#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Journalists Conference: ವಸ್ತುಸ್ಥಿತಿ ಜತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ: ಸಿದ್ದರಾಮಯ್ಯ

Journalists Conference: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Journalists Conference: ವಸ್ತು ಸ್ಥಿತಿ ಜತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ: ಸಿದ್ದರಾಮಯ್ಯ

ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ

Profile Siddalinga Swamy Jan 18, 2025 8:42 PM

ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತುಸ್ಥಿತಿ ಜತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು (Journalists Conference) ಉದ್ಘಾಟಿಸಿ, ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ, ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದು ತಿಳಿಸಿದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು, ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದು ತಿಳಿಸಿದ ಸಿಎಂ ಅವರು, ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ ಎಂದು ಹೇಳಿದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ರಾಜಣ್ಣ ನೀನು ಮನುಸ್ಮೃತಿ ಓದು ಎಂದ ಸಿಎಂ

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು "ಜಾತಿ-ಕೆಳ ಜಾತಿ" ಎನ್ನುವ ಪದ ಬಳಸಿದರು. ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರಿದವರು, ಹಿಂದುಳಿದವರು ಎಂದು ಹೇಳಬಹುದು ಎಂದರು. ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿ ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕಿ ಹಾರಿಸಿ ಭಾಷಣ ಮುಂದುವರಿಸಿದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್‌ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಮುಖ್ಯಮಂತ್ರಿ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್, ಗೃಹ ಸಚಿವ ಜಿ. ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | Bengaluru News: ಇವಿ ಬಳಕೆ ಉತ್ತೇಜನಕ್ಕೆ ಮೂಲಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಮಾದರಿ: ಕೆ.ಜೆ.ಜಾರ್ಜ್

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.