ಬೆಂಗಳೂರು: ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ (Sea Bird Bus Accident) ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಮುಖ್ಯಮಂತ್ರಿ ಟ್ವೀಟ್
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.