ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದಿಪ್ಕೆ ಶೀಘ್ರದಲ್ಲೇ ಭಾರತಕ್ಕೆ ವಾಪಸ್: ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಜೂನ್ 6ರಂದು ದೆಹಲಿಯಲ್ಲಿ ಜೆನ್ ಝೀ ಪ್ರತಿಭಟನೆ
ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದಿಪ್ಕೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿವಿಧ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜೂನ್ 6ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಅವರು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ ಎಂದು ಆರೋಪಿಸಿದ್ದಾರೆ.
ಸಾಂದರ್ಭಿಕ ಚಿತ್ರ ಮತ್ತು ಅಭಿಜಿತ್ ದಿಪ್ಕೆ (ಸಂಗ್ರಹ ಚಿತ್ರ) -
ದೆಹಲಿ, ಜೂ. 1: ಆನ್ಲೈನ್ ಅಭಿಯಾನ 'ಕಾಕ್ರೋಚ್ ಜನತಾ ಪಾರ್ಟಿಯ (Cockroach Janta Party) ಸ್ಥಾಪಕ ಅಭಿಜಿತ್ ದಿಪ್ಕೆ (Abhijeet Dipke) ಜೂನ್ 6ರಂದು ಭಾರತಕ್ಕೆ ಮರಳುವುದಾಗಿ ಘೋಷಿಸಿದ್ದು, ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅಲ್ಲದೆ, ಈ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿಯ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ವಿಡಿಯೊ ಸಂದೇಶ ಹಂಚಿಕೊಂಡಿರುವ ದಿಪ್ಕೆ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಈಗಾಗಲೇ 8 ಲಕ್ಷಕ್ಕೂ ಹೆಚ್ಚು ಜನರು ಆನ್ಲೈನ್ ಅರ್ಜಿಗೆ ಸಹಿ ಹಾಕಿದ್ದಾರೆ ಮತ್ತು ಕೋಟ್ಯಂತರ ನಾಗರಿಕರು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿದ್ದರೂ, ಸರ್ಕಾರ ಮಾತ್ರ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಆತಂಕಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಅವರು ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಅಭಿಜಿತ್ ದಿಪ್ಕೆ ಸಂದೇಶ:
Important announcement:
— Cockroach is Back (@Cockroachisback) June 1, 2026
CJP Founder @abhijeet_dipke will return to India on June 6 for a peaceful protest at Jantar Mantar, Delhi, demanding the resignation of the Education Minister. pic.twitter.com/x9M1v38Pwu
"ಪ್ರಸ್ತುತ ವ್ಯವಸ್ಥೆಯು ದೇಶದ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಜೀವನವನ್ನು ತಮಾಷೆ ಮಾಡಿದೆ" ಎಂದು ದಿಪ್ಕೆ ಕಿಡಿಕಾರಿದ್ದಾರೆ. ನೀಟ್, ಸಿಬಿಎಸ್ಇ, ಸಿಯುಇಟಿ ಮತ್ತು ಎಸ್ಎಸ್ಸಿ ಜಿಡಿ ಸೇರಿ ಹಲವು ಪ್ರಮುಖ ಪರೀಕ್ಷೆಗಳ ಗೊಂದಲಗಳನ್ನು ಪ್ರಸ್ತಾಪಿಸಿದ ಅವರು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಹೊಣೆಗಾರಿಕೆಯ ಕೊರತೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಕಾಕ್ರೋಚ್ ಜನತಾ ಪಕ್ಷದ ‘X’ ಖಾತೆ ಮರುಸ್ಥಾಪನೆಗೆ ನಿರ್ದೇಶನ ನೀಡಲು ಹೈಕೋರ್ಟ್ ನಕಾರ
ಶಾಂತಿಯುತ ಪ್ರತಿಭಟನೆ
ಜೂನ್ 6ರಂದು ದೆಹಲಿ ವಿಮಾನ ನಿಲ್ದಾಣದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವಂತೆ ದಿಪ್ಕೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಭಾರತಕ್ಕೆ ಬಂದಿಳಿದ ತಕ್ಷಣ ತಾವು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ, ಕೇಂದ್ರ ಸಚಿವರ ವಿರುದ್ಧ ಶಾಂತಿಯುತವಾಗಿ ಧರಣಿ ನಡೆಸಲು ಕಾನೂನುಬದ್ಧ ಅನುಮತಿ ಕೋರುವುದಾಗಿ ಅವರು ತಿಳಿಸಿದ್ದಾರೆ. "ನಮ್ಮ ಸಂವಿಧಾನವು ನಮಗೆ ಶಾಂತಿಯುತವಾಗಿ ಧ್ವನಿ ಎತ್ತಲು ಹಕ್ಕನ್ನು ನೀಡಿದೆ ಮತ್ತು ನಾವು ಅದನ್ನೇ ಮಾಡುತ್ತೇವೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶಿಕ್ಷಣ ಸಚಿವರ ರಾಜೀನಾಮೆಯನ್ನು ಬಯಸುವ ಪ್ರತಿಯೊಬ್ಬರೂ ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ದಿಪ್ಕೆ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಆತಂಕ ತಮ್ಮ ಕುಟುಂಬಕ್ಕೆ ಇದೆ. ಆದರೆ ಪ್ರಜಾಪ್ರಭುತ್ವದ ಹಕ್ಕುಗಳು ತಮಗೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತವೆ ಎಂಬ ನಂಬಿಕೆ ತಮಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಅಮೆರಿಕದಲ್ಲಿ ಉತ್ತಮ ಉದ್ಯೋಗಾವಕಾಶಗಳು ಬಂದಿದ್ದರೂ, ದೇಶದ ಮೇಲಿನ ಪ್ರೀತಿಯಿಂದಾಗಿ ಭಾರತಕ್ಕೆ ಮರಳಿ ಸೇವೆ ಸಲ್ಲಿಸಲು ನಿರ್ಧರಿಸಿರುವುದಾಗಿ ದಿಪ್ಕೆ ಬಹಿರಂಗಪಡಿಸಿದ್ದಾರೆ.