ನವದೆಹಲಿ, ಜು. 25: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಯೊಂದಿಗೆ ತನ್ನ ಪ್ರಮುಖ ಬೇಡಿಕೆಗಳಲ್ಲಿ ಒಂದನ್ನು ಈಡೇರಿಸಲಾಗಿದ್ದರೂ, ಉಳಿದ ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಹೇಳಿದೆ. ಸದ್ಯ ಈ ಭರವಸೆ ಈಡೇರಿಸುವುದಾಗಿ ಕೇಂದ್ರ ಭರವಸೆ ನೀಡಿದ್ದಾಗಿ ಸಿಜೆಪಿ ತಿಳಿಸಿದೆ. ಕೇಂದ್ರ ಸಚಿವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಜೆಪಿ ನಾಯಕರು ಈ ವಿಶ್ವಾಸ ವ್ಯಕ್ತಪಡಿಸಿದರು.
ಇಡೀ ದೇಶವು ಇನ್ನೂ ಉಳಿದ ಬೇಡಿಕೆಗಳಿಗಾಗಿ ಕಾಯುತ್ತಿದೆ ಎಂದು ಎಕ್ಸ್ನಲ್ಲಿ ಸಿಜೆಪಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.
- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು (ಆಗಿದೆ).
- ಆತ್ಮಹತ್ಯೆಯಿಂದ ಮೃತಪಟ್ಟ ಎಲ್ಲ ವಿದ್ಯಾರ್ಥಿಗಳ ಕುಟುಂಬಗಳಿಗೆ ರೂ. 1 ಕೋಟಿ ರುಪಾಯಿ ಪರಿಹಾರ - ಬಾಕಿ ಇದೆ
- ಯಾವುದೇ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ - ಬಾಕಿ ಇದೆ.
- RAF ಮತ್ತು ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆ - ಬಾಕಿ ಇದೆ.
ಇಲ್ಲಿದೆ ಪೋಸ್ಟ್:
ಪ್ರಧಾನ್ ಅವರ ರಾಜೀನಾಮೆ ಸ್ವಾಗತಿಸಿದ ಸಿಜೆಪಿ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕಾಕ್ರೋಚ್ ಜನತಾ ಪಾರ್ಟಿ ಸ್ವಾಗತಿಸಿದೆ. ನಾವು ಅದನ್ನು ಸಾಧಿಸಿದ್ದೇವೆ ಎಂದು ಹೇಳಿದ ಅಭಿಜಿತ್ ದಿಪ್ಕೆ, ಇದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಮೊದಲ ರಾಜೀನಾಮೆ ಎಂದು ಹೇಳಿದರು. ಸಚಿವರ ರಾಜೀನಾಮೆ ಸುದ್ದಿ ತಿಳಿದ ನಂತರ ಪ್ರತಿಭಟನಾಕಾರರು ಸಂಭ್ರಮಾಚರಣೆ ಮಾಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಜುಲೈ 25ರಂದು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ ಅವರು ಈ ನಿರ್ಧಾರ ಪ್ರಕಟಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆವರೆಗೆ; ಯಾವಾಗ, ಏನೇನಾಯ್ತು?
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪತ್ರದಲ್ಲಿ, ಅದು ಎಂದಿಗೂ ತಮಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಾಗಿಲ್ಲ ಎಂದು ಹೇಳಿದ್ದಾರೆ. “ನನ್ನ ಯುವ ಸ್ನೇಹಿತರೇ, ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ನಾನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ರಂಗದ ಸುಧಾರಣೆಯ ಕಾರ್ಯಕ್ಕಾಗಿ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ದೂರದೃಷ್ಟಿಯ ಶಿಕ್ಷಣ ವ್ಯವಸ್ಥೆಯು ಬಲವಾದ ರಾಷ್ಟ್ರದ ಬುನಾದಿಯಾಗಿದೆ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.