Sigandur Bridge: ಶರಾವತಿ ನೂತನ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು: ನಿತಿನ್ ಗಡ್ಕರಿ ಘೋಷಣೆ
Sigandur Bridge: ಇದೊಂದು ಐತಿಹಾಸಿಕ ಸೇತುವೆ. ಮಾತೆ ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ. ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ಇದೇ ವೇಳೆ 2 ಸಾವಿರ ಕೋಟಿಗೂ ಹೆಚ್ಚು ಮೂಲಸೌಕರ್ಯ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು.


ಬೆಂಗಳೂರು: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ (Sharavati backwater) ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು (Sigandur Bridge) ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ (Sigandur Chowdeshwari Devi) ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.
ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್ ಗಡ್ಕರಿ ಮಾತನಾಡಿದರು. ಇದೇ ವೇಳೆ 2 ಸಾವಿರ ಕೋಟಿಗೂ ಹೆಚ್ಚು ಮೂಲಸೌಕರ್ಯ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಅವರು ನೆರವೇರಿಸಿದರು. ಇದೊಂದು ಐತಿಹಾಸಿಕ ಸೇತುವೆ. ಮಾತೆ ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ. ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.
ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿಯ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಪ್ರಕಟಿಸಿದರು. 10 ಸಾವಿರ ಕೋಟಿ ಮೊತ್ತದ ಬೆಳಗಾವಿ- ಹುನಗುಂದ- ರಾಯಚೂರು ಚತುಷ್ಪಥ ಕಾಮಗಾರಿ ತ್ವರಿತಗೊಳಿಸಲಾಗುವುದು ಎಂದು ತಿಳಿಸಿದರು. ದೇಶದ ವಿವಿಧೆಡೆ ಆಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಅವರು ಮಾಹಿತಿ ಕೊಟ್ಟರು. ದೆಹಲಿ- ಬೆಂಗಳೂರು ನಡುವಿನ ಅಂತರ ಕಡಿಮೆ ಮಾಡುವ ರಸ್ತೆ ಕುರಿತು ಅವರು ವಿವರ ನೀಡಿದರು. ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ವೇ ಈಗಾಗಲೇ ಪೂರ್ಣಗೊಂಡಿದೆ ಎಂದರು.
ಬೆಂಗಳೂರು ವರ್ತುಲ ರಸ್ತೆಯನ್ನು 15 ಸಾವಿರ ಕೋಟಿಯಲ್ಲಿ ನಿರ್ಮಾಣ ಮಾಡಲಾಗುವುದು. ಶೇ 40 ರಷ್ಟು ಕಾಮಗಾರಿ ಮುಗಿದಿದೆ. ಇದು ಶೀಘ್ರ ಪೂರ್ಣವಾಗಲಿದ್ದು, ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿವರಿಸಿದರು. ಬೆಂಗಳೂರು- ಮಂಗಳೂರು ರಸ್ತೆ ಅಭಿವೃದ್ಧಿ ಸೇರಿ ವಿವಿಧ ನೂತನ ಯೋಜನೆಗಳ ಕುರಿತು ಅವರು ಪ್ರಕಟಿಸಿದರು. ಶಿವಮೊಗ್ಗ- ಮಂಗಳೂರು