ಚೆನ್ನೈ, ಮೇ 6: 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿಜಯ್ ಅವರ ತಮಿಳಗ ವೆಟ್ರಿ ಕಳಗ (TVK) ಸದಸ್ಯ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಮಿಳುನಾಡಿನ ಚೆನ್ನೈ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬವು ಈ ವಾರದ ಆರಂಭದಲ್ಲಿ ದೂರು ದಾಖಲಿಸಿದ ನಂತರ ಆರೋಪಿ ದಿನೇಶ್ ಆಲಿಯಾಸ್ ಪಂಬು ದಿನೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ (Crime News).
ಅಧಿಕಾರಿಗಳ ಪ್ರಕಾರ, ಕೆಲವು ದಿನಗಳ ಹಿಂದೆ ಮೈಲಾಪುರ ನಿವಾಸಿ, 10 ವರ್ಷದ ಬಾಲಕಿ ಆರ್.ಕೆ. ನಗರ ಕ್ಷೇತ್ರದ ಕಾಸಿಮೇಡು ಸಿಂಗಾರವೇಲನ್ ನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಮಗು ಹೊರಗೆ ಆಟವಾಡುತ್ತಿದ್ದಾಗ ಅದೇ ಪ್ರದೇಶದಲ್ಲಿ ವಾಸಿಸುವ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.
ದಿನೇಶ್ ಮೇಲೆ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಬಾಲಕಿ ಮನೆಗೆ ಹಿಂತಿರುಗಿ ತನ್ನ ಚಿಕ್ಕಮ್ಮನಿಗೆ ಘಟನೆಯನ್ನು ವಿವರಿಸಿದ್ದಾಳೆ. ಆಕೆಯ ಪೋಷಕರಿಗೆ ತಿಳಿಸಲಾಯಿತು. ಮೇ 3ರಂದು ಕಾಸಿಮೇಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು; ಮೂವರು ಆರೋಪಿಗಳ ಬಂಧನ
ಈ ಸಂಬಂಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ರಾಯಪುರಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮೇ 4ರಂದು ಪೊಲೀಸ್ ತಂಡಗಳು ಆರೋಪಿಯನ್ನು ಬಂಧಿಸಲು ಪ್ರಯತ್ನಿಸಿದವು. ಆದರೆ ಆತ ಮತ ಎಣಿಕೆ ಕೇಂದ್ರದಲ್ಲಿ ಟಿವಿಕೆ ಪರವಾಗಿ ಆರ್.ಕೆ. ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಪರವಾಗಿ ಕಾರ್ಯ ನಿರ್ವಹಸುತ್ತಿದ್ದರಿಂದ ಆತನನ್ನು ಬಂಧಿಸಲು ಸಾಧ್ಯವಾಗಲಿಲ್ಲ. ನಂತರ ಆರೋಪಿಯನ್ನು ಪತ್ತೆಹಚ್ಚಿ ಅದೇ ದಿನ ರಾತ್ರಿ ಬಂಧಿಸಲಾಯಿತು.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಕಳವಳವನ್ನುಂಟು ಮಾಡಿದೆ. ವಿಶೇಷವಾಗಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 234ರಲ್ಲಿ 108 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿರುವಾಗಲೇ ಈ ಬೆಳವಣಿಗೆ ಕಂಡು ಬಂದಿದೆ.
2024ರಲ್ಲಿ ರಚನೆಯಾದ ಪಕ್ಷವು ಸರ್ಕಾರ ರಚಿಸಲು ಮುಂಚೂಣಿಯಲ್ಲಿದೆ. ಪಕ್ಷದ ಅಧ್ಯಕ್ಷ ವಿಜಯ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.