Turuvekere News: ತುರುವೇಕೆರೆಯಲ್ಲಿ 11 ಟನ್ ಕಳಪೆ ರಸಗೊಬ್ಬರ ವಶ
Turuvekere News: ತುರುವೇಕೆರೆಯ ಶ್ರೀ ಸ್ವಾಮಿ ಅಯ್ಯಪ್ಪ ಫರ್ಟಿಲೈಸರ್ಸ್ ರಸಗೊಬ್ಬರ ಮಾರಾಟ ಮಳಿಗೆ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 11.25 ಟನ್ ಕಳಪೆ ರಸಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಇಲಾಖೆ ಅನುಮತಿ ಪಡೆಯದೆ ಕಳಪೆ ದರ್ಜೆಯ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ತುರುವೇಕೆರೆ: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ 1.15 ಲಕ್ಷ ಮೌಲ್ಯದ 11.25 ಟನ್ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ (Turuvekere News) ಶ್ರೀ ಸ್ವಾಮಿ ಅಯ್ಯಪ್ಪ ಫರ್ಟಿಲೈಸರ್ಸ್ ರಸಗೊಬ್ಬರ ಮಾರಾಟ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲಾಖೆ ಅನುಮತಿ ಪಡೆಯದೆ ಕಳಪೆ ದರ್ಜೆಯ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಬಂದ ದೂರಿನ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕರಾದ ಪುಟ್ಟರಂಗಪ್ಪ, ಅಶ್ವತ್ಥ್ನಾರಾಯಣ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ವಿಜಾಪುರ ಜಿಲ್ಲೆಯ ಮೆ. ಶಾಂತಿ ಜೀವನ್ ಆಗ್ರೋ ಫುಡ್ಸ್ ಅವರಿಂದ ಅನಧಿಕೃತವಾಗಿ ಸರಬರಾಜು ಆದ 225 ಬ್ಯಾಗ್ ಕಳಪೆ ದರ್ಜೆಯ ಹರಳು ರೂಪದ ರಸಗೊಬ್ಬರ ಮಾರಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು 1,15,425 ರೂ. ಬೆಲೆಯ 11.25 ಟನ್ ರಸಗೊಬ್ಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ದಾಳಿಯಲ್ಲಿ ತುರುವೇಕೆರೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ತಾಂತ್ರಿಕ ಅಧಿಕಾರಿ ಗಿರೀಶ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಈ ಸುದ್ದಿಯನ್ನೂ ಓದಿ | Haveri News: ದೇಗುಲ ಕಳಸಾರೋಹಣ ವೇಳೆ ಕ್ರೇನ್ ಬಕೆಟ್ ಮುರಿದು ವ್ಯಕ್ತಿ ಸಾವು, ಮತ್ತೊಬ್ಬ ಗಂಭೀರ
ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ 18 ಪೋಕ್ಸೊ ಪ್ರಕರಣ
ತುಮಕೂರು: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.2025ರ ಜನವರಿ ತಿಂಗಳಲ್ಲಿಯೇ 18 ಪ್ರಕರಣಗಳು ದಾಖಲಾಗಿವೆ ಎಂದು ನ್ಯಾಯಾಧೀಶರಾದ ನೂರುನ್ನಿಸಾ ಕಳವಳ ವ್ಯಕ್ತಪಡಿಸಿದರು.
ನಗರದ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊಬಿಲಿಟಿ ಇಂಡಿಯಾ, ತುಮಕೂರು ಘಟಕದವತಿಯಿಂದ ಆಯೋಜಿಸಿದ್ದ ತುಮಕೂರು ಶೈಕ್ಷಣಿಕ ಜಿಲ್ಲೆಯ ಪ್ರೌಢ ಶಾಲಾ ಹಂತದ ಮಕ್ಕಳ ರಕ್ಷಣಾ ಸಮಿತಿಯನ್ನು ಪ್ರತಿನಿಧಿಸುವ ಮಕ್ಕಳಿಗೆ ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು,ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ,ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆವಹಿಸುವಂತೆ ಕಿವಿ ಮಾತು ಹೇಳಿದರು.
ವಿಶ್ವಸಂಸ್ಥೆಯೊಂದಿಗಿನ ಒಪ್ಪಂದದಂತೆ ಮಕ್ಕಳಿಗೆ ಹಲವಾರು ಹಕ್ಕುಗಳನ್ನು ನೀಡಿದೆ. ಅದರಲ್ಲಿ ಪ್ರಮುಖವಾದುದ್ದು, ಘನತೆಯಿಂದ ಬದುಕುವ ಹಕ್ಕು, ಒಂದು ವೇಳೆ ನಿಮಗೆ ಗೊತ್ತಿಲ್ಲದೆಯೋ, ಗೊತ್ತಿದ್ದೋ, ಸಮಾಜಘಾತಕರೊಂದಿಗೆ ಸಂಪರ್ಕ ಪಡೆದರೆ, ಜೀವನವೀಡಿ,ಜೈಲು, ಕೋರ್ಟು,ವಿಚಾರಣೆ ಎಂದು ಓಡಾಡುವುದರಿಂದ ನಿಮಗೆ ವಿದ್ಯಾಭ್ಯಾಸವೂ ಕುಂಠಿತವಾಗಲಿದೆ.ಅಲ್ಲದೆ ನಿಮ್ಮ ಬಾಲ್ಯವೂ ಇಲ್ಲದಂತಾಗುತ್ತದೆ. .ಹಾಗಾಗಿ ಎಚ್ಚರಿಕೆಯ ಹೆಜ್ಜೆಗಳನ್ನಿಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಮಾತನಾಡಿ,ಇಡೀ ಭಾರತದಲ್ಲಿಯೇ ಮೊದಲ ಬಾರಿಗೆ 2016ರಲ್ಲಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ನೀತಿ-2016 ರೂಪಿಸಿದೆ. ನೀತಿ ರೂಪಿತವಾಗಿ 9 ವರ್ಷಗಳಾಗುತ್ತಾ ಬಂದಿದ್ದರೂ ಯಾವ ಶಾಲಾ, ಕಾಲೇಜುಗಳು ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗೂ ಸರಕಾರ ಪ್ರತಿವರ್ಷ ನವೆಂಬರ್ 14 ರಿಂದ ಜನವರಿ 31ರವರೆಗೆ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಿ, ಮಕ್ಕಳ ಅಭಿಪ್ರಾಯಗಳನ್ನು ಆಲಿಸಲು ಕ್ರಮ ಕೈಗೊಂಡಿದೆ. ರಾಜ್ಯದ 5927 ಗ್ರಾಮ ಪಂಚಾಯಿತಿಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆದಿದೆ. ಇದರ ಹಿಂದಿನ ಉದ್ದೇಶ ಮಕ್ಕಳ ಅಭಿಪ್ರಾಯಗಳಿಗೆ ಮನ್ನಣೆ ಸಿಗಬೇಕು. ಅವರು ಸಹ ಗ್ರಾಮದ ಅಭಿವೃದ್ದಿಯಲ್ಲಿ ಪಾಲುದಾರರಾಗಬೇಕು ಎಂಬುದಾಗಿದೆ ಎಂದರು.
ಮೊಬಿಲಟಿ ಇಂಡಿಯಾದ ಮುಖ್ಯಸ್ಥರಾದ ಅಲ್ವಿನಾ ಶಂಕರ್ ಮಾತನಾಡಿ, ಮೊಬಿಲಿಟಿ ಇಂಡಿಯಾ ಸಂಸ್ಥೆ ಪ್ರಮುಖವಾಗಿ ವಿಕಲಚೇತನ ಮಕ್ಕಳ ಶಿಕ್ಷಣಕ್ಕೆ ಶ್ರಮಿಸುತ್ತಾ ಬಂದಿದೆ.ನಿಮ್ಮ ಪರಿಸರದಲ್ಲಿರುವ ವಿಕಲಚೇತನ ಮಕ್ಕಳು ನಿಮ್ಮಂತೆಯೇ ಶಾಲೆಗಳಿಗೆ ಬಂದು ಶಿಕ್ಷಣ ಕಲಿಯುವಂತಹ ವಾತಾವರಣ ನಿರ್ಮಾಣವಾಗಲು ತಾವುಗಳು ಜಾಗೃತಿ ಮೂಡಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಡಾ.ವಾಸುದೇವ ಶರ್ಮ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಪ್ರತಿನಿಧಿಗಳು ನಿಮ್ಮ ಶಾಲಾ, ಕಾಲೇಜುಗಳಲ್ಲಿ, ಮಕ್ಕಳ ಹಕ್ಕುಗಳ ರಕ್ಷಣಾ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿ ನಿಮ್ಮಗಳ ಮೇಲಿದೆ.ತಮ್ಮನ್ನು ತಾವು ರಕ್ಷಿಸುವ ಕೆಲಸವನ್ನು ತಾವುಗಳೇ ಮಾಡಿಕೊಳ್ಳಬೇಕಾಗಿದೆ. ಕೆಲವೊಂದು ಸಂದರ್ಭದಲ್ಲಿ ಮಕ್ಕಳಿಗೆ ತಾವು ಮೋಸ ಹೋಗಿರುವ ಬಗ್ಗೆ ಅರಿವಿಗೆ ಬಂದಿರುವುದಿಲ್ಲ. ಹಾಗಾಗಿ ಇದರ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ಎಲ್ಲರೂ ಪಡೆಯಬೇಕು.ಗಂಡು ಮಕ್ಕಳಾಗಲಿ, ಹೆಣ್ಣು ಮಗುವಾಗಲಿ ಯಾವಾಗ ಎಸ್ ಹೇಳಬೇಕು, ಯಾವಾಗ ನೋ ಹೇಳಬೇಕೆಂಬ ಪರಿಜ್ಞಾನ ಬೆಳೆಸಿಕೊಂಡರೆ ಹಲವು ಸಮಸ್ಯೆಗಳಿಂದ ಮುಕ್ತಿ ಹೊಂದಬಹುದೆಂದರು.
ಮೊಬಿಲಿಟಿ ಇಂಡಿಯಾದ ಹಿರಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಆನಂದ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪವಿತ್ರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೊಬಲಿಟಿ ಇಂಡಿಯಾದ ಅಧಿಕಾರಿಗಳು, ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದರು.