ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಮ್ಮು-ಕಾಶ್ಮೀರದಲ್ಲಿ ನೆಲ ಬಾಂಬ್‌ ಸ್ಫೋಟ; ಇಬ್ಬರು ಯೋಧರಿಗೆ ಗಾಯ

Jammu and Kashmir: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಬಾರಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ನೆಲ ಬಾಂಬ್‌ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಶ್ರೀನಗರದ 92 ಬೇಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಇನ್ನಷ್ಟು ಭದ್ರತಾ ಪಡೆಗಳು ಧಾವಿಸಿದ್ದು, ಗಸ್ತು ಹೆಚ್ಚಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನೆಲ ಬಾಂಬ್‌ ಸ್ಫೋಟ; ಇಬ್ಬರು ಯೋಧರಿಗೆ ಗಾಯ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Jul 28, 2026 11:20 PM

ಶ್ರೀನಗರ, ಜು. 28: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಉರಿ ಸೆಕ್ಟರ್‌ನ ಬಾರಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ (ಜುಲೈ 28) ನೆಲ ಬಾಂಬ್‌ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ನೆಲದೊಳಗೆ ಹೂತಿಟ್ಟ ಬಾಂಬ್‌ ಸ್ಫೋಟಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ಶ್ರೀನಗರದ 92 ಬೇಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಇನ್ನಷ್ಟು ಭದ್ರತಾ ಪಡೆಗಳು ಧಾವಿಸಿದ್ದು, ಗಸ್ತು ಹೆಚ್ಚಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಯೋಧರ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಫೋಟಕ್ಕೆ ಕಾರಣವೇನು ಎನ್ನುವುದನ್ನು ಪತ್ತೆ ಹಚ್ಚಲು ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಇದು ಆಕಸ್ಮಿಕವೇ ಅಥವಾ ಇದರ ಹಿಂದೆ ಉಗ್ರರ ಕೈವಾಡವಿದೆಯೇ ಎನ್ನುವುದು ಗೊತ್ತಾಗಿಲ್ಲ. ಈ ನಿಟ್ಟಿನಲ್ಲೂ ತನಿಖೆ ನಡೆಯಲಿದೆ.

ಉರಿ ಸಮೀಪ ನಡೆದ ಸ್ಫೋಟ:



ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಭದ್ರತೆ ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಪರಿಶೀಲಿಸಲು ಜಮ್ಮುವಿನಲ್ಲಿ ಉನ್ನತ ಮಟ್ಟದ ಸಭೆ ನಡೆದ ದಿನದಂದೇ ಈ ಸ್ಫೋಟ ಸಂಭವಿಸಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಸಭೆಯ ಅಧ್ಯಕ್ಷತೆಯನ್ನು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ಮತ್ತು ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ವಹಿಸಿದ್ದರು. ಸಭೆಯಲ್ಲಿ, ಆಗಸ್ಟ್ 15ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಚರ್ಚೆ ನಡೆಸಲಾಯಿತು.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸ್ಫೋಟ: ಮೂವರು ಯೋಧರಿಗೆ ಗಾಯ

ಬಸ್‌ ಉರುಳಿ ಬಿದ್ದು ಅಮರನಾಥ ಯಾತ್ರಿಕರಿಗೆ ಗಾಯ

ಮಂಗಳವಾರ ಬೆಳಗ್ಗೆ ಮತ್ತೊಂದು ಅಪಘಾತ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಲ್‌ ಜಿಲ್ಲೆಯಲ್ಲಿ ನಡೆಯಿತು. ಅಮರನಾಥ ಯಾತ್ರಿಗಳು ಸಾಗುತ್ತಿದ್ದ ಬಸ್‌ ಕಂಗನ್‌ನಲ್ಲಿ ಉರುಳಿಬಿದ್ದು ಸುಮಾರು 39 ಭಕ್ತರು ಗಾಯಗೊಂಡರು. ಅಮರನಾಥ ಯಾತ್ರೆ ಮುಗಿಸಿ ಮರಳುತ್ತಿದ್ದ ಭಕ್ತರಿದ್ದ ಬಸ್‌ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿತು. ಕಡಿದಾದ ತಿರುವಿನಲ್ಲಿ ಚಾಲಕ ತನ್ನ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್‌ ರಸ್ತೆ ಸಮೀಪದಲ್ಲಿದ್ದ ಮನೆಗೆ ಗುದ್ದಿ ಮಗುಚಿ ಬಿತ್ತು ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಮನೆಗೂ ಸಾಕಷ್ಟು ಹಾನಿಯಾಗಿದೆ. ಅದಾಗ್ಯೂ ಬಸ್‌ ಮನೆಗೆ ಗುದ್ದಿದ್ದರಿಂದ ಬಹುದೊಡ್ಡ ಅಪಘಾತವೊಂದು ತಪ್ಪಿದೆ. ಇಲ್ಲದಿದ್ದರೆ ಬಸ್‌ ಸಿಂಧೂ ನದಿಗೆ ಉರುಳಿ ದೊಡ್ಡ ಅನಾಹುತವಾಗುವ ಸಾಧ್ಯತೆ ಇತ್ತು. ಅಪಘಾತದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ದಾಳಿಗೆ ಪೊಲೀಸ್ ಪೇದೆ ಹುತಾತ್ಮ

ಗಾಯಗೊಂಡ 39 ಭಕ್ತರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. " ಗಂದರ್‌ಬಲ್‌ನ ಗಣಿವಾನ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಮರನಾಥ ಯಾತ್ರಿಕರ ಆರೋಗ್ಯ ಸ್ಥಿತಿಯ ಬಗ್ಗೆ ಡೆಪ್ಯುಟಿ ಕಮಿಷನರ್ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿದೆ. 39 ಯಾತ್ರಿಕರು ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಸಿನ್ಹಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.