ನವದೆಹಲಿ: ಕೆಂಪು ಕೋಟೆಯ ಬಳಿ ನವೆಂಬರ್ 11ರಂದು ನಡೆದ ಸ್ಫೋಟದಲ್ಲಿ (Delhi Blast) ಒಟ್ಟು 13 ಮಂದಿ ಮೃತಪಟ್ಟಿದ್ದು, 20 ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭೂತಾನ್ನಿಂದ ಹಿಂದಿರುಗಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್ಎನ್ಜೆಪಿ) ಆಸ್ಪತ್ರೆಯಲ್ಲಿ ಕೆಂಪು ಕೋಟೆ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ, ದೆಹಲಿಯಲ್ಲಿ ಬಂದಿಳಿದ ನಂತರ ನೇರವಾಗಿ ಎಲ್ಎನ್ಜೆಪಿ ಆಸ್ಪತ್ರೆಗೆ ತೆರಳಿದರು. ಅಲ್ಲಿ ಅವರು ಗಾಯಾಳುಗಳೊಂದಿಗೆ ಮಾತನಾಡಿದ್ದಾರೆ.
ಗಾಯಾಳುಗಳನ್ನು ಪ್ರತ್ಯೇಕವಾಗಿ ಭೇಟಿಯಾಗಿ ಸಂವಾದ ನಡೆಸಿದ ಪ್ರಧಾನಿ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಆಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರು ಮೋದಿಗೆ ಮಾಹಿತಿ ನೀಡಿದರು. "ದೆಹಲಿಯಲ್ಲಿ ನಡೆದ ಸ್ಫೋಟದ ಸಂದರ್ಭದಲ್ಲಿ ಎಲ್ಎನ್ಜೆಪಿ ಆಸ್ಪತ್ರೆಗೆ ಹೋಗಿ ಗಾಯಗೊಂಡವರನ್ನು ಭೇಟಿಯಾದೆ. ಎಲ್ಲರೂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು!" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸೋಮವಾರ, ಕೆಂಪು ಕೋಟೆ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರೊಂದು ಸ್ಫೋಟಗೊಂಡು 13 ಜನರು ಸಾವನ್ನಪ್ಪಿದ್ದಾರೆ. ಜೈಶ್-ಎ-ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಒಳಗೊಂಡ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿ ಹರಿಯಾಣದ ಫರಿದಾಬಾದ್ನಿಂದ 2,900 ಕಿಲೋಗ್ರಾಂಗಳಷ್ಟು ಐಇಡಿ ತಯಾರಿಸುವ ವಸ್ತುಗಳನ್ನು ವಶಪಡಿಸಿಕೊಂಡ ಒಂದೇ ದಿನದಲ್ಲಿ ದೆಹಲಿಯಲ್ಲಿ ಸ್ಫೋಟ ಸಂಭವಿಸಿದೆ.