ನೀಟ್ ಪರೀಕ್ಷೆ ಅಕ್ರಮ; ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಿ ಎಂದು ಪ್ರಧಾನಿಗೆ ಪತ್ರ ಬರೆದ CJP
ನೀಟ್ ಪರೀಕ್ಷೆಯ ವಿವಾದಗಳ ನಡುವೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಪತ್ರ ಬರೆದಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ನೀಟ್ ಪರೀಕ್ಷೆಯ ವಿವಾದಗಳ ನಡುವೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಪತ್ರ ಬರೆದಿದ್ದಾರೆ. ಜೂನ್ 20ರಂದು ಜಂತರ್ ಮಂತರ್ನಲ್ಲಿ ನಡೆಯಲಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಮುನ್ನ ಈ ಪತ್ರ ಬರೆದಿರುವ ದೀಪ್ಕೆ, ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಜೊತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.
"ನಮ್ಮ ರಾಷ್ಟ್ರದ ಭವಿಷ್ಯಕ್ಕೆ - ನಮ್ಮ ಯುವ ವಿದ್ಯಾರ್ಥಿಗಳ ಜೀವನ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಬೆದರಿಕೆಯೊಡ್ಡುತ್ತಿರುವ ಹೆಚ್ಚುತ್ತಿರುವ ಬಿಕ್ಕಟ್ಟಿನ ಬಗ್ಗೆ ನಿಮ್ಮ ತುರ್ತು ಗಮನವನ್ನು ಸೆಳೆಯಲು ನಾನು ಇಂದು ಭಾರವಾದ ಹೃದಯದಿಂದ ನಿಮಗೆ ಬರೆಯುತ್ತಿದ್ದೇನೆ" ಎಂದು ದೀಪ್ಕೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇತ್ತೀಚಿನ ವಾರಗಳಲ್ಲಿ 11 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಅವರು, ಕಳೆದ 48 ಗಂಟೆಗಳಲ್ಲೇ ಐವರು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪರೀಕ್ಷೆಗಳ ಮರುನಿರ್ವಹಣೆ ಕುರಿತ ಅನಿಶ್ಚಿತತೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿವಾದಗಳಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ದೊಡ್ಡ ಪ್ರಮಾಣದ ಸಾಲ ಮಾಡಿದ್ದ ಅನೇಕ ಕುಟುಂಬಗಳು, ಈಗ ತಮ್ಮ ಮಕ್ಕಳನ್ನು ಕಳೆದುಕೊಂಡು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಇಂತಹ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷಣ ಸಚಿವರನ್ನು ತೆಗೆದುಹಾಕುವುದು ಸರ್ಕಾರದ ಹೊಣೆಗಾರಿಕೆಯ ಬದ್ಧತೆಯನ್ನು ಸೂಚಿಸುತ್ತದೆ. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಿ ಎಂದು ದೀಪ್ಕೆ ಮನವಿ ಮಾಡಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳು ಮತ್ತು ಪೋಷಕರ ವಿಶ್ವಾಸ ಮರುಸ್ಥಾಪನೆಗೆ ಹೊಣೆಗಾರಿಕೆ ನಿಗದಿಪಡಿಸುವುದು ಅತ್ಯಗತ್ಯ. ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಆಡಳಿತವು ಯಥಾಸ್ಥಿತಿಯನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಸಂದೇಶವನ್ನು ನೀಡುತ್ತದೆ ಎಂದು ಎಚ್ಚರಿಸಿದ್ದಾರೆ.