Cabinet meeting: ಎಪಿಎಂಸಿ ತಿದ್ದುಪಡಿ ಮಸೂದೆ, ಅಧಿಕ ಬಡ್ಡಿ ನಿಷೇಧ ವಿಧೇಯಕ 2025ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
Cabinet meeting: ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಬಜೆಟ್ ಅಧಿವೇಶನಕ್ಕೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಕುರಿತ ಮಾಹಿತಿ ಇಲ್ಲಿದೆ.


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ರಾತ್ರಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 3ರಿಂದ ನಡೆಯುವ ಅಧಿವೇಶನಕ್ಕೆ ಕ್ಯಾಬಿನೆಟ್ ಘಟನೋತ್ತರ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ಐದು ಪ್ರಮುಖ ವಿಧೇಯಕಗಳ ಮಂಡನೆಗೆ ಒಪ್ಪಿಗೆ ನೀಡಲಾಗಿದೆ.
ಐದು ಪ್ರಮುಖ ಮಸೂದೆಗಳ ಮಂಡನೆಗೆ ಒಪ್ಪಿಗೆ
- ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ - 2025ಕ್ಕೆ ಅನುಮೋದನೆ
- ಕರ್ನಾಟಕ ಅಧಿಕ ಬಡ್ಡಿ ನಿಷೇಧ (ತಿದ್ದುಪಡಿ) ವಿಧೇಯಕ - 2025
- ಕರ್ನಾಟಕ ಗಿರಿವಿದಾರರ (ತಿದ್ದುಪಡಿ) ವಿಧೇಯಕ - 2025
- ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ, 2025
- ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) ನಿಯಮಗಳು (ಸಾಮಾನ್ಯ) (ತಿದ್ದುಪಡಿ) 2024 ಸೇರಿದಂತೆ ಒಟ್ಟು ಐದು ವಿಧೇಯಕ ಮಂಡನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಬೈಯಪ್ಪನ ಹಳ್ಳಿಯ ಐಒಸಿ ಸರ್ಕಲ್ನಿಂದ ಐಟಿಸಿ ಫ್ಯಾಕ್ಟರಿವರೆಗಿನ ರೈಲ್ವೆ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದೆ. 470 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಒಪ್ಪಿಗೆ ಟೆಂಡರ್ಗೆ ಸೂಚನೆ ನೀಡಲಾಗಿದೆ. 1.5 ಕಿಮೀ ದೂರದ ಕಾಮಗಾರಿ ನಡೆಸಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.
ಇನ್ನು ಗುರುಪ್ರಸಾದ್ ನೇತೃತ್ವದಲ್ಲಿ ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ವರದಿ ಪರಿಶೀಲಿಸಿ ಸಮಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಡಿಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಚರ್ಚಿಸಿ ಮುಂದಿನ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ಹುನಗುಂದದಲ್ಲಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ನಿರ್ಮಿಸಲು ಸಂಪುಟದ ಒಪ್ಪಿಗೆ ನೀಡಲಾಗಿದೆ. ಮೈಸೂರು ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಯೋಜನೆ ಅಡಿ 70 ಕೋಟಿ ವೆಚ್ಚದ ಸೀಡ್ ಫಂಡ್ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದ ಸ್ಟಾರ್ಟಪ್ ಗಳಿಗೆ ಇದರಿಂದ ಸಹಕಾರ ಆಗುತ್ತದೆ. ಇದಕ್ಕಾಗಿ ಈ ನಿಧಿ ಎತ್ತಿಡಲಾಗುತ್ತಿದೆ. ಇದು ನವೋಧ್ಯಮಗಳಿಗೆ ಬೆಂಬಲಿಸಲು ಮಾಡುತ್ತಿರುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅಲ್ಪಸಂಖ್ಯಾತರ ಇಲಾಖೆ ಚಿಂತಾಮಣಿಯಲ್ಲಿನ ದರ್ಗಾ ಅಭಿವೃದ್ಧಿಗೆ 39 ಕೋಟಿ ಕ್ರಿಯಾಯೋಜನೆ ನೀಡಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಚಿಂಚೋಳಿಯ ಪ್ರಜಾಸೌಧ ನಿರ್ಮಾಣದ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ಹಿಂದೆ 10 ಕೋಟಿ ಇತ್ತು. ಈಗ ಹೆಚ್ಚುವರಿ 91 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ. ಗದಗದಲ್ಲಿನ ಪ್ರಜಾಸತ್ತಾತ್ಮಕ ಸೌಧ ಕಾರ್ಯಕ್ಕೂ ಆಡಳಿ ತಾತ್ಮಕ ಅನುಮೋದನೆ ನೀಡಿದೆ ಎಂದರು.
5 ಸಾವಿರ ಸಂಖ್ಯೆ ಜಿಎನ್ಎಸ್ಎಸ್ ರೋವರ್ಗಳ ಖರೀದಿಗೆ 175 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ಸೂಚಿಸಲಾಗಿದೆ. ಕಂದಾಯ ಇಲಾಖೆಯಲ್ಲಿನ ಆಧುನಿಕ ಸರ್ವೇ ಮಾಪಕ ಖರೀದಿಗಾಗಿ ಈ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಲು 22 ಕೋಟಿ ಮಂಜೂರು ಮಾಡಲಾಗಿದೆ. ಟೆಂಡರ್ ಮೂಲಕ ಕಟ್ಟಡ ಕಾಮಗಾರಿ ನಡೆಸಲು ಒಪ್ಪಿಗೆ ನೀಡಲಾಗಿದೆ. ಹಳೆಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಇದಾಗಿದೆ ಎಂದರು.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ನಿರ್ಣಯ ಕೈಗೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ | BY Vijayendra: ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಹಿಂತಿರುಗಿಸಿದ್ದೇಕೆ? ವಿಜಯೇಂದ್ರ ಪ್ರಶ್ನೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಾನ್ಸನ್ ಮಾರ್ಕೆಟ್, ದೊಮ್ಮಲೂರು, ಮಚಲಿಬೆಟ್ಟ, ಹಲಸೂರು ಸೇವಾ ಠಾಣೆಗಳ ಪ್ರದೇಶವಾರು ನೀರು ಸರಬರಾಜು ವ್ಯವಸ್ಥೆಗಳ ಆಧುನೀಕರಣ ಮಾಡಲಾಗುತ್ತಿದೆ. ಒಟ್ಟು 199.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.