Pralhad Joshi: ರಾಜ್ಯದಲ್ಲಿ ಗ್ಯಾರಂಟಿ ಪರಿಣಾಮ ಬಗ್ಗೆ ಶಾಸಕರೇ ಧ್ವನಿ ಎತ್ತುತ್ತಿದ್ದಾರೆ: ಪ್ರಲ್ಹಾದ್ ಜೋಶಿ
ರಾಜ್ಯದಲ್ಲಿ ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರು ಬಿ.ಆರ್.ಪಾಟೀಲ್ ಬಳಿ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಂದಾಲೋಚನೆ ಮಾಡದೇ ಗ್ಯಾರೆಂಟಿ ರೂಪಿಸಿದ್ದೇ ಇಂಥ ಸ್ಥಿತಿಗೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಸದ್ದು ಮಾಡುತ್ತಿದೆ. ಆದರೆ, ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಕರ್ನಾಟಕದಲ್ಲಿ ರಸ್ತೆ ಗುಂಡಿ ಮುಚ್ಚಲೂ ಹಣವಿಲ್ಲ ಎಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಇಂಡಿ ಒಕ್ಕೂಟ ಮತ್ತು ಅರವಿಂದ ಕೇಜ್ರಿವಾಲ್ ಗ್ಯಾರೆಂಟಿ ಸ್ಕೀಂ ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಗ್ಯಾರೆಂಟಿಗಳನ್ನು ಕೊಟ್ಟ ಕರ್ನಾಟಕದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ವಾದವನ್ನು ಇಂಡಿ ನಾಯಕರೇ ಮುಂದಿಟ್ಟಿದ್ದಾರೆ ಎಂದು ತಿಳಿಸಿದರು.
ಸ್ವತಃ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರೆಂಟಿಗಳಿಂದಾಗಿ ಕರ್ನಾಟಕದಲ್ಲಿ ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ ಎಂಬುದನ್ನು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೆನಪಿಸಿದರು. ಗ್ಯಾರೆಂಟಿ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬುದನ್ನು ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ರಾಜನೀತಿ ಸಲಹೆಗಾರ ಬಿ.ಆರ್. ಪಾಟೀಲ್ ಸಹ ʼಗ್ಯಾರೆಂಟಿಗಳಿಂದಾಗಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದಿದ್ದಾರೆʼ ಎಂದು ಜೋಶಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Bengaluru News: ಬೆಂಗಳೂರಿನಲ್ಲಿ ʼಕ್ಯಾನ್ಸರ್ ವಿರುದ್ಧ ನಡೆಯಿರಿʼ ವಾಕಥಾನ್
ರಾಜ್ಯದಲ್ಲಿ ಗ್ಯಾರೆಂಟಿಗಳಿಂದಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರು ಬಿ.ಆರ್. ಪಾಟೀಲ್ ಬಳಿ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಂದಾಲೋಚನೆ ಮಾಡದೇ ಗ್ಯಾರೆಂಟಿ ರೂಪಿಸಿದ್ದೇ ಇಂಥ ಸ್ಥಿತಿಗೆ ಕಾರಣ ಎಂದು ಅವರು ಆರೋಪಿಸಿದರು. ಗ್ಯಾರೆಂಟಿ ಯೋಜನೆಗಳಿಂದಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಶಾಸಕರಷ್ಟೇ ಅಲ್ಲ, ಈಗ ಜನರಿಗೂ ಅರಿವಾಗಿದೆ ಎಂದು ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.