ಲಖನೌ, ಆ. 18: ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳವು (Ayodhya Ram Mandir donation theft case) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT), ಟ್ರಸ್ಟ್ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ (Champat Rai) ಅವರಿಗೆ ಕ್ಲೀನ್ ಚಿಟ್ ನೀಡಿದೆ. ಟ್ರಸ್ಟ್ನ ಮಾಜಿ ಸದಸ್ಯ ಅನಿಲ್ ಮಿಶ್ರಾ ಅವರ ಹೆಸರನ್ನು ಸಹ ಎಸ್ಐಟಿ ತೆರವುಗೊಳಿಸಿದೆ. ದೇಣಿಗೆ ಕಳವು ಆರೋಪ ಹೊರಬಿದ್ದ ನಂತರ ರಾಯ್ ಮತ್ತು ಮಿಶ್ರಾ ಇಬ್ಬರೂ ಅಯೋಧ್ಯೆ ರಾಮ ಮಂದಿರವನ್ನು ನಿರ್ವಹಿಸುವ ಟ್ರಸ್ಟ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.
ಅಯೋಧ್ಯೆ ರಾಮಮಂದಿರ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ತನಿಖಾ ತಂಡದ ಅಂತಿಮ ವರದಿಯನ್ನು ಉತ್ತರ ಪ್ರದೇಶ ಗೃಹ ಇಲಾಖೆಯು ಮುಂದಿನ ಕ್ರಮಕ್ಕಾಗಿ ಆಗಸ್ಟ್ 17ರಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಹಸ್ತಾಂತರಿಸಿದೆ. ಕಳವು ಆರೋಪಗಳು ಹೊರಬಿದ್ದ ನಂತರ ಜೂನ್ 27 ರಂದು ರಾಯ್ ಮತ್ತು ಮಿಶ್ರಾ ಟ್ರಸ್ಟ್ಗೆ ರಾಜೀನಾಮೆ ನೀಡಿದ್ದರು. ನಂತರ ದೇವಾಲಯದಲ್ಲಿ ದೇಣಿಗೆ ನಿರ್ವಹಣೆಯ ಪ್ರಕ್ರಿಯೆಯ ಕುರಿತು ಎಸ್ಐಟಿ ಅವರಿಬ್ಬರನ್ನೂ ವಿಚಾರಣೆ ನಡೆಸಿತು.
ವಿಚಾರಣೆಯ ಸಮಯದಲ್ಲಿ, ದೇವಾಲಯದಲ್ಲಿ ನಡೆದ ದೇಣಿಗೆ ಕಳವಿನಲ್ಲಿ ತನ್ನ ಪಾತ್ರವಿಲ್ಲ ಎಂಬುದಾಗಿ ಚಂಪತ್ ರಾಯ್ ಹೇಳಿದ್ದಾರೆ ಎನ್ನಲಾಗಿದೆ. ತಮ್ಮ ದೂರಿನ ಮೇರೆಗೆ ಶಂಕಿತರನ್ನು ಬಂಧಿಸಲಾಗಿದೆ ಎಂದು ಹೇಳಿದರು. ದೇಣಿಗೆ ಸಂಗ್ರಹದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳುವುದು ತನ್ನ ಜವಾಬ್ದಾರಿ. ತಪ್ಪಿನ ಬಗ್ಗೆ ತಿಳಿದ ತಕ್ಷಣ ತಾನು ಕಾರ್ಯನಿರ್ವಹಿಸಿದ್ದೇನೆ ಎಂದು ರಾಯ್ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಣಿಗೆ ಕಳವು ಪ್ರಕರಣ: ಅಯೋಧ್ಯೆ ರಾಮಮಂದಿರ ಟ್ರಸ್ಟ್ನಿಂದ ಬ್ಯಾಂಕ್ ಲಾಕರ್ನಲ್ಲಿರುವ ಚಿನ್ನ, ಬೆಳ್ಳಿ ಪರಿಶೀಲನೆ
ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಮೊದಲು, ಟ್ರಸ್ಟ್ನ ಕೋರಿಕೆಯ ಮೇರೆಗೆ ಜೂನ್ 13ರಂದು ರಾಜ್ಯ ಸರ್ಕಾರವು ಲಕ್ನೋ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ನೇತೃತ್ವದ ಮೂವರು ಸದಸ್ಯರ ಎಸ್ಐಟಿಯನ್ನು ರಚಿಸಿತು. ರೇಂಜ್ ಇನ್ಸ್ಪೆಕ್ಟರ್ ಜನರಲ್ ಕಿರಣ್ ಎಸ್. ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಕುಮಾರ್ ಈ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಸಮಿತಿಯು ಜೂನ್ 23ರಂದು ರಾಜ್ಯ ಸರ್ಕಾರಕ್ಕೆ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಹಲವು ಕಠಿಣ ಶಿಫಾರಸುಗಳನ್ನು ಮಾಡಿತ್ತು. ವರದಿಯ ಆಧಾರದ ಮೇಲೆ, ಟ್ರಸ್ಟ್ ಸದಸ್ಯ ಕೃಷ್ಣಮೋಹನ್ ಶ್ರೀ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದು, ಜೂನ್ 25ರಂದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಎಫ್ಐಆರ್ನಲ್ಲಿ ಎಂಟು ಮಂದಿಯನ್ನು, ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವ್ಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಮತ್ತು ಇತರ ಅಪರಿಚಿತರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಅವರೆಲ್ಲರನ್ನೂ ಬಂಧಿಸಿ ಭಾರತೀಯ ನ್ಯಾಯ ಸಂಹಿತದ ಸಂಬಂಧಿತ ವಿಭಾಗಗಳು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.