕೊಂಡು ಅವರು ಹೊರಗೆ ಬಂದಿದ್ದರು. ಈ ವಿಚಾರವಾಗಿಯೂ ಅವರು ಟೀಕೆಗೆ ಗುರಿಯಾಗಿದ್ದರು. ಇದೀಗ ಅವರು ಜೈಲಿನಲ್ಲಿ ಫೋಟೊಗೆ ನಗುತ್ತಲೇ ಪೋಸ್ ನೀಡಿರುವುದು ಕಂಡುಬಂದಿದೆ.