VAOs strike: ತುಮಕೂರಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ವಿಎಒಗಳ ಅನಿರ್ಧಿಷ್ಟಾವಧಿ ಮುಷ್ಕರ
VAOs strike: ಸೂಕ್ತ ಕಚೇರಿ, ಕಾಲ ಕಾಲಕ್ಕೆ ಬಡ್ತಿ, ಕೆಲಸದ ಸಮಯದಲ್ಲಿ ಭದ್ರತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ.
![ವಿವಿಧ ಬೇಡಿಕೆ ಈಡೇರಿಕೆಗಾಗಿ ವಿಎಒಗಳ ಅನಿರ್ಧಿಷ್ಟಾವಧಿ ಮುಷ್ಕ](https://cdn-vishwavani-prod.hindverse.com/media/original_images/VAOs_strike.jpg)
![Profile](https://vishwavani.news/static/img/user.png)
ತುಮಕೂರು: ಕಂದಾಯ ಇಲಾಖೆಯ ಆಧಾರ ಸ್ತಂಭಗಳಾಗಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ (Village Administrative Officers) ಸೂಕ್ತ ಕಚೇರಿ, ಕಾಲ ಕಾಲಕ್ಕೆ ಬಡ್ತಿ, ಕೆಲಸದ ಸಮಯದಲ್ಲಿ ಭದ್ರತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕರೆಯ ಮೇರೆಗೆ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು (VAO) ಕೆಲಸಕ್ಕೆ ಸಾಮೂಹಿಕ ರಜೆ ಹಾಕಿ, ಎರಡನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರವನ್ನು (VAOs strike) ಸೋಮವಾರ ಆರಂಭಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ಗಳನ್ನು ಅನ್ ಇನ್ಸ್ಟಾಲ್ ಮಾಡಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಪೀಠೋಪಕರಣ, ಮೊಬೈಲ್, ಸಿಮ್ ಮತ್ತು ಡಾಟಾ, ಲ್ಯಾಪ್ ಟಾಪ್ ಮತ್ತು ಪ್ರಿಂಟರ್ಗಳನ್ನು ನೀಡುವುದು, ವಿಎಒ (VAO) ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ವೇತನಶ್ರೇಣಿ ನಿಗಧಿ, ಅಂತರಜಿಲ್ಲಾ ವರ್ಗಾವಣೆ, ಬಡ್ತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ 2024ರ ಅ.3ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಅವರು ನೀಡಿದ ಭರವಸೆ ಈಡೇರಿಸಬೇಕು ಎಂದು ಮುಷ್ಕರದ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಗಿದೆ.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷ ಎಸ್.ದೇವರಾಜು, ಗ್ರಾಮ ಆಡಳಿತ ಅಧಿಕಾರಿಗಳು ಅನುಭವಿಸುತ್ತಿರುವ ತೊಂದರೆಗಳನ್ನು ಪರಿಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ 2024ರ ಸೆ. 26ರಿಂದ ಅ.3ರವರೆಗೆ ಮೊದಲ ಹಂತದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿತ್ತು. ಅ.3ರಂದು ಅಂದಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ನಮ್ಮೊಂದಿಗೆ ಮಾತನಾಡಿ, ಬೇಡಿಕೆಗಳನ್ನು ಬಗೆಹರಿಸುವ ಭರವಸೆ ನೀಡಿದ ನಂತರ ಮುಷ್ಕರ ವಾಪಸ್ ಪಡೆಯಲಾಗಿತ್ತು. ಆದರೆ ಮೂರು ತಿಂಗಳು ಕಳೆದರೂ ಸರಕಾರ ಸಣ್ಣ, ಪುಟ್ಟ ಬೇಡಿಕೆಗಳನ್ನು ಈಡೇರಿಸಿ, ಪ್ರಮುಖ ಬೇಡಿಕೆಗಳ ಕಡೆಗೆ ಗಮನವನ್ನೇ ಹರಿಸಿಲ್ಲ ಎಂದರು.