ಚತುಷ್ಪಥದ ಡಿಪಿಆರ್ ಮಾಡಲಾಗುತ್ತಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಈ ಭಾಗದ ಬಹುವರ್ಷಗಳ ಕನಸು ಇಂದು ನನಸಾಗಿದೆ ಎಂದು ಸಂತಸ ಸೂಚಿಸಿದರು. ಇಡೀ ದೇಶಕ್ಕೆ ಇದು ಪ್ರಗತಿಯ ಮೈಲಿಗಲ್ಲು ಎಂದು ವಿವರಿಸಿದರು. ಇದು ಜನರ ವಿಶ್ವಾಸ- ಜನಪ್ರತಿನಿಧಿಗಳ ಪರಿಶ್ರಮದ ಪ್ರತಿಫಲ ಎಂದರು. ಆಗುಂಬೆ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣ, ಶಿವಮೊಗ್ಗ ಬೈಪಾಸ್ ವರ್ತುಲ ರಸ್ತೆ ಸೇರಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಅವರು ಮನವಿ ಮಾಡಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಮ್ಯಾನ್ ಆಫ್ ನ್ಯಾಷನಲ್ ಹೈವೇಸ್ ಎಂಬ ಹೆಸರು ಗಡ್ಕರಿಯವರಿಗೆ ಸರಿಹೊಂದುತ್ತದೆ ಎಂದು ನುಡಿದರು. ಗಡ್ಕರಿ ಅವರು ತಾವು ಶಂಕುಸ್ಥಾಪನೆ ಮಾಡಿದ್ದನ್ನು ತಾವೇ ಉದ್ಘಾಟಿಸುವ ಪ್ರಧಾನಿಯವರ ಸೂಚನೆಯನ್ನು ಪಾಲಿಸುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಈ ಸೇತುವೆಗಾಗಿ ನಡೆದ ಹೋರಾಟವನ್ನು ನೆನಪಿಸಿದರು. ಮೋದಿಯವರ ನೇತೃತ್ವದಲ್ಲಿ 2047ಕ್ಕೆ ಭಾರತವು ವಿಕಸಿತ ದೇಶ ಆಗಲಿದೆ. ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಗೋಡು ತಿಮ್ಮಪ್ಪ ಅವರು ಮಾತನಾಡಿ, ಇದು ಸಾಗರದ ಇತಿಹಾಸದಲ್ಲಿ ಬಂಗಾರದಿಂದ ಬರೆದಂಥ ಕಾರ್ಯಕ್ರಮ ಎಂದು ಮೆಚ್ಚುಗೆ ಸೂಚಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರು ಸ್ವಾಗತ ಕೋರಿ, 60 ವರ್ಷಗಳ ಕನಸನ್ನು ಕೇವಲ 6 ವರ್ಷಗಳಲ್ಲಿ ಅನುಷ್ಠಾನಕ್ಕೆ ತಂದ ನಿತಿನ್ ಗಡ್ಕರಿ, ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ನಿರಂತರ ಹೋರಾಟದ ಫಲ: ಬಿ.ವೈ ರಾಘವೇಂದ್ರ
ಸಿಗಂದೂರು ಸೇತುವೆ ಮೂಲಕ ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ನೀಡಲಾಗಿದೆ. ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಸೇತುವೆಯಿದು. ಕೇಬಲ್ ಆಧಾರಿತ, 2.25 ಕಿ.ಮೀ ಉದ್ದದ, ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ).
ನಿರಂತರ ಆರು ದಶಕಗಳ ಹಿನ್ನೀರಿನ ಪ್ರದೇಶದ ಜನಗಳ ಹೋರಾಟದ ಕೂಗನ್ನು ಆಲಿಸಿ ಕೇಂದ್ರ ಸರ್ಕಾರ ಸುಮಾರು 423 ಕೋಟಿ ಅನುದಾನ ಬಿಡುಗಡೆಗೊಳಿಸಿತು. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಕಲ್ಪದ ಫಲ ಮತ್ತು ನಿಮ್ಮೆಲ್ಲರ ನಿಸ್ವಾರ್ಥ ಪ್ರೀತಿಯ ಆಶೀರ್ವಾದ ಬಲದಿಂದ ಈ ಐತಿಹಾಸಿಕ ಘಟನೆಗೆ ನಮ್ಮ ಮಲೆನಾಡು ಸಾಕ್ಷಿಯಾಗಿದೆ ಎಂದು ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.
ಇದರೊಂದಿಗೆ ಕೇಂದ್ರ ಸರ್ಕಾರ ಅಧಿಕಾರ ನೀಡಿದ ಜನರ ಕೂಗಿಗೆ ತಕ್ಷಣವೇ ಸ್ಪಂದಿಸುವ ಮನೋಭಾವ ಇರುವ ಸರ್ಕಾರ ಎಂದು ಮತ್ತೊಮ್ಮೆ ದೇಶಕ್ಕೆ ಸಂದೇಶ ರವಾನಿಸಿದೆ. ಜೊತೆಗೆ ಶಂಕುಸ್ಥಾಪನೆ ಮಾಡಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ತನ್ನ ಅಧಿಕಾರದ ಅವಧಿಯಲ್ಲಿ ಉದ್ಘಾಟನೆ ಮಾಡುವ ಸಂಪ್ರದಾಯ ಮುಂದುವರೆಸಿ ಇತಿಹಾಸ ನಿರ್ಮಿಸುತ್ತಿದೆ. ಈ ಒಂದು ಸೇತುವೆ ಕೇವಲ ಶರಾವತಿ ಹಿನ್ನೀರಿನ ಸಂತ್ರಸ್ತರ ಬವಣೆ ಮಾತ್ರ ನೀಗಿಸುವುದಲ್ಲದೆ ನಮ್ಮ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಇನ್ನಷ್ಟು ಬಾಂಧವ್ಯ ಬೆಸೆಯುವ ಕಾಲಘಟಕ್ಕೆ ಮುನ್ನುಡಿ ಬರೆಯುವುದು ನಿಶ್ಚಿತ. ಜೊತೆಗೆ ಎರಡು ಜಿಲ್ಲೆಗಳ ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ ಹಾಗೂ ವೈವಿಧ್ಯಮಯ ಸಂಸ್ಕೃತಿಗಳ ಸಮ್ಮಿಲನ ಗಟ್ಟಿಯಾಗುವುದು ಹೊಸ ಶಕೆಯ ಆರಂಭಕ್ಕೆ ಸಾಕ್ಷಿಯಾಗಲಿದೆ ಎಂದಿದ್ದಾರೆ.
ಈ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂಥ ಐತಿಹಾಸಿಕ ಸಂದರ್ಭದಲ್ಲಿ ಈ ಸೇತುವೆ ಹೋರಾಟಕ್ಕೆ ದಶಕಗಳಿಂದ ಹೋರಾಟ ನಡೆಸುತ್ತಿದ್ದ ಪ್ರಸನ್ನ ಕೆರೆಕೈ ಅವರು ಸೇರಿದಂತೆ ಇನ್ನೂ ನೂರಾರು ಹೋರಾಟಗಾರರನ್ನು ನೆನಪು ಮಾಡಿಕೊಂಡು ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಹಿರಿಯರಾದ ಕಾಗೋಡು ತಿಮ್ಮಪ್ಪ, ಸ್ಥಳೀಯ ಮುಖಂಡರು ಹಾಜರಿದ್ದರು.
ಶಾಸಕರಾದ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಹರತಾಳು ಹಾಲಪ್ಪ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಸಿಮೆಂಟ್ ಮಂಜುನಾಥ್, ಶ್ರೀಮತಿ ಹೇಮಲತಾ ನಾಯಕ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧ್ಯಕ್ಷ ಜಗದೀಶ್, ಪ್ರಸನ್ನ ಕೆರೆಕೈ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ಕಾರ್ಯಕರ್ತರು, ಸಿಗಂದೂರು ಚೌಡೇಶ್ವರಿ ದೇವಿಯ ಭಕ್ತರು ಹಾಗೂ ಸಾರ್ವಜನಿಕ ಬಂಧುಗಳು ಭಾಗವಹಿಸಿದ್ದರು. ನಿತಿನ್ ಗಡ್ಕರಿ, ಪ್ರಲ್ಹಾದ್ ಜೋಶಿ, ಯಡಿಯೂರಪ್ಪ, ಕಾಗೋಡು ತಿಮ್ಮಪ್ಪ, ಪರಮೇಶ್ವರಪ್ಪ ಮೊದಲಾದ ಅನೇಕರನ್ನು ಗೌರವಿಸಲಾಯಿತು.
ಇದನ್ನೂ ಓದಿ: Sigandur Bridge: ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ; ಪ್ರಧಾನಿ ಮೋದಿಗೆ ಸಿಎಂ ಪತ್ರ