Karnataka High Court: ಅಂಬೇಡ್ಕರ್ ಕುರಿತು ವ್ಯಂಗ್ಯ ನಾಟಕ: ಜೈನ್ ವಿವಿ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದು
ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.


ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (Dr BRAmbedkar) ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ವಿಶ್ವವಿದ್ಯಾಲಯ (Jain University) ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದ್ದು ಪ್ರಕರಣ ರದ್ದು ಮಾಡಿದೆ. ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸುಪ್ರೀಂ ಕೋರ್ಟ್ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ, ಪ್ರಕರಣವನ್ನು ಮುಂದುವರಿಸಲು ಅವಕಾಶ ನೀಡುವುದು "ಕಾನೂನು ಪ್ರಕ್ರಿಯೆಯ ದುರುಪಯೋಗ"ಕ್ಕೆ ಸಮನಾಗಿರುತ್ತದೆ ಎಂದು ಹೇಳಿದೆ.
ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯೂನಿವರ್ಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಯೂತ್ ಫೆಸ್ಟ್ ಅಂಗವಾಗಿ ಫೆಬ್ರವರಿ 6ರಂದು ಆಯೋಜಿಸಲಾಗಿದ್ದ ಸ್ಕಿಟ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಬಳಸಿದ್ದ ಕೆಲ ಪದಗಳು ದಲಿತ ಸಂಘಟನೆಗಳನ್ನ ಕೆರಳಿಸಿತ್ತು. ಫೆ. 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮ್ಯಾಡ್ ಆ್ಯಡ್ ಪ್ರದರ್ಶನದಲ್ಲಿ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ಅಂಬೇಡ್ಕರ್ ಭಾವಚಿತ್ರಕ್ಕೆ ಅಂಬೇಡ್ಕರ್ ಯುವಕ ಸಂಘದಿಂದ ಪೂಜೆ