ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಉಸಿರುಗಟ್ಟಿಸುವ ಶಿಸ್ತಿಗೆ ಬೇಸತ್ತು ಉಸಿರುಗಟ್ಟಿಸಿ ತಂದೆಯನ್ನು ಕೊಲೆ ಮಾಡಿದ ಮಗ, ಪತ್ನಿ

ಬೋಲು ಅರಬ್‌ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಹೇಳುತ್ತಿದ್ದರು. ವಿನಾಕಾರಣ ಮನೆಯಿಂದ ಹೊರಗೆ ಹೋಗುವಂತಿಲ್ಲ. ಬೋಲು ಅರಬ್‌ರ ಈ ಶಿಸ್ತು ಪತ್ನಿ ಮತ್ತು ಪುತ್ರನಿಗೆ ಮಾನಸಿಕ ಹಿಂಸೆ ನೀಡುತ್ತಿತ್ತು. ಹೀಗಾಗಿ ತಾಯಿ-ಮಗ ಸೇರಿಕೊಂಡು ಬೋಲು ಅರಬ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು.

ಉಸಿರುಗಟ್ಟಿಸುವ ಶಿಸ್ತಿಗೆ ಬೇಸತ್ತು ತಂದೆಯನ್ನು ಕೊಲೆ ಮಾಡಿದ ಮಗ, ಪತ್ನಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 21, 2025 9:26 AM

ಬೆಂಗಳೂರು: ನಿವೃತ್ತ ಸೈನಿಕನ (Ex soldier) ಅತಿಯಾದ ಶಿಸ್ತು, ಕಿರುಕುಳದಿಂದ ಬೇಸತ್ತ ಮಗ (son) ತಾಯಿಯ ಜೊತೆ ಸೇರಿಕೊಂಡು ತಂದೆಯನ್ನು ನಿದ್ರೆ ಮಾತ್ರಿ ನುಂಗಿಸಿ ಉಸಿರುಗಟ್ಟಿಸಿ ಕೊಲೆ (Murder case) ಮಾಡಿರುವ ಘಟನೆ ವಿವೇಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿವೇಕನಗರ ನಿವಾಸಿ ಬೋಲು ಅರಬ್‌ (47) ಕೊಲೆಯಾದ ನಿವೃತ್ತ ಸೈನಿಕ. ಭಾನುವಾರ ಮುಂಜಾನೆ ಸುಮಾರು 1.30ಕ್ಕೆ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಮೃತನ ಪುತ್ರ ಸಮೀರ್‌ (19) ಮತ್ತು ಪತ್ನಿ (Wife) ತಬ್ಸಮ್‌ (36) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಬೋಲು ಅರಬ್‌ ಸೈನಿಕನಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಎರಡು ದಶಕಗಳಿಗೂ ಅಧಿಕ ಸಮಯದಿಂದ ಕುಟುಂಬದೊಂದಿಗೆ ನಗರದಲ್ಲಿ ನೆಲೆಸಿದ್ದರು. ಬೋಲು ಅರಬ್‌ಗೆ ತಬ್ಸಮ್‌ 2ನೇ ಪತ್ನಿ. ಪುತ್ರ ಸಮೀರ್‌ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್‌ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಹೇಳುತ್ತಿದ್ದರು. ವಿನಾಕಾರಣ ಮನೆಯಿಂದ ಹೊರಗೆ ಹೋಗುವಂತಿಲ್ಲ. ಬೋಲು ಅರಬ್‌ರ ಈ ಶಿಸ್ತು ಪತ್ನಿ ಮತ್ತು ಪುತ್ರನಿಗೆ ಮಾನಸಿಕ ಹಿಂಸೆ ನೀಡುತ್ತಿತ್ತು. ಹೀಗಾಗಿ ತಾಯಿ-ಮಗ ಸೇರಿಕೊಂಡು ಬೋಲು ಅರಬ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು.

ಶನಿವಾರ ರಾತ್ರಿ ಊಟಕ್ಕೆ ನಿದ್ದೆ ಮಾತ್ರೆ ಬೆರೆಸಿ ಬೋಲು ಅರಬ್‌ಗೆ ನೀಡಿದ್ದರು. ಊಟ ಮಾಡಿದ ಬಳಿಕ ಬೋಲು ಅರಬ್‌ ಗಾಢ ನಿದ್ದೆಗೆ ಜಾರಿದ್ದಾರೆ. ಮುಂಜಾನೆ 1.30ರ ಸುಮಾರಿಗೆ ತಾಯಿ-ಮಗ ಸೇರಿಕೊಂಡು ತಲೆದಿಂಬು ತೆಗೆದು ಬೋಲು ಅರಬ್‌ ಮುಖದ ಮೇಲೆ ಅದುಮಿ ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಎಚ್ಚರಗೊಂಡು ಬೋಲು ಅರಬ್‌ ಪ್ರತಿರೋಧವೊಡ್ಡಿದ ಪರಿಣಾಮ ಪುತ್ರ ಸಮೀರ್‌ ಕೈಯಿಂದಲೇ ತಲೆ ಹಾಗೂ ಮುಖಕ್ಕೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೋಲು ಅರಬ್‌ ಮೃತಪಟ್ಟಿರುವುದು ಖಚಿತವಾದ ಬಳಿಕ ಸಮೀರ್‌, ಪಕ್ಕದ ಮನೆಯ ವ್ಯಕ್ತಿಯನ್ನು ಸಂಪರ್ಕಿಸಿ, ಯಾರೋ ನಾಲ್ಕೈದು ಮಂದಿ ಮನೆಗೆ ನುಗ್ಗಿ ತಂದೆಯನ್ನು ಕೊಲೆ ಮಾಡಿ ಪರಾರಿಯಾದರು ಎಂದು ಹೇಳಿದ್ದಾನೆ. ಬಳಿಕ ನೆರೆ ಮನೆಯ ವ್ಯಕ್ತಿ 112 ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ತಾಯಿ-ಮಗನ ವರ್ತನೆ ಬಗ್ಗೆ ಅನುಮಾನಗೊಂಡು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ಬಗ್ಗೆ ಬಾಯ್ಬಿಟ್ಟಿದ್ದಾರೆ. ಬಳಿಕ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Tractor Accident: ಟ್ರ್ಯಾಕ್ಟರ್‌ ಅಡಿಯಲ್ಲಿ ಸಿಲುಕಿ 5 ವರ್ಷದ ಬಾಲಕ ದಾರುಣ ಸಾವು