ಬೆಂಗಳೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಗೆ ಒಂದು ದಿನ ಮೊದಲು ಅವುಗಳ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್ನಲ್ಲಿ ಸೋರಿಕೆಯಾಗಿದ್ದು, ಕಳವಳಕ್ಕೆ ಕಾರಣವಾಗಿದೆ. ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್ನಲ್ಲಿ ಕಾಣಿಸಿಕೊಂಡಿವೆ.
ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೆ ಕೇವಲ ಎರಡು ಗಂಟೆಗಳ ಮೊದಲು ಶಾಲೆಗಳು ಅಥವಾ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಅವುಗಳನ್ನು ಒಂದು ದಿನ ಮುಂಚಿತವಾಗಿ ವಿತರಣಾ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಆದರೆ ಒಂದು ದಿನ ಮುಂಚಿತವಾಗಿಯೇ ಆನ್ಲೈನ್ನಲ್ಲಿ ಸೋರಿಕೆಯಾಗಿದೆ. ಇದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೀಗಾಗಿ ಇದು ಶಿಕ್ಷಣ ಇಲಾಖೆಯ ಒಳಗಿನಿಂದಲೇ ಸೋರಿಕೆಯಾಗಿರುವ ಸಾಧ್ಯತೆಯಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸಂಶಯ ವ್ಯಕ್ತಪಡಿಸಿದ್ದಾರೆ.
ಸಮಾಜ ವಿಜ್ಞಾನ ಪರೀಕ್ಷೆಯ ಪೂರ್ವಭಾವಿ ಪ್ರಶ್ನೆ ಪತ್ರಿಕೆಯನ್ನು ಹೊಂದಿರುವ 'ಯೂಟ್ಯೂಬ್ ಶಾರ್ಟ್ಸ್' ಎಂದು ಅಪ್ಲೋಡ್ ಮಾಡಲಾದ ವಿಡಿಯೋವನ್ನು ಪರೀಕ್ಷೆಗೆ ಒಂದು ದಿನ ಮೊದಲು ಮಾರ್ಚ್ 3ರಂದು ಅಪ್ಲೋಡ್ ಮಾಡಲಾಗಿದ್ದು, ಇದನ್ನು 24,000 ಬಾರಿ ಹಂಚಿಕೊಳ್ಳಲಾಗಿದೆ ಮತ್ತು ಸುಮಾರು 10,000 ವೀಕ್ಷಣೆಗಳನ್ನು ಪಡೆದಿದೆ. ಈ ವಿಡಿಯೋವನ್ನು 73 ಚಂದಾದಾರರನ್ನು ಹೊಂದಿರುವ 'ಹ್ಯಾಕರ್ ಅನಿ' ಎಂಬ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದೆ.
ಇದೇ ಚಾನೆಲ್ ಮಾರ್ಚ್ 2ರಂದು ವಿಜ್ಞಾನ ಪ್ರಶ್ನೆ ಪತ್ರಿಕೆಯ ವಿಡಿಯೋವನ್ನು ಅಪ್ಲೋಡ್ ಮಾಡಿತ್ತು. ಶಿಕ್ಷಣ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಅವರ ಬಳಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ವಿಡಿಯೋವನ್ನು ತೆಗೆದುಹಾಕಲಾಗಿದೆ. ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯ ವಿಡಿಯೋ ಇನ್ನೂ ಲೈವ್ ಆಗಿದೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ (ಕೆಎಎಂಎಸ್) ನ ಪ್ರಧಾನ ಕಾರ್ಯದರ್ಶಿ ಡಿ. ಶಶಿ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: KSRTC News: ಎಸ್ಎಸ್ಎಲ್ಸಿ- ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಕೆಎಸ್ಆರ್ಟಿಸಿ ಪ್ರಯಾಣ ಉಚಿತ
ಘಟನೆಯ ನಂತರ, ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಕೆಎಎಂಎಸ್ ಒತ್ತಾಯಿಸಿದೆ. ಆದರೆ ಪೊಲೀಸ್ ಇಲಾಖೆ ಎಸ್ಎಸ್ಎಲ್ಸಿ ಬೋರ್ಡ್ ಗೆ ದೂರು ಸಲ್ಲಿಸುವಂತೆ ಸೂಚಿಸಿದೆ. ಮಂಡಳಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. "ಶಿಕ್ಷಣ ಇಲಾಖೆಯೊಳಗಿನ ಕೆಲವರು, ಖಾಸಗಿ ತರಬೇತಿ ಕೇಂದ್ರಗಳ ಪ್ರಭಾವಿ ವ್ಯಕ್ತಿಗಳು ಈ ಸೋರಿಕೆಯಲ್ಲಿ ಭಾಗಿಯಾಗಿರಬಹುದು. ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಜವಾಬ್ದಾರಿ ಹೊಂದಿರುವವರು ಈ ತರಬೇತಿ ಕೇಂದ್ರಗಳೊಂದಿಗೆ ಸಂಪರ್ಕ ಹೊಂದಿರಬಹುದು ಮತ್ತು ಅವರ ಸ್ವಂತ ಲಾಭಕ್ಕಾಗಿ ಪತ್ರಿಕೆಗಳನ್ನು ಸೋರಿಕೆ ಮಾಡಿರಬಹುದು" ಎಂದು ಶಶಿ ಕುಮಾರ್ ಹೇಳಿದ್ದಾರೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.