KTPP Bill: ಮುಸ್ಲಿಂ ಮೀಸಲು ವಿಧೇಯಕ ರಾಷ್ಟ್ರಪತಿಗೆ ಕಳಿಸಲು ಕರ್ನಾಟಕ ಸರ್ಕಾರ ಚಿಂತನೆ
ರಾಜ್ಯದ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಒದಗಿಸುವ ವಿಧೇಯಕವನ್ನು (KTPP bill) ಎರಡು ಬಾರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿರುಗಿಸಿದ್ದಾರೆ. ಹೀಗಾಗಿ ಅದನ್ನು ರಾಷ್ಟ್ರಪತಿಗಳಿಗೆ ಕಳಿಸುವ ಕ್ರಮಕ್ಕೆ ಕರ್ನಾಟಕ ರಾಜ್ಯ ಸರಕಾರ ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ, ದ್ರೌಪದಿ ಮುರ್ಮು

ನವದೆಹಲಿ: ಕರ್ನಾಟಕ ರಾಜ್ಯ ಸರಕಾರದ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲು ನೀಡುವ ವಿಧೇಯಕ (Karnataka Transparency in Public Procurement bill- 2025) ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರಿಗೆ ಕಳುಹಿಸಲು ಕರ್ನಾಟಕ ಸರಕಾರ ಚಿಂತನೆ ನಡೆಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar chand Gehlot) ಅವರು ಎರಡನೇ ಬಾರಿಯೂ ಈ ವಿಧೇಯಕವನ್ನು (KTPP Bill) ಹಿಂದಿರುಗಿಸಿದ ನಂತರ ಕರ್ನಾಟಕ ಸರ್ಕಾರ ಈ ನಡೆಗೆ ಮುಂದಾಗಿದೆ.
ಸರಕು ಮತ್ತು ಸೇವೆಗಳ ಸರ್ಕಾರಿ ಟೆಂಡರ್ಗಳಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ (ವರ್ಗ 1 ಮತ್ತು 2-ಎ) ಕೋಟಾಗಳಲ್ಲದೆ, 1 ಕೋಟಿ ರೂ.ವರೆಗಿನ ನಾಗರಿಕ ಒಪ್ಪಂದಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ವಿಧೇಯಕ ಪ್ರಸ್ತಾಪಿಸುತ್ತದೆ. ಬಿಜೆಪಿಯ ವಿರೋಧದ ಹೊರತಾಗಿಯೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ- 2025 ಅನ್ನು ಮಾರ್ಚ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿದೆ. ಈ ವಿಧೇಯಕ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಿಲ್ ಅನ್ನು ಸಮಾಜದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲ ವರ್ಗಗಳನ್ನು ಬಲಪಡಿಸುವ ಸಾಧನವೆಂದು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ಅವರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರಕಾರ ಮುಂದಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಸಾಂವಿಧಾನಿಕ ತಜ್ಞರು ಕಾನೂನು ಕ್ರಮಕ್ಕೆ ಮುಂದಾಗದಂತೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ, ಬದಲಿಗೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಸರಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಈ ವಿಷಯದ ಬಗ್ಗೆ ಅನೌಪಚಾರಿಕವಾಗಿ ಚರ್ಚಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: KTPP Bill: ಕೆಟಿಪಿಪಿ ವಿಧೇಯಕ 3ನೇ ಬಾರಿ ರಾಜ್ಯಪಾಲರಿಗೆ ಕಳುಹಿಸಿದ ರಾಜ್ಯ ಸರಕಾರ