ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart Attacks: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

Heart Attacks: ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ; ತಜ್ಞರ ಸಮಿತಿ ರಚನೆ

Profile Prabhakara R Jun 30, 2025 10:33 PM

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತ ಪ್ರಕರಣಗಳ (Heart Attacks) ಸಂಖ್ಯೆ ಹೆಚ್ಚಳವಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆ ಮಾಡಿದ್ದು, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ಅಧ್ಯಯನ ನಡೆಸಿ, 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸೂಚಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.



ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತೀಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ. ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ.

ರಾಜ್ಯಾದ್ಯಂತ ಸ್ಟೆಮಿ ಯೋಜನೆ ವಿಸ್ತರಣೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 22 ಮಂದಿ ಹೃದಯಾಘಾತದಿಂದ (Heart attack cases) ಮೃತಪಟ್ಟಿದ್ದರು. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ವಿಶೇಷ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೆ ಸ್ಟೆಮಿ ಯೋಜನೆಯನ್ನು (STEMI program) ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಇನ್ನುಮುಂದೆ ತಾಲೂಕು ಆಸ್ಪತ್ರೆಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆಯಾಗಲಿದೆ.

ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮಾಹಿತಿ ನೀಡಿದ್ದು , ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೆ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.

ಏನಿದು ಸ್ಟೆಮಿ ಯೋಜನೆ?

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಎಸ್‌ಟಿ-ಎಲಿವೇಷನ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (ಸ್ಟೆಮಿ) ಯೋಜನೆಯನ್ನು 2023ರಲ್ಲಿ ಜಾರಿಗೆ ತಂದಿತು. ಸ್ಟೆಮಿ ಯೋಜನೆಯು ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ರೂಪಿಸಲಾದ ಚಿಕಿತ್ಸಾ ಕಾರ್ಯಕ್ರಮವಾಗಿದೆ.

ಈ ಸುದ್ದಿಯನ್ನೂ ಓದಿ | Heart Failure: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ನಾಲ್ವರು ಸಾವು, 40 ದಿನಗಳಲ್ಲಿ 22 ಬಲಿ

ಈ ಯೋಜನೆಯು 'ಹಬ್ ಆ್ಯಂಡ್ ಸ್ಪೋಕ್' ಮಾದರಿಯಡಿ ಕಾರ್ಯನಿರ್ವಹಿಸುತ್ತದೆ. ಈ ಮಾದರಿಯಲ್ಲಿ, ತಾಲೂಕು ಆಸ್ಪತ್ರೆಗಳು ʼಸ್ಫೋಕ್' ಆಗಿ ಕಾರ್ಯನಿರ್ವಹಿಸಿದರೆ, ಜಯದೇವ ಆಸ್ಪತ್ರೆಯು 'ಹಬ್' ಆಗಿ ಕಾರ್ಯನಿರ್ವಹಿಸುತ್ತದೆ. ಹೃದಯಾಘಾತದ ಲಕ್ಷಣಗಳಾದ ಎದೆನೋವು, ಉಸಿರಾಟದ ತೊಂದರೆ ಇರುವ ರೋಗಿಗಳು ತಾಲೂಕು ಆಸ್ಪತ್ರೆಗೆ ತೆರಳಿದಾಗ ತಕ್ಷಣವೇ ಇಸಿಜಿ ಪರೀಕ್ಷೆ ನಡೆಸಿ, ಆ ಮಾಹಿತಿಯನ್ನು ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞರಿಗೆ ರವಾನಿಸಲಾಗುತ್ತದೆ. ಜಯದೇವದ ತಜ್ಞ ವೈದ್ಯರು ಈ ಡೇಟಾವನ್ನು ವಿಶ್ಲೇಷಿಸಿ, ರೋಗದ ತೀವ್ರತೆ ಗುರುತಿಸಿ, ತಾಲೂಕು ಆಸ್ಪತ್ರೆ ವೈದ್ಯರಿಗೆ ತ್ವರಿತ ಚಿಕಿತ್ಸೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಅಗತ್ಯವಿದ್ದರೆ, ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಈ ವ್ಯವಸ್ಥೆಯಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತ್ವರಿತ ಚಿಕಿತ್ಸೆ ಒದಗಿಸಿ, ಜೀವ ಉಳಿಸುವ ಸಾಧ್ಯತೆ ಹೆಚ್ಚಿದೆ.