ದೇಶಾದ್ಯಂತ ಜಾರಿಯಾಗುತ್ತಾ ಆನ್ಲೈನ್ ಕ್ಲಾಸ್? ಪ್ರಧಾನಿ ಮೋದಿ ಹೇಳಿದ್ದೇನು?
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತದ ಇಂಧನ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮತ್ತೊಮ್ಮೆ ನಾಗರಿಕರನ್ನು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಶಾಲೆಗಳಲ್ಲಿ ತರಗತಿಗಳನ್ನು ನಡೆಸುವುದರ ಬದಲು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಶಾಲೆಗಳಿಗೆ ಮನವಿ ಮಾಡಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತದ ಇಂಧನ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಮತ್ತೊಮ್ಮೆ ನಾಗರಿಕರನ್ನು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಶಾಲೆಗಳಲ್ಲಿ ತರಗತಿಗಳನ್ನು ನಡೆಸುವುದರ ಬದಲು ಆನ್ಲೈನ್ ತರಗತಿಗಳನ್ನು (Online Class) ಪ್ರಾರಂಭಿಸುವಂತೆ ಶಾಲೆಗಳಿಗೆ ಮನವಿ ಮಾಡಿದ್ದಾರೆ. ಕೋವಿಡ್-19 (Covid 19) ಸಾಂಕ್ರಾಮಿಕ ರೋಗದ ಸಮಯದಲ್ಲಿ ಲಾಕ್ಡೌನ್ ಸಮಯದಲ್ಲಿ ತರಗತಿ ಮನೆಗಳಿಗೆ ಸ್ಥಳಾಂತರಗೊಂಡಿತ್ತು. ಅಲ್ಲಿಂದ ಭಾರತ ಮತ್ತು ಪ್ರಪಂಚದಾದ್ಯಂತ ಆನ್ಲೈನ್ ಕಲಿಕೆ ಸಾಮಾನ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.
ಗುಜರಾತ್ನ ವಡೋದರಾದಲ್ಲಿ ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟನೆ ಸಂದರ್ಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಶಾಲೆಗಳು ಮತ್ತೆ ಇದೇ ರೀತಿಯ ಕ್ರಮವನ್ನು ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಿದೆ. "ಕೆಲವು ಶಾಲೆಗಳು ಆನ್ಲೈನ್ ತರಗತಿಗಳಿಗೆ ವ್ಯವಸ್ಥೆ ಮಾಡುವಂತೆ ನಾನು ಒತ್ತಾಯಿಸುತ್ತೇನೆ" ಎಂದು ಹೇಳಿದ್ದಾರೆ. "ಪಶ್ಚಿಮ ಏಷ್ಯಾ ಬಿಕ್ಕಟ್ಟು ಈ ದಶಕದಲ್ಲಿ ಅತ್ಯಂತ ಕೆಟ್ಟದಾಗಿದೆ; ನಾವು COVID-19 ಸಾಂಕ್ರಾಮಿಕ ರೋಗವನ್ನು ಜಯಿಸಿದಂತೆಯೇ, