ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ ಹಾಗೂ ನಿರಂತರ ಪ್ರೊಡಕ್ಷನ್ಸ್ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.
ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಹಾಗೂ ಪ್ರವೀಣ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ ‘ಡಿಯರ್ ಹಸ್ಬೆಂಡ್’ ಎಂದು ಹೆಸರಿಡಲಾಗಿದ್ದು, ಸಸ್ಪೆನ್ಸ್ ಕಂ ಥ್ರಿಲ್ಲರ್ ಶೈಲಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.
‘ಡಿಯರ್ ಹಸ್ಬೆಂಡ್’ ಚಿತ್ರದ ಬಗ್ಗೆ ಸುದೀಪ್ ಏನಂದ್ರು?
"ನಾವು ಹೊಸಬರಾಗಿ ಬಂದಾಗ, ಅನೇಕ ಹಿರಿಯರು ನಮಗೆ ಪ್ರೋತ್ಸಾಹಿಸಿ, ಬೆನ್ನು ತಟ್ಟಿದ್ದರು. ಅದೇ ಕೆಲಸವನ್ನು ನಾವು ಈಗ ಹೊಸಬರಿಗೆ ಮಾಡುತ್ತಿದ್ದೇವೆ. ಅಂತಿಮವಾಗಿ ಕನ್ನಡ ಚಿತ್ರರಂಗ ಬೆಳೆಯಬೇಕು. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ಹೊಸಬರ ತಂಡದ ಮೂಲಕ ಖಂಡಿತವಾಗಿಯೂ ಹೊಸ ಥರದ ಸಿನಿಮಾ ಬರಲಿದೆ" ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಬೆಳ್ಳಿತೆರೆ ಮೇಲೆ ಪ್ರವೀಣ್
"ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಹೇಳುತ್ತಿರುವ ಕಥೆ ನಿಜಕ್ಕೂ ಅದ್ಭುತವಾಗಿದೆ. ನನಗೆ ಈ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರವಿದೆ. ಈ ಸಿನಿಮಾದ ಕಥೆ, ನನ್ನ ಪಾತ್ರ ಪ್ರೇಕ್ಷಕರಿಗೆ ಇಷ್ವವಾಗಲಿದೆ ಎಂಬ ಭರವಸೆಯಿದೆ. ಹೊಸವರ್ಷದ ಆರಂಭದಲ್ಲಿ ಹೊಸ ಸಿನಿಮಾವನ್ನ ಆರಂಭಿಸಿದ್ದೇವೆ. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದ್ದೇವೆ" ಎಂದು ಪ್ರವೀಣ್ ಹೇಳಿದರೆ, ಮತ್ತೋರ್ವ ನಟ ಸೂರಜ್ ಗೌಡ, "ತುಂಬ ಒಳ್ಳೆಯ ಕಥೆ ‘ಡಿಯರ್ ಹಸ್ಬೆಂಡ್’ ಸಿನಿಮಾದ ಮೂಲಕ ತೆರೆಮೇಲೆ ಬರುತ್ತಿದೆ. ನನಗೆ ವಿಭಿನ್ನ ಪಾತ್ರ ಇದೆ. ಚಿತ್ರದ ಸ್ಕ್ರಿಪ್ಟ್ ಬಹಳ ಚೆನ್ನಾಗಿದೆ" ಎಂದು ಹೇಳಿದ್ದಾರೆ.
ಈ ಚಿತ್ರಕ್ಕೆ ಶರಣ್ಯಾ ನಾಯಕಿ
"ಇಂದಿನ ಜನರೇಷನ್ಗೆ ಕನೆಕ್ಟ್ ಆಗುವಂಥ ಯೂತ್ ಫುಲ್ ಸಬ್ಜೆಕ್ಟ್ ಈ ಸಿನಿಮಾದಲ್ಲಿದೆ. ಇದರಲ್ಲಿ ವಾಸಂತಿ ಎಂಬ ಪಾತ್ರದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ. ಇಂಥದ್ದೊಂದು ವಿಭಿನ್ನ ಕಥೆ ಕಲಾವಿದರಿಗೆ ಸಿಗೋದು ಬಹಳ ಅಪರೂಪ. ನಿರ್ದೇಶಕ ಗುರುರಾಜ ಕುಲಕರ್ಣಿ ತುಂಬ ಒಳ್ಳೆಯ ಕಥೆಗೆ ನನ್ನನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಯಿದೆ" ಎಂದು ನಟಿ ಶರಣ್ಯಾ ಶೆಟ್ಟಿ ಹೇಳಿದ್ದಾರೆ.
‘ಡಿಯರ್ ಹಸ್ಬೆಂಡ್’ ಚಿತ್ರದ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಜನವರಿ ಅಂತ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ. ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಗೆ ಸಚಿನ್ ಬಸ್ರೂರು ಹಿನ್ನೆಲೆ ಸಂಗೀತವಿದ್ದು, ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಹರ್ಷ ಕುಮಾರ್ ಗೌಡ ಛಾಯಾಗ್ರಹಣ, ಬಿ. ಎಸ್. ಕೆಂಪರಾಜ್ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸುದೀಪ್ ಅವರ ಸಹಕಾರಕ್ಕೆ ಧನ್ಯವಾದಗಳು
"ಸುಮಾರು ಒಂದೂವರೆ ವರ್ಷಗಳಿಂದ ನಾವೆಲ್ಲರೂ ಸೇರಿ ಕಾಣುತ್ತಿದ್ದ ಕನಸು, ಈಗ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಕಿಚ್ಚ ಸುದೀಪ್ ಅವರ ಸಹಕಾರ ನಮ್ಮ ಚಿತ್ರಕ್ಕೆ ಸಿಕ್ಕಿರುವುದು ತುಂಬ ಖುಷಿಯಾಗಿದೆ. ಇಂದಿನ ಯುವಕರು ಇಷ್ಟಪಡುವಂಥ ಕಥೆಯೊಂದನ್ನು ಈ ಸಿನಿಮಾದಲ್ಲಿ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ. ನೋಡುಗರಿಗೆ ಈ ಸಿನಿಮಾ ಖಂಡಿತವಾಗಿಯೂ ಹೊಸಥರದ ಅನುಭವ ನೀಡಲಿದೆ ಎಂಬ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಬಗ್ಗೆ ಇನ್ನುಳಿದ ಮಾಹಿತಿ ನೀಡಲಿದ್ದೇವೆ" ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಹೇಳಿದರು.
ನಟ ಕಿಚ್ಚ ಸುದೀಪ್, ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ & ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದರೆ, ಕುಮಾರ್ ಬಂಗಾರಪ್ಪ, ಪ್ರವೀಣ್ ತೇಜ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಿರ್ದೇಶಕರಾದ ಶಶಾಂಕ್, ಎ. ಪಿ. ಅರ್ಜುನ್, ಕ್ರಿಕೆಟಿಗರಾದ ವೈಶಾಕ್ ವಿಜಯಕುಮಾರ್, ರಿತೇಶ್ ಸೇರಿದಂತೆ ಅನೇಕ ಗಣ್ಯರು ‘ಡಿಯರ್ ಹಸ್ಬೆಂಡ್’ ಚಿತ್ರತಂಡಕ್ಕೆ ಹಾರೈಸಿದರು.