Nagpur Violence: ನಾಗ್ಪುರ ಹಿಂಸಾಚಾರಕ್ಕೆ ಕಾರಣವಾಯ್ತಾ ʻಛಾವಾʼ ಚಿತ್ರ? ಸಿಎಂ ಫಡ್ನವೀಸ್ ಹೇಳಿದ್ದೇನು?
Nagpur Violence: ನಾಗ್ಪುರದಲ್ಲಿ ನಡೆದ ಕೋಮು ಗಲಭೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಹಿಂಸಾಚಾರದಲ್ಲಿ ಮೂವರು ಪೊಲೀಸ್ ಉಪ ಆಯುಕ್ತರು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಹಿರಿಯ ಅಧಿಕಾರಿಗಳಲ್ಲಿ ಒಬ್ಬರ ಮೇಲೆ ಕೊಡಲಿಯಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಿದರು.


ಮುಂಬೈ: ಮಹಾರಾಷ್ಟ್ರ ನಾಗ್ಪುರದಲ್ಲಿ ಔರಂಗಜೇಬ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ಕೋಮು ಘರ್ಷಣೆ(Nagpur Violence) ತಾರಕಕ್ಕೇರಿದ್ದು, ಇದೊಂದು ಪೂರ್ವಯೋಜಿತ ಪಿತೂರಿ ಎಂಬ ಆರೋಪ ಕೇಳಿಬಂದಿದೆ. ಮಂಗಳವಾರ, ನಾಗ್ಪುರದಲ್ಲಿ ನಡೆದ ಕೋಮು ಗಲಭೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಹಿಂಸಾಚಾರದಲ್ಲಿ ಮೂವರು ಪೊಲೀಸ್ ಉಪ ಆಯುಕ್ತರು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಹಿರಿಯ ಅಧಿಕಾರಿಗಳಲ್ಲಿ ಒಬ್ಬರ ಮೇಲೆ ಕೊಡಲಿಯಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಿದರು.
ನಾಗ್ಪುರದ ಕೆಲವು ಭಾಗಗಳಲ್ಲಿ ಸಾಮಾಜಿಕ ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಯೋಜಿತ ಮಾದರಿಯಲ್ಲಿ ಜನರ ಗುಂಪೊಂದು ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಿದೆ. ಮೂವರು ಡಿಸಿಪಿಗಳು ಸೇರಿದಂತೆ ಮೂವತ್ಮೂರು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಐದು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ಒಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ಫಡ್ನವೀಸ್ ಹೇಳಿದರು.
ಪೊಲೀಸ್ ಅಧಿಕಾರಿಗಳ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ಯಾರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡುವ ನಿರ್ದಿಷ್ಟ ಉದ್ದೇಶದಿಂದ ಗುಂಪು ಶಸ್ತ್ರಾಸ್ತ್ರಗಳು ಮತ್ತು ಕಲ್ಲುಗಳಿಂದ ತುಂಬಿದ ಟ್ರಾಲಿಯನ್ನು ಹೊಂದಿತ್ತು ಎಂದು ಫಡ್ನವೀಸ್ ಹೇಳಿದ್ದಾರೆ.
On Nagpur violence, Maharashtra CM Devendra Fadnavis says, "This violent incident and riots seem to be pre-planned."
— ANI (@ANI) March 18, 2025
"Chhava movie has ignited people’s anger against Aurangzeb still, everyone must keep Maharashtra peaceful." pic.twitter.com/XYaDSuBP7X
ನಾಗ್ಪುರದಲ್ಲಿ ಕರ್ಫ್ಯೂ
ಸೋಮವಾರ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯ ವಿರುದ್ಧ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ಕಾರಣವಾಗಿತ್ತು. ಹಿಂಸಾಚಾರದಲ್ಲಿ ಹಲವಾರು ಮನೆಗಳು ಮತ್ತು ವಾಹನಗಳನ್ನು ಧ್ವಂಸಗೊಂಡ ನಂತರ ನಾಗ್ಪುರ ನಗರದ ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಗಲಭೆಗೆ ಕಾರಣವಾಯ್ತಾ ಛಾವಾ ಚಿತ್ರ?
ಇನ್ನು ಹಿಂಸಾಚಾರಕ್ಕೆ ಇತ್ತೀಚೆಗೆ ಬಿಡುಗಡೆಗೊಂಡ ವಿಕ್ಕಿ ಕೌಶಲ್ ಅಭಿನಯದ ಛಾವಾ ಚಿತ್ರವು ಒಂದು ರೀತಿಯಲ್ಲಿ ಕಾರಣವಾಗಿದೆ. ಇದರಿಂದಾಗಿ ಔರಂಗಜೇಬ್ ವಿರುದ್ಧ ಜನರ ಕೋಪ ಮತ್ತಷ್ಟು ಹೆಚ್ಚಿಸಿತ್ತು ಎಂದು ಫಡ್ನವೀಸ್ ಹೇಳಿದ್ದಾರೆ. ಅಲ್ಲದೇ ಜನರು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಛಾವಾ ಚಿತ್ರವು ಔರಂಗಜೇಬ್ ವಿರುದ್ಧ ಜನರ ಕೋಪಕ್ಕೆ ಮತ್ತಷ್ಟು ಕಿಚ್ಚು ಹಚ್ಚಿತ್ತು. ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ಯಾರಾದರೂ ಗಲಭೆ ಮಾಡಿದರೆ, ಜಾತಿ ಅಥವಾ ಧರ್ಮವನ್ನು ಲೆಕ್ಕಿಸದೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಎಚ್ಚರಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Aurangzeb Tomb Row: ನಾಗ್ಪುರ ಹಿಂಸಾಚಾರ; ಗಲಭೆ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
ಏನಿದು ವಿವಾದ?
ಸಂಭಾಜಿ ನಗರದ ಔರಂಗಜೇಬ್ ಸಮಾಧಿಯ ಕುರಿತು ಭಾರಿ ವಿವಾದ ಉಂಟಾಗಿದ್ದು, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಂತಹ ಹಿಂದೂ ಸಂಘಟನೆಗಳು ಅದನ್ನು ಕೆಡವಲು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ಘರ್ಷಣೆಗಳು ನಡೆದಿವೆ. ಘರ್ಷಣೆಗಳು ಭುಗಿಲೆದ್ದ ಗಂಟೆಗಳ ಮೊದಲು, ಸೋಮವಾರ ಬೆಳಿಗ್ಗೆ ನಾಗ್ಪುರದಲ್ಲಿ ಎರಡೂ ಗುಂಪುಗಳು ಪ್ರತಿಭಟನೆಗಳನ್ನು ನಡೆಸಿದ್ದವು.