ಬೆಂಗಳೂರು: ಬೆಂಗಳೂರಿನ (Bengaluru) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ (mass namaz in KIA) ಮಾಡಿದ್ದುಇದರ ವಿಡಿಯೋ ವೈರಲ್ (viral video) ಆಗುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಇದರ ವಿಡಿಯೋ ವೈರಲ್ ಆಗಿದ್ದು, ಹಲವರ ಆಕ್ರೋಶಕ್ಕೂ ಕಾರಣವಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ ಮಾಡಿರುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೆಲಸಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ. ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಈ ಘಟನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ.
"ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದೆ. ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರವೂ ಆರ್ಎಸ್ಎಸ್ ಪಥಸಂಚಲನ ನಡೆಸಿದಾಗ ರಾಜ್ಯ ಸರ್ಕಾರ ಆಕ್ಷೇಪಿಸುತ್ತದೆ. ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಸರ್ಕಾರ ಏಕೆ ಕಣ್ಣು ಮುಚ್ಚಿ ಕುಳಿತಿದೆ?” ಎಂದು ಅವರು ಭಾನುವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
ಪ್ರಾರ್ಥನಾ ಕೊಠಡಿಯಿದ್ರೂ ಹೊರಗಡೆ ನಮಾಜ್
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಏರ್ಪೋರ್ಟ್ ಒಳಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ದರೂ ಹೊರಗಡೆ ನಮಾಜ್ ಮಾಡಿದ್ದು ಯಾಕೆ? ಏರ್ಪೋರ್ಟ್ ಸಿಬ್ಬಂದಿ, ಭದ್ರತಾ ಪಡೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸುಮ್ಮನೆ ನಿಂತು ನೋಡುತ್ತಿದ್ದುದು ಯಾಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.