ಇಂಫಾಲ್: ಮಣಿಪುರ (Manipur)ದ ಬಿಷ್ಣುಪುರ (Bhishnupur) ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಭೀಕರ ಜನಾಂಗೀಯ ಉದ್ವಿಗ್ನತೆ ಕಾಣಿಸಿಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 21 ನಾಗರಿಕರು ಗಾಯಗೊಂಡಿದ್ದಾರೆ. ಈ ಹಿಂಸಾತ್ಮಕ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ಸುಮಾರು 1:30 ಗಂಟೆಯ ಸಮಯದಲ್ಲಿ ಬಿಷ್ಣುಪುರ (Bhishnupur) ಜಿಲ್ಲೆಯ ತಿನುಂಗೈ (Thinungei) ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ನಾಗರಿಕ ಉಡುಪಿನಲ್ಲಿದ್ದ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಮೂರು ಖಾಸಗಿ ವಾಹನಗಳನ್ನು ಸ್ಥಳೀಯರು ತಡೆದಿದ್ದಾರೆ. ಈ ಸಿಬ್ಬಂದಿಯ ಗುರುತು ಮತ್ತು ಅವರ ಪ್ರಯಾಣದ ಉದ್ದೇಶದ ಬಗ್ಗೆ ಹರಡಿದ ಕೆಲವು ದೃಢೀಕರಿಸದ ವದಂತಿಗಳು ಜನರ ಆಕ್ರೋಶಕ್ಕೆ ಕಾರಣವಾದವು. ಈ ವಾಹನಗಳಲ್ಲಿ ಕುಕಿ ಶಸ್ತ್ರಸಜ್ಜಿತ ಉಗ್ರಗಾಮಿಗಳು ಅಡಗಿದ್ದಾರೆ ಎಂದು ಶಂಕಿಸಿದ ಪ್ರತಿಭಟನಾಕಾರರ ಗುಂಪು ಹಿಂಸಾಚಾರಕ್ಕೆ ತಿರುಗಿತು. ಉದ್ರಿಕ್ತ ಗುಂಪು ಎರಡು ವಾಹನಗಳಿಗೆ ಬೆಂಕಿ ಹಚ್ಚಿ ಸಂಪೂರ್ಣವಾಗಿ ನಾಶಪಡಿಸಿದೆ.
ಅಮೆರಿಕ ದಿಗ್ಬಂಧನ ಮುರಿಯಲಾಗದೆ ಮಾರ್ಗ ಬದಲಿಸಿದ ಚೀನಾ ಹಡಗು
ಪೊಲೀಸ್ ಕಾರ್ಯಾಚರಣೆ ಮತ್ತು ನಿಷೇಧಾಜ್ಞೆ ಜಾರಿ:
ಘಟನಾ ಸ್ಥಳಕ್ಕೆ ಮಣಿಪುರ ಪೊಲೀಸರ ಹಲವು ತಂಡಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ ಪ್ರತಿಭಟನಾಕಾರರೊಂದಿಗೆ ಸಂಘರ್ಷ ಏರ್ಪಟ್ಟಿತು. ಈ ಸಂಘರ್ಷದಲ್ಲಿ 21 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪರಿಸ್ಥಿತಿಯು ಕೈಮೀರಿ ಹೋಗುವುದನ್ನು ತಡೆಯಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ. ಮಂಗಳವಾರ ಸಂಜೆ 5 ಗಂಟೆಯಿಂದ ಮುಂದಿನ ಆದೇಶದವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.
ಸಾರ್ವಜನಿಕರ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದ್ದು, ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಮಣಿಪುರದಲ್ಲಿ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿರುವ ಜನಾಂಗೀಯ ಬಿಕ್ಕಟ್ಟಿನ ನಡುವೆ ಈ ಹೊಸ ಘಟನೆಯು ರಾಜ್ಯದಲ್ಲಿ ಶಾಂತಿ ಸ್ಥಾಪನೆಯ ಸವಾಲನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.