ಚಾಂಪಿಯನ್ಸ್ ಟ್ರೋಫಿ; ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಸಾಧ್ಯತೆ!
ಒಂದೊಮ್ಮೆ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವುದಾದರೆ ಅವರಿಗಾಗಿ ತಂಡದಲ್ಲಿ ಜಾಗ ಬಿಟ್ಟುಕೊಡುವವರು ಯಾರು ಎಂಬುದು ಸದ್ಯದ ಕುತೂಹಲ. ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯಲ್ಲಿ ಚಕ್ರವರ್ತಿ ಒಟ್ಟು 14 ವಿಕೆಟ್ ಕಿತ್ತು ಮಿಂಚಿದ್ದರು.
ನವದೆಹಲಿ: ಇದೇ ಫೆ.19 ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ(Champions Trophy) ಕ್ರಿಕೆಟ್ ಟೂರ್ನಿಗೆ ಭಾರತ ತನ್ನ ತಂಡವನ್ನು ಈಗಾಗಲೇ ಪ್ರಕಟಿಸಿದೆ. ಇದೀಗ ಈ ತಂಡದಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.
ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದ ಮಿಸ್ಟರಿ ಖ್ಯಾತಿಯ ಸ್ಪಿನ್ನರ್ ವರುಣ್ ಚಕ್ರವರ್ತಿ(Varun Chakravarthy) ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯೊಂದು ಕಂಡುಬಂದಿದೆ. ಗುರುವಾರದಿಂದ ಆರಣಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವರುಣ್ ಆಯ್ಕೆಯಾಗದಿದ್ದರೂ ಕೂಡ ಭಾರತ ತಂಡದೊಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಹೀಗಾಗಿ ವರುಣ್ ಅವರನ್ನು ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಸೇರ್ಪಡೆಗೊಳಿಸುವ ತಂತ್ರವನ್ನು ರೂಪಿಸಿದೆ ಎನ್ನಲಾಗಿದೆ.
ಒಂದೊಮ್ಮೆ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವುದಾದರೆ ಅವರಿಗಾಗಿ ತಂಡದಲ್ಲಿ ಜಾಗ ಬಿಟ್ಟುಕೊಡುವವರು ಯಾರು ಎಂಬುದು ಸದ್ಯದ ಕುತೂಹಲ. ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯಲ್ಲಿ ಚಕ್ರವರ್ತಿ ಒಟ್ಟು 14 ವಿಕೆಟ್ ಕಿತ್ತು ಮಿಂಚಿದ್ದರು. ಒಂದು ಪಂದ್ಯದಲ್ಲಿ 5 ವಿಕೆಟ್ ಗೊಂಚಲು ಪಡೆದಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಆಡುವುದು ಇನ್ನೂ ಖಚಿತಗೊಂಡಿಲ್ಲ. ಸದ್ಯ ಅವರು ಫಿಟ್ನೆಸ್ ಪರಿಶೀಲನೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ(ಎನ್ಸಿಎ) ಆಗಮಿಸಿದ್ದಾರೆ.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿಗೆ ಬುಮ್ರಾ ಅನುಮಾನ?; ಬದಲಿ ಬೌಲರ್ ಸಿದ್ಧಪಡಿಸಿದ ಬಿಸಿಸಿಐ!
31 ವರ್ಷದ ಬುಮ್ರಾ ಫಿಟ್ನೆಸ್ ಪರಿಶೀಲನೆಯ ಬಳಿಕ ಎನ್ಸಿಎ ವೈದ್ಯಕೀಯ ತಂಡ ಅಜಿತ್ ಅಗರ್ಕರ್ ಸಾರಥ್ಯದ ಆಯ್ಕೆ ಸಮಿತಿಗೆ ತನ್ನ ವರದಿಯನ್ನು ಸಲ್ಲಿಸುತ್ತದೆ. ಆ ಬಳಿಕ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಅಧಿಕೃತ ಮಾಹಿತಿ ನೀಡಲಿದೆ. ಒಂದೊಮ್ಮೆ ಜಸ್ಪ್ರೀತ್ ಬುಮ್ರಾ ಅಲಭ್ಯರಾದರೆ ಹರ್ಷಿತ್ ರಾಣಾ ಅವರು ಬುಮ್ರಾ ಸ್ಥಾನವನ್ನು ತುಂಬುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲು ಕಾರಣ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.