ಭಾರತದ ವಿದೇಶಾಂಗ ಸಚಿವ ಜೈಶಂಕರ್ಗೆ ಇರಾನ್ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಕರೆ: ಕದನ ವಿರಾಮದ ಕುರಿತು ಮಹತ್ವದ ಚರ್ಚೆ
ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಭಾರತ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಕರೆ ಮಾಡಿ ಪಶ್ಚಿಮ ಏಷ್ಯಾದ ಪ್ರಸ್ತುತ ಯುದ್ಧ ಪರಿಸ್ಥಿತಿ ಮತ್ತು ಕದನ ವಿರಾಮದ ಬಗ್ಗೆ ಚರ್ಚೆ ನಡೆಸಿದರು. ಉಭಯ ದೇಶಗಳು ಮುಂದಿನ ದಿನಗಳಲ್ಲಿ ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿವೆ.
ಎಸ್. ಜೈಶಂಕರ್-ಸೈಯದ್ ಅಬ್ಬಾಸ್ ಅರಾಗ್ಚಿ (ಸಂಗ್ರಹ ಚಿತ್ರ) -
ದೆಹಲಿ, ಏ. 30: ಪಶ್ಚಿಮ ಏಷ್ಯಾದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ (Foreign Minister Seyed Abbas Araghchi) ಬುಧವಾರ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅವರಿಗೆ ದೂರವಾಣಿ ಕರೆ ಮಾಡಿ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದರು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾಸ್ಕೋದಲ್ಲಿ ಮಾತುಕತೆ ನಡೆಸಿದ ಎರಡೇ ದಿನಗಳಲ್ಲಿ ಅರಾಗ್ಚಿ ಭಾರತದ ಜತೆ ಸಂವಾದ ನಡೆಸಿರುವುದು ರಾಜತಾಂತ್ರಿಕವಾಗಿ ಹೆಚ್ಚಿನ ಮಹತ್ವ ಪಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಜೈಶಂಕರ್, "ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದೆ. ಪ್ರಸ್ತುತ ಪರಿಸ್ಥಿತಿಯ ವಿವಿಧ ಆಯಾಮಗಳ ಬಗ್ಗೆ ನಾವು ವಿವರವಾದ ಸಂಭಾಷಣೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪರಸ್ಪರ ನಿಕಟ ಸಂಪರ್ಕದಲ್ಲಿರಲು ನಾವು ಸಮ್ಮತಿಸಿದ್ದೇವೆ" ಎಂದು ತಿಳಿಸಿದರು. ಉಭಯ ನಾಯಕರು ಕದನ ವಿರಾಮಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ದ್ವಿಪಕ್ಷೀಯ ಸಂಬಂಧಗಳು ಹಾಗೂ ಪ್ರಾದೇಶಿಕ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಹೈಕೋರ್ಟ್ ವಿಚಾರಣೆಯ ವೇಳೆಯಲ್ಲೇ ಅಶ್ಲೀಲ ವಿಡಿಯೋ ಪ್ರದರ್ಶನ
ವಿಶೇಷವಾಗಿ ಇರಾನ್ ಬಂದರುಗಳ ಮೇಲೆ ಅಮೆರಿಕ ಹೇರಿರುವ ದಿಗ್ಬಂಧನ ಮತ್ತು ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ವಿಧಿಸಿರುವ ನಿರ್ಬಂಧಗಳಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದಾಗ ಈ ಯುದ್ಧ ಪ್ರಾರಂಭವಾಯಿತು. ಈ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮತ್ತು ಹಲವು ಉನ್ನತ ಕಮಾಂಡರ್ಗಳು ಮೃತಪಟ್ಟಿದ್ದಾರೆ. ಇದರ ನಂತರ ಇರಾನ್ ನಡೆಸಿದ ಪ್ರತಿದಾಳಿಯಿಂದಾಗಿ ಯುದ್ಧವು ಇಡೀ ಗಲ್ಫ್ ಪ್ರದೇಶಕ್ಕೆ ವ್ಯಾಪಿಸಿತು. ಪ್ರಸ್ತುತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದು, ಶಾಂತಿ ಸ್ಥಾಪನೆಗೆ ಇರಾನ್ನಿಂದ ಸಂಘಟಿತ ಪ್ರಸ್ತಾವನೆಯನ್ನು ನಿರೀಕ್ಷಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತವು ಜಾಗತಿಕ ಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇರಾನ್ ಸಚಿವರ ಈ ಕರೆ ಭಾರತವು ಈ ವಲಯದಲ್ಲಿ ಹೊಂದಿರುವ ಪ್ರಭಾವವನ್ನು ಎತ್ತಿ ತೋರಿಸಿದೆ.