ಮತ್ತೆ ಸದ್ದು ಮಾಡಿದ ಅರಾವಳಿ ಬೆಟ್ಟ: ಗಂಭೀರ ಹಾನಿಯ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್, ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆದೇಶ
Aravalli hills case: ಅರಾವಳಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಗಂಭೀರ ಹಾನಿಯಾಗುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಅರಾವಳಿ ಪ್ರದೇಶದಲ್ಲಿ ಯಾವುದೇ ರೀತಿಯ ಅನಧಿಕೃತ ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಪರಿಸರ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಅಗತ್ಯವೆಂದು ಒತ್ತಿ ಹೇಳಿದೆ.
ಅರಾವಳಿ ಬೆಟ್ಟ (ಸಂಗ್ರಹ ಚಿತ್ರ) -
ನವದೆಹಲಿ, ಜ. 21: ಅರಾವಳಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ (Aravalli hills case) ಮುಂದುವರಿದರೆ ಪರಿಸರಕ್ಕೆ ಬದಲಾಯಿಸಲಾಗದ ಹಾನಿ ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಎಚ್ಚರಿಸಿದೆ. ಈ ಪ್ರದೇಶದಲ್ಲಿ ಯಾವುದೇ ಅನಧಿಕೃತ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ದೀರ್ಘಕಾಲದಿಂದ ನಡೆಯುತ್ತಿರುವ ಅರಾವಳಿ ಬೆಟ್ಟ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಹೇಳಿಕೆಗಳನ್ನು ನೀಡಿದೆ. ಇದರಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳನ್ನು ಸಮಗ್ರ ರೀತಿಯಲ್ಲಿ ಪರಿಶೀಲಿಸಲು ತಜ್ಞರ ಸಮಿತಿಯನ್ನು ನಿರ್ಮಿಸಲು ನಿರ್ಧರಿಸಿತು.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠವು, ಅರಾವಳಿ ಬೆಟ್ಟಗಳ ರಕ್ಷಣೆ ಅಗತ್ಯ. ಈ ಪ್ರದೇಶದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಬೇಕು ಎಂದು ಸ್ಪಷ್ಟಪಡಿಸಿದೆ.
ಭಾರತದ ವಾಯುವ್ಯದಲ್ಲಿರುವ ಅತ್ಯಂತ ಹಳೆಯ ಪರ್ವತ ಶ್ರೇಣಿಗಳಲ್ಲಿ ಅರಾವಳಿ ಬೆಟ್ಟ ಒಂದಾಗಿದ್ದು, ದೆಹಲಿಯಿಂದ ಗುಜರಾತ್ನವರೆಗೆ ಹರಿಯಾಣ ಮತ್ತು ರಾಜಸ್ಥಾನದ ಮೂಲಕ ಹಾದುಹೋಗುತ್ತದೆ. ಇದು ಥಾರ್ ಮರುಭೂಮಿಯ ವಿಸ್ತರಣೆಯನ್ನು ತಡೆಯುವ ಹಸಿರು ತಡೆಗೋಡೆಯಾಗಿದ್ದು ಪರಿಸರ ಸಂರಕ್ಷಣೆಯಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಈ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಅನಿಯಂತ್ರಿತ ಗಣಿಗಾರಿಕೆ ಶಾಶ್ವತವಾಗಿ ಹಾನಿ ಮಾಡುತ್ತದೆ ಎಂದು ನ್ಯಾಯಾಲಯವು ಹೇಳಿದೆ.
ಬೀದಿ ನಾಯಿಗಳ ಪರ ಹೇಳಿಕೆ: ಮೇನಕಾ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ
ವಿಚಾರಣೆಯ ವೇಳೆ ಅರಾವಳಿ ಪ್ರದೇಶದ ವಿವಿಧ ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಪೀಠದ ಗಮನಕ್ಕೆ ತರಲಾಯಿತು. ಇದನ್ನು ಗಮನಿಸಿದ ನ್ಯಾಯಾಲಯವು, ರಾಜಸ್ಥಾನ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರು ನೀಡಿದ ಭರವಸೆಯನ್ನು ದಾಖಲಿಸಿಕೊಂಡಿದ್ದು, ಯಾವುದೇ ಅನಧಿಕೃತ ಗಣಿಗಾರಿಕೆಯನ್ನು ಮುಂದುವರಿಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮಮತಾ ಬ್ಯಾನರ್ಜಿ VS ಜಾರಿ ನಿರ್ದೇಶಾನಲಯ: ನೋಟಿಸ್ ಜಾರಿಗೆ ಮುಂದಾದ ಸುಪ್ರೀಂ
ಅರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಮತ್ತು ಆಳವಾದ ಪರಿಶೀಲನೆ ನಡೆಸಲು ಪರಿಸರ ತಜ್ಞರು, ವಿಜ್ಞಾನಿಗಳು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಮತ್ತು ಅಮಿಕಸ್ ಕ್ಯುರಿಯೆ ಕೆ. ಪರಮೇಶ್ವರ್ ಅವರಿಗೆ ಪ್ರಸ್ತಾವಿತ ಸಮಿತಿಗೆ ಸೂಕ್ತ ಹೆಸರನ್ನು ನಾಲ್ಕು ವಾರಗಳೊಳಗೆ ಸೂಚಿಸುವಂತೆ ನಿರ್ದೇಶಿಸಿದೆ. ಈ ಸಮಿತಿ ನ್ಯಾಯಾಲಯದ ನೇರ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ತಜ್ಞರ ಸಮಿತಿಗೆ ಸಂಬಂಧಿಸಿದ ಸಲಹೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದ ಬಳಿಕ, ಈ ಪ್ರಕರಣವನ್ನು ನಾಲ್ಕು ವಾರಗಳ ನಂತರ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.