ಚಿಕ್ಕನಾಯಕನಹಳ್ಳಿ, ಜೂ.2: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಒತ್ತಾಯಿಸಿದ್ದಾರೆ. ತಾಲೂಕಿನ ಸೋಮನಹಳ್ಳಿ ತೋಟದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷಕ್ಕಾಗಿ ಪುಟ್ಟರಂಗಶೆಟ್ಟಿ ಅವರು ಸಲ್ಲಿಸಿರುವ ಸೇವೆ ಅಪಾರ. ಕಳೆದ ಚುನಾವಣೆಯಲ್ಲಿ ವಿ. ಸೋಮಣ್ಣ ಅವರ ಎದುರು ಅತ್ಯಂತ ಕಠಿಣ ಹಣಾಹಣಿಯಲ್ಲಿ ಜನರ ವಿಶ್ವಾಸ ಗಳಿಸಿ 45 ಸಾವಿರ ಮತಗಳ ಭಾರಿ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. 2018ರ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಅವರು 14 ತಿಂಗಳು ಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು ಎಂದರು.
ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಮಂತ್ರಿಮಂಡಲ ರಚನೆ ಮಾಡಿದ ಸಂದರ್ಭದಲ್ಲೂ ಹಿಂದುಳಿದ ವರ್ಗದ ಪ್ರಮುಖ ಸಮುದಾಯವಾದ ಉಪ್ಪಾರ ಸಮಾಜದ ಪುಟ್ಟರಂಗಶೆಟ್ಟಿ ಅವರನ್ನು ಗುರುತಿಸಿ ಸಚಿವ ಸ್ಥಾನ ನೀಡದಿರುವುದು ಇಡೀ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ. ಜುಲೈ 3 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಮಂತ್ರಿಮಂಡಲದಲ್ಲಾದರೂ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು ಉತ್ತರ ಕಾಂಗ್ರೆಸ್ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗದೇವರು ಮಾತನಾಡಿ, ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ನಾಯಕರಾಗಿ ಪುಟ್ಟರಂಗಶೆಟ್ಟಿ ಅವರು ಶ್ರಮಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದ ಹಿರಿಯ ನಾಯಕರು ಇವರ ಹಿರಿತನ ಹಾಗೂ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಲೇಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಮನವಿ ಮಾಡಿದ್ದಾರೆ.
![]()
ʼರಾಜ್ಯದಲ್ಲಿ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರನ್ನು ಈ ಬಾರಿಯೂ ಮಂತ್ರಿಮಂಡಲದಿಂದ ಕೈಬಿಟ್ಟರೆ, ರಾಜ್ಯಾದ್ಯಂತ ಉಪ್ಪಾರ ಸಮುದಾಯದ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದುʼ.
— ಕಲ್ಲೇಶ್, ಉಪಾಧ್ಯಕ್ಷರು, ರಾಜ್ಯ ಉಪ್ಪಾರ ಸಂಘ.