ರೈತರು, ಸಾರ್ವಜನಿಕರೊಂದಿಗೆ ನೇರವಾಗಿ ಕೆಲಸ ಮಾಡುವ ನಮಗೆ ಒಂದು ಕಚೇರಿಯಿಲ್ಲ. ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವಾಗ ಶಾಲೆಯ ಜಗಲಿ, ಇಲ್ಲವೇ ಅರಳೀಮರದ ಕಟ್ಟೆ ಇಂತಹ ಸ್ಥಳಗಳಲ್ಲಿ ಕುಳಿತು ಕೆಲಸ ಮಾಡಬೇಕಾಗಿದೆ. ಹೆಣ್ಣು ಮಕ್ಕಳಿಗೆ ಒಂದು ಶೌಚಾಲಯವೂ ಇಲ್ಲ. ಅಲ್ಲದೆ ರಕ್ಷಣೆ ಎಂಬುದೇ ಇಲ್ಲವಾಗಿದೆ. ವಿವಾದ ವಿರುವ ಭೂಮಿಗಳ ದುರಸ್ತಿಯಂತಹ ಸಂದರ್ಭದಲ್ಲಿ ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಎಲ್ಲಾ ವೃತ್ತಗಳಲ್ಲಿಯೂ ಸುಸಜ್ಜಿತ ಕಚೇರಿ,ಕಚೇರಿಗೆ ಅಗತ್ಯವಿರುವ ಪೀಠೋಪಕರಣ, ಕೆಲಸಗಾರರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂಬುದು ನಮ್ಮಗಳ ಆಗ್ರಹವಾಗಿದೆ ಎಂದರು.
ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಖ್ಯಸ್ಥರಿಗೆ ಹಾಗೂ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದರು.
ಈ ಸುದ್ದಿಯನ್ನೂ ಓದಿ | Pavagada Hostel: ಪಾವಗಡ ಬಾಲಕಿಯರ ಹಾಸ್ಟೆಲ್ಗೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ದಿಢೀರ್ ಭೇಟಿ; ಅವ್ಯವಸ್ಥೆಗೆ ಗರಂ
ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ತುಮಕೂರು ಜಿಲ್ಲಾ ಶಾಖೆಯ ಪದಾಧಿಕಾರಿಗಳಾದ ಎನ.ರವಿಕುಮಾರ್, ಎನ್.ಜಿ.ಪುರುಷೋತ್ತಮ್, ಖಜಾಂಚಿ ರಾಘವೇಂದ್ರಸ್ವಾಮಿ, ಗೌರವಾಧ್ಯಕ್ಷ ಹೇಮಂತಕುಮಾರ್,ತಾಲೂಕು ಅಧ್ಯಕ್ಷರುಗಳಾದ ಕಲ್ಲೇಶ್, ಸುಮತಿ, ರವಿಕುಮಾರ್, ಜಗಧೀಶ್, ಬಸವರಾಜು, ರಾಜೇಶ್, ನವೀನ್ಕುಮಾರ್, ಕಾಂತರಾಜು, ವೆಂಕಟೇಶ್, ಪ್ರಸನ್ನಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೆಲಮಂಗಲ ತಾಲೂಕು ಕಚೇರಿ ಮುಂದೆ ವಿಎಒಗಳ ಮುಷ್ಕರ
ನೆಲಮಂಗಲ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಕಚೇರಿ ಮುಂದೆಯೂ ಸೋಮವಾರ ಮುಷ್ಕರ ನಡೆಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದೆ. ಈ ವೇಳೆ ಜಿಲ್ಲಾಧ್ಯಕ್ಷ ರವೀಂದ್ರ ಮಾತನಾಡಿ, ಕೆಲವು ತಿಂಗಳ ಹಿಂದೆ ಸರ್ಕಾರದ ಕಂದಾಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಲಾಗಿತ್ತು. ಅದರಂತೆ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಗಿತ್ತು. ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿಲ್ಲ. ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ. ಆದ್ದರಿಂದ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿಗೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತಿದ್ದೇವೆ ಎಂದರು.