ಬೆಂಗಳೂರು, ಆ. 20: ಎಲ್ ನೀನೊ ಪರಿಣಾಮದಿಂದ ಈ ಬಾರಿ ರಾಜ್ಯದಲ್ಲಿ ಮುಂಗಾರು ಕೊರತೆ ಎದುರಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ ತುಸು ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಅಗಸ್ಟ್ 3ನೇ ವಾರದಲ್ಲೂ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ (Karnataka Weather). ಗುರುವಾರ (ಆಗಸ್ಟ್ 20) ಬೆಂಗಳೂರು, ಕರಾವಳಿ ಸೇರಿ ವಿವಿಧ ಕಡೆಗಳಲ್ಲಿ ಸಾಧಾರಣ ವರ್ಷಧಾರೆಯಾಗಲಿದೆ ಎಂದು ತಿಳಿಸಿದೆ. ಇನ್ನು ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21°C ಹಾಗೂ 30°C ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರ ವರ್ಷಧಾರೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ನೀಡಲಾಗಿಲ್ಲ.
ಆಗಸ್ಟ್ 22ರವರೆಗೆ ಮಳೆ ಸಾಧ್ಯತೆ
ಆಗಸ್ಟ್ 22ರವರೆಗೆ ಬಾಗಲಕೋಟೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ (ಗಂಟೆಗೆ 30-40) ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಅವಧಿಯಲ್ಲಿ ಬೆಂಗಳೂರು (ಗ್ರಾಮೀಣ, ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸೂಚನೆಯಿದೆ.
ಬುಧವಾರ ಬೆಂಗಳೂರಿನಲ್ಲಿ ಭಾರಿ ಮಳೆ
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದರು. ಬೆಂಗಳೂರಿನ ಜಯನಗರ, ಪದ್ಮನಾಭನಗರ, ಜೆಪಿ ನಗರ, ಎಡೆಯೂರು, ಬಸವಗುಡಿ, ರಾಜರಾಜೇಶ್ವರಿ ಸೇರಿ ಹಲವೆಡೆ ವರುಣ ಅಬ್ಬರಿಸಿದ್ದು, ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದವರು ಸಂಕಷ್ಟ ಅನುಭವಿಸಿದರು. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನು ಬೆಣ್ಣೆನಗರಿ ದಾವಣಗೆರೆ ಮೇಲೂ ವರುಣದೇವ ಕೃಪೆ ತೋರಿದ್ದು, ವಾತಾವರಣ ತಂಪಾಗಿದೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.