ಕೊರಟಗೆರೆ, ಆ.21: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಇತಿಹಾಸ ಪ್ರಸಿದ್ದ ಪುಣ್ಯಕ್ಷೇತ್ರವಾದ ಗೊರವನಹಳ್ಳಿಯಲ್ಲಿ ನೆಲೆಸಿರುವ ತಾಯಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಹಾಗೂ ಧಾರ್ಮಿಕ ಪೂಜಾ ಕೈಂಕಾರ್ಯಗಳು ನೆರವೇರಿದವು.
ದೇವಾಲಯದಲ್ಲಿ ತಾಯಿ ಮಹಾಲಕ್ಷ್ಮಿಗೆ ಅಲಂಕಾರ, ವಿಶೇಷ ಪೂಜೆ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಮಹಾಲಕ್ಷ್ಮಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಾಸುದೇವ್ ಮಾತನಾಡಿ, ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಸಾವಿರಾರು ಭಕ್ತರು ಆಗಮಿಸುವ ಅಂಗವಾಗಿ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕುಡಿಯವ ನೀರು, ಪ್ರಸಾದ, ಪಾರ್ಕಿಂಗ್ ವ್ಯವಸ್ಥೆ, ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ಜತೆಗೆ ದಾಸೋಹದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ನೂತನ ತೇರಿನಲ್ಲಿ ಬೆಳ್ಳಿ ಉತ್ಸವ ಮೂರ್ತಿಯ ಮೆರವಣಿಗೆ ಈ ಬಾರಿಯ ವಿಶೇಷ ಆಕರ್ಷಣೆಯಾಗಿದೆ. ತಾಯಿ ಮಹಾಲಕ್ಷ್ಮಿಯ ಕೃಪೆ ನಾಡಿನ ಸಮಸ್ತ ಭಕ್ತರ ಮೇಲಿರಲಿ ಎಂದು ಹೇಳಿದರು.

ತಹಸೀಲ್ದಾರ್ ಕೆ. ಮಂಜುನಾಥ್ ಮಾತನಾಡಿ, ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಭಕ್ತರ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಪೊಲೀಸ್, ಕಂದಾಯ ಇಲಾಖೆ, ಗ್ರಾಪಂ ಹಾಗೂ ದೇವಾಲಯದ ಆಡಳಿತ ಮಂಡಳಿ ಸಮನ್ವಯದಿಂದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಭಕ್ತರು ಶಾಂತಿಯಿಂದ ತಾಯಿ ಮಹಾಲಕ್ಷ್ಮಿಯ ದರ್ಶನ ಪಡೆದು ಸಹಕರಿಸಬೇಕು ಎಂದು ಮನವಿ ಮಾಡಿದರು.

ನೂತನ ತೇರು ಪ್ರಮುಖ ಆಕರ್ಷಣೆ
ನೂತನ ತೇರು ಈ ಬಾರಿಯ ವರಮಹಾಲಕ್ಷ್ಮಿ ಹಬ್ಬದ ಪ್ರಮುಖ ಆಕರ್ಷಣೆಯಾಗಿದ್ದು, ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ನೂತನ ತೇರು ನಿರ್ಮಿಸಲಾಗಿದೆ. ತೇರಿನಲ್ಲಿ ಸುಮಾರು 23 ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷ್ಮಿ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು. ಉತ್ಸವ ಮೂರ್ತಿಯ ಮೆರವಣಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಈ ಸಂದರ್ಭದಲ್ಲಿ ಟ್ರಸ್ಟ್ ಆಡಳಿತ ಮಂಡಳಿ ಸೇರಿದಂತೆ ಸಹಸ್ರಾರು ಭಕ್ತಾದಿಗಳು ಉಪಸ್ಥಿತರಿದ್ದರು.