ಪಾಟ್ನಾ, ಆ. 26: ನೇಪಾಳದಲ್ಲಿ ಹಠಾತ್ ಪ್ರವಾಹ (Nepal floods) ಉಂಟಾಗಿರುವುದರಿಂದ ಬಿಹಾರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಉತ್ತರ ಪ್ರದೇಶ (Uttar Pradesh) ಮತ್ತು ಬಿಹಾರದ ಅಧಿಕಾರಿಗಳು ನದಿಗಳಲ್ಲಿನ ಹರಿವು ಹೆಚ್ಚು ಉಂಟಾಗಬಹುದಾದ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಚುರುಕುಗೊಳಿಸಿದ್ದಾರೆ. ನೇಪಾಳದ ರಸುವಾ ಜಿಲ್ಲೆಯಲ್ಲಿ ಬುಧವಾರ (ಆ. 26) ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟು, ಭಾರತೀಯರು ಸೇರಿ ಹಲವರು ನಾಪತ್ತೆಯಾದ ಬಳಿಕ ಭಾರತದಲ್ಲೂ ಅಲರ್ಟ್ ಘೋಷಿಸಲಾಗಿದೆ. ಪ್ರವಾಹವು ಹಲವು ಪ್ರದೇಶಗಳಲ್ಲಿ ವ್ಯಾಪಕ ಹಾನಿಯನ್ನುಂಟು ಮಾಡಿದೆ. ಇದರಿಂದಾಗಿ ಅಧಿಕಾರಿಗಳು ಮೇಲ್ವಿಚಾರಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದ್ದಾರೆ.
ನೇಪಾಳದಿಂದ ಬಿಹಾರಕ್ಕೆ ಹಲವು ಪ್ರಮುಖ ನದಿಗಳು ಹರಿಯುತ್ತವೆ. ಅವುಗಳಲ್ಲಿ ಪ್ರಮುಖವಾದುದು ಗಂಡಕಿ ನದಿ (ನಾರಾಯಣಿ). ಇದು ಹಠಾತ್ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಕೋಸಿ ನದಿಯಲ್ಲೂ ಪ್ರವಾಹ ಉಂಟಾಗಿದೆ. ಈ ನದಿಗಳು ಭಾರತದ ಬಯಲು ಪ್ರದೇಶವನ್ನು ಪ್ರವೇಶಿಸುವ ಮೊದಲು ಹಿಮಾಲಯ ಮತ್ತು ಟಿಬೆಟ್ನಲ್ಲಿ ಹುಟ್ಟುತ್ತವೆ.
ನೇಪಾಳದಲ್ಲಿ ಉಂಟಾದ ದಿಢೀರ್ ಪ್ರವಾಹದ ದೃಶ್ಯ:
ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದರು. “ಉನ್ನತ ಮಟ್ಟದ ತಂಡವನ್ನು ರಚಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಇದನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾನು ಕೂಡ ತಕ್ಷಣ ಸಭೆ ನಡೆಸುತ್ತಿದ್ದೇನೆ. ಅಗತ್ಯವಿದ್ದರೆ, ನಾನೇ ಅಲ್ಲಿಗೆ ಹೋಗುತ್ತೇನೆ” ಎಂದು ಅವರು ತಿಳಿಸಿದರು.
ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ, ಭೂಕುಸಿತ: 5 ಸೇನಾ ಸಿಬ್ಬಂದಿ ನಾಪತ್ತೆ
ಗೃಹ ಸಚಿವ ಅಮಿತ್ ಶಾ ಈಗಾಗಲೇ ಬಿಹಾರ ಮುಖ್ಯಮಂತ್ರಿಯೊಂದಿಗೆ ಸನ್ನದ್ಧತೆಯ ಕುರಿತು ಮಾತನಾಡಿದ್ದಾರೆ. ಸರ್ಕಾರ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಬಿಹಾರ ಆರೋಗ್ಯ ಸಚಿವ ನಿಶಾಂತ್ ಕುಮಾರ್ ಹೇಳಿದ್ದಾರೆ. “ಆರೋಗ್ಯ ಇಲಾಖೆ ಎಚ್ಚರವಾಗಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಗತ್ಯವಿದ್ದರೆ ಸಾಧ್ಯವಾದಷ್ಟು ಬೇಗ ಸಹಾಯವನ್ನು ಒದಗಿಸಲು ಸಭೆಗಳನ್ನು ನಡೆಸಲಾಗುವುದು” ಎಂದು ಹೇಳಿದರು.
ನೇಪಾಳದ ಗಂಡಕಿ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ಮತ್ತು ನೀರಿನ ಹರಿವು ಹಠಾತ್ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಬಿಹಾರದಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಮಹಾರಾಜಗಂಜ್ ಮತ್ತು ಕುಶಿನಗರದಲ್ಲಿ ಎಚ್ಚರಿಕೆ ವಹಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ. “ಗಂಡಕಿ ಮತ್ತು ನಾರಾಯಣಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಮತ್ತು ಉತ್ತರ ಪ್ರದೇಶದ ಮಹಾರಾಜಗಂಜ್ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿರುವುದರಿಂದ, ಸ್ಥಳೀಯ ಆಡಳಿತವು ಸಂಪೂರ್ಣವಾಗಿ ಜಾಗರೂಕರಾಗಿರಲು ಮತ್ತು ಅಗತ್ಯ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ” ಎಂದು ಸಿಎಂ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ಸೇರಿ ಕನಿಷ್ಠ 384 ಪ್ರಯಾಣಿಕರು ಪ್ರವಾಹ ಪೀಡಿತ ಪ್ರದೇಶದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ವಿದೇಶಿಯರಲ್ಲಿ 105 ಮಂದಿ ಭಾರತೀಯರು ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ರಸುವಾ ಜಿಲ್ಲೆಯಲ್ಲಿ ಕನಿಷ್ಠ 26 ನೇಪಾಳ ಪೊಲೀಸ್ ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಶಸ್ತ್ರ ಪೊಲೀಸ್ ಪಡೆ ಕೂಡ ತನ್ನ ಏಳು ಸಿಬ್ಬಂದಿ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ.