ತಿಪಟೂರು, ಮೇ 30: ಹಾವೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರು ಹಾಗೂ ಲಂಬಾಣಿ (ಬಂಜಾರ) ಸಮಾಜದ ಮತ್ತು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕರು ಮತ್ತು ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮಾಜದ ಪಕ್ಷದ ಮುಖಂಡರುಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘದ ಅಧ್ಯಕ್ಷ ಬಿ.ಟಿ. ಕುಮಾರ್, ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರ ಗಳ ಪೈಕಿ ಪರಿಶಿಷ್ಟ ಜಾತಿಯ ಒಟ್ಟು 36 ಮೀಸಲು ಮತ ಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ಒಟ್ಟು 15 ಮೀಸಲು ಮತ ಕ್ಷೇತ್ರಗಳಲ್ಲಿ ಲಂಬಾಣಿ (ಬಂಜಾರ) ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸಮಾಜದ ಏಕೈಕ ಶಾಸಕರಾಗಿರುವ ಹಾವೇರಿ ಕ್ಷೇತ್ರದ ರುದ್ರಪ್ಪ ಲಮಾಣಿ ಅವರು ಸಮಾಜದಲ್ಲಿ ಮತ್ತು ರಾಜಕೀಯವಾಗಿ ಸುದೀರ್ಘ ಅನುಭವ ಹೊಂದಿರುವ ಸೌಮ್ಯ ಹಾಗೂ ದಕ್ಷ ನಾಯಕರಾಗಿದ್ದಾರೆ. ಪ್ರಸ್ತುತ (ಸಿದ್ದರಾಮಯ್ಯ ಅವರ) ಸರ್ಕಾರದಲ್ಲಿ ವಿಧಾನಸಭೆಯ ಉಪಸಭಾಪತಿಯಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಲಂಬಾಣಿ ಸಮುದಾಯದ ಏಳಿಗೆಗಾಗಿ ಅವರು ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳ ಮೀಸಲಾತಿ ವರ್ಗಿಕರಣ ಮತ್ತು ಶಿಫಾರಸನ್ನು ಖಂಡಿಸಿ,"ಬಿಜೆಪಿ ಹಠಾವೋ-ತಾಂಡಾ ಬಚಾವೋ" ಎಂಬ ಘೋಷಣೆಯ ಮೂಲಕ, ರಾಜ್ಯದ ಸುಮಾರು 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಲಂಬಾಣಿ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದು, ಈ ಬಾರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಸರಿಪಡಿಸುವ ನಿಟ್ಟಿನಲ್ಲಿ, ರುದ್ರಪ್ಪ ಲಮಾಣಿ ರವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಬಂಜಾರ ಸಮಾಜವು ಸುಮಾರು 30 ಲಕ್ಷಕ್ಕೂ ಅಧಿಕ ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು, ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ರಾಜಕೀಯ ಕುತಂತ್ರದಿಂದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಸೇರಿದಂತೆ ಹಲವು ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಸಮುದಾಯದ ಹಿರಿಯ ನಾಯಕರಾದ ರುದ್ರಪ್ಪ ಲಮಾಣಿ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಸಮಾಜದ ಪಕ್ಷದ ಮುಖಂಡರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಾತಿನಿಧ್ಯ ದೊರಕಿಸಿ, ನಾಮನಿರ್ದೇಶನ ನೀಡುವುದರಿಂದ ಇಡೀ ಸಮಾಜಕ್ಕೆ ದೊಡ್ಡ ಗೌರವ ಸಿಕ್ಕಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಬಂಜಾರ ಸಮಾಜದ ಹಿತದೃಷ್ಟಿಯಿಂದ ರುದ್ರಪ್ಪ ಲಮಾಣಿ ರವರಿಗೆ ಸೂಕ್ತ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘದ ಅಧ್ಯಕ್ಷ ಬಿ.ಟಿ. ಕುಮಾರ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.