ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Flash Flood: ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ಐವರು ಸಾವು, 250ಕ್ಕೂ ಹೆಚ್ಚು ಜನರ ರಕ್ಷಣೆ

ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿಗುರುವಾರ ಹಠಾತ್ ಪ್ರವಾಹ ಕಾಣಿಸಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಂಗ್ರಾ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ತಿಳಿಸಿದ್ದಾರೆ.

ಕಾಂಗ್ರಾದಲ್ಲಿ ಹಠಾತ್ ಪ್ರವಾಹ

ಕಾಂಗ್ರಾ: ಹಿಮಾಚಲ ಪ್ರದೇಶದ (Himachal Pradesh) ಕಾಂಗ್ರಾದಲ್ಲಿ (Kangra) ಗುರುವಾರ ಹಠಾತ್ ಪ್ರವಾಹ (Flash Flood) ಕಾಣಿಸಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಂಗ್ರಾ ಪೊಲೀಸ್ ವರಿಷ್ಠಾಧಿಕಾರಿ (Kangra Superintendent of Police) ಶಾಲಿನಿ ಅಗ್ನಿಹೋತ್ರಿ ತಿಳಿಸಿದ್ದಾರೆ. ಧರ್ಮಶಾಲಾದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಧರ್ಮಶಾಲಾದ ಕೆಲವು ಭಾಗಗಳಲ್ಲಿ ಗುರುವಾರ ಪ್ರವಾಹ ಉಂಟಾಗಿದ್ದು, ರಾಜ್ಯ ಮತ್ತು ಕೇಂದ್ರ ವಿಪತ್ತು ಪ್ರತಿಕ್ರಿಯೆ ತಂಡಗಳು ಕಾರ್ಯಾಚರಣೆ ನಡೆಸಿ 250ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ.



ಈ ಸುದ್ದಿಯನ್ನೂ ಓದಿ: Building Collapses: 40 ವರ್ಷಗಳ ಹಿಂದಿನ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರು ಸಾವು, ಮತ್ತೊಬ್ಬ ನಾಪತ್ತೆ

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಲಿನಿ ಅಗ್ನಿಹೋತ್ರಿ, ʼʼಹಠಾತ್ ಪ್ರವಾಹವು ಹಲವು ಮಂದಿಯನ್ನು ಕೊಚ್ಚಿಕೊಂಡು ಹೋಗಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಸ್ಥಳೀಯ ಪೊಲೀಸರು ತಕ್ಷಣ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆʼʼ ಎಂದು ಹೇಳಿದ್ದಾರೆ.

ಹಠಾತ್ ಪ್ರವಾಹದಲ್ಲಿ ಅನೇಕರು ಕೊಚ್ಚಿಕೊಂಡು ಹೋಗಿದ್ದು, ಎಸ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಹಿಮಾಚಲ ಪ್ರದೇಶ ಗೃಹರಕ್ಷಕ ದಳದ ಸ್ವಯಂಸೇವಕರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದರಲ್ಲಿ 250 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೊಲೀಸರೊಂದಿಗೆ ತೊಡಗಿಕೊಂಡಿದೆ. ಈವರೆಗೆ ಒಟ್ಟು ಐದು ಶವಗಳು ಸಿಕ್ಕಿದ್ದು, ಇದರಲ್ಲಿ ನಾಲ್ಕು ಮಂದಿಯನ್ನು ಗುರುತಿಸಲಾಗಿದೆ. ಸದ್ಯ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜಾಗರೂಕರಾಗಿರಲು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಮತ್ತು ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು 24/7 ಲಭ್ಯವಾಗಿರುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಆದೇಶಿಸಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳು ಪೀಡಿತ ಪ್ರದೇಶದಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸುವಂತೆ ಸೂಚಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಇರುವ ಪ್ರದೇಶದಲ್ಲಿ ವಾಸಿಸುವ ಎಲ್ಲರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಅವರು ಮಳೆಗಾಲದಲ್ಲಿ ಯಾರೂ ನದಿಗಳ ಬಳಿ ಹೋಗದಂತೆ ಎಚ್ಚರಿಕೆ ನೀಡಲು ಸೂಚಿಸಿದ್ದಾರೆ.