Karnataka assembly session: ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುತ್ತೇವೆ: ಸಿಎಂ ಘೋಷಣೆ
internal reservation: ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಎಸ್ಸಿ ಒಳ ಮೀಸಲಾತಿಗೆ (SC Internal Reservation) ಸಂಬಂಧಿಸಿ ಆ.19ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ಆಯೋಗದ ಶಿಫಾರಸುಗಳನ್ನು ಕೆಲವು ಮಾರ್ಪಾಡುಗಳೊಂದಿಗೆ ಅಂಗೀಕರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು, ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದರು. ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ.
ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಜಸ್ಟೀಸ್ ಎಚ್.ಎನ್. ನಾಗಮೋಹನ್ದಾಸ್ ಅವರ ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದೆ.
ದಿನಾಂಕ 19-8-2025 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.
ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.
ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ.
ಸ್ಪೃಶ್ಯ ಜಾತಿಗಳ ಗುಂಪಿಗೆ ಜಸ್ಟೀಸ್ ನಾಗಮೋಹನ್ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.
ಈ ಸುದ್ದಿಯನ್ನೂ ಓದಿ | SC Internal Reservation: ಎಸ್ಸಿ ಒಳ ಮೀಸಲಾತಿ; ಕೆಲ ಮಾರ್ಪಾಡುಗಳೊಂದಿಗೆ ನಾಗಮೋಹನ್ ದಾಸ್ ವರದಿ ಅಂಗೀಕರಿಸಿದ್ದೇವೆ ಎಂದ ಸಿಎಂ
ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ - ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ - ಶೇ. 6 ಹಾಗೂ ಸಿ ಪ್ರವರ್ಗಕ್ಕೆ - ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ. ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಸಿಎಂ ತಿಳಿಸಿದರು.