ನವದೆಹಲಿ, ಜು.24: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ಅವರು 26 ದಿನಗಳ ಉಪಾವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕೆಲವೇ ಗಂಟೆಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮನವಿಯೊಂದು ಮಾಡಿದಾರೆರು ವೈದ್ಯರ ಸಲಹೆಯನ್ನು ಪಾಲಿಸಿ ಆರೋಗ್ಯವನ್ನು ಸುಧಾರಿಸಿಕೊಳ್ಳುವಂತೆ ಅವರಿಗೆ ಮನವಿ ಮಾಡಿದ್ದಾರೆ. “ಸೋನಮ್ ಅವರು ವೈದ್ಯರ ಸಲಹೆಯನ್ನು ಪಾಲಿಸಬೇಕು ಮತ್ತು ಸಾಧ್ಯವಾದಷ್ಟು ಬೇಗ ತಮ್ಮ ಹಳೆಯ ತೂಕವನ್ನು ಮರಳಿ ಪಡೆಯುವಂತಾಗಲಿ. ಅವರ ಉತ್ತಮ ಆರೋಗ್ಯಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜೂನ್ 28 ರಿಂದ ಉಪಾವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್, ಜಂತರ್ ಮಂತರ್ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಸರ್ಕಾರದ ಭರವಸೆಯ ಮೇರೆಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್, ಲೇಹ್ ಲಡಾಖ್ನ ಅಪೆಕ್ಸ್ ಬಾಡಿ ಹಿರಿಯ ನಾಯಕರು, ವೈದ್ಯರು ಮತ್ತು ಕುಟುಂಬ ಸದಸ್ಯರು ಆ ಸಮಯದಲ್ಲಿ ವಾಂಗ್ಚುಕ್ ಜೊತೆ ಹಾಜರಿದ್ದರು. ಸಚಿವರು ಸಾಮಾಜಿಕ ಕಾರ್ಯಕರ್ತನಿಗೆ ತಮ್ಮ ಉಪವಾಸ ಅಂತ್ಯಗೊಳಿಸಲು ಕಪ್ನಿಂದ ಒಂದು ಸಿಪ್ ತೆಗೆದುಕೊಳ್ಳಲು ಸಹಾಯ ಮಾಡಿದ್ದಾರೆ.
ಇಲ್ಲಿದೆ ಪೋಸ್ಟ್:
'ಯುವಕರ ಭವಿಷ್ಯಕ್ಕೆ ಆದ್ಯತೆ' ಪ್ರತಿಜ್ಞೆ ಮುರಿದಿದ್ದಾರೆ ಪ್ರಧಾನಿ ನರೇಂದ್ರ ಮೋದಿ: ರಾಹುಲ್ ಗಾಂಧಿ ಟೀಕೆ
“ನನ್ನ ಉಪಾವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಸಾಧ್ಯವಾಗಿರುವುದಕ್ಕೆ ನಾನು ಕೃತಜ್ಞನಾಗಿದ್ದೇನೆ ಸಂತೋಷವೂ ಆಗಿದೆ. ಧನ್ಯವಾದಗಳು” ಎಂದು ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಮುಂದೆ ವಾಂಗ್ಚುಕ್ ಹೇಳಿದರು. ನಂತರ ತಮ್ಮ ಪತ್ನಿಯತ್ತ ತಿರುಗಿ ಅವರು, “ಗೀತಾಂಜಲಿ ಯಾವಾಗಲೂ ನನ್ನ ಜೊತೆಗಿದ್ದಾರೆ. ನಾನು ನಿಮಗೆ ಧನ್ಯವಾದ ಹೇಳಲು ಬಯಸುವುದಿಲ್ಲ, ಬದಲಾಗಿ ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದರು.
“ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವವರು ಹಾಗೂ ಜುಲೈ 20ರಂದು ಸಂಸತ್ತಿನತ್ತ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸದಿರುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಶಿಕ್ಷಣ ಸುಧಾರಣೆಗಳಿಗೆ ಸಂಬಂಧಿಸಿದ ಪರಿಹಾರಗಳನ್ನು ಕಂಡುಕೊಳ್ಳಲು ಸಂಸತ್ತಿನಲ್ಲಿ ಚರ್ಚೆ ನಡೆಸುವುದಾಗಿ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಅಲ್ಲದೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆಯೂ ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸುತ್ತಿದೆ ಎಂದು ಸಚಿವ ನಡ್ಡಾ ಇದೇ ವೇಳೆ ಹೇಳಿದರು.
ಇಲ್ಲಿದೆ ಪೋಸ್ಟ್:
ಸೋನಮ್ ವಾಂಗ್ಚುಕ್ ಉಪಾವಾಸವನ್ನು ಕೊನೆಗೊಳಿಸಿದ್ದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ನಿರಾಶೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಸ್ವಂತ ಜೀವನವನ್ನೇ ಪಣಕ್ಕಿಟ್ಟು, ಇಡೀ ದೇಶದ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಿದ್ದೀರಿ. ನಿಮ್ಮ ಜೀವನ ಈ ದೇಶಕ್ಕೆ ಅತ್ಯಂತ ಅಮೂಲ್ಯವಾದದ್ದು ಎಂದು ದೀಪ್ಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್ನಲ್ಲಿ ಸಿಜೆಪಿಯ ಶಾಂತಿಯುತ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಅವರು ಹೇಳಿದರು. ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ನಡುವೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ವಿಡಿಯೊ ಸಂದೇಶದಲ್ಲಿ ಭರವಸೆ ನೀಡಿದ್ದಾರೆ.
“ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ ಎಂದು ನನಗೆ ತಿಳಿದಿದೆ. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಇದು ತುಂಬಾ ನೋವಿನ ಸಂಗತಿ. ಅದಕ್ಕಾಗಿಯೇ ಕಳೆದ ಎರಡೂವರೆ ತಿಂಗಳಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಅವರು ಹೇಳಿದರು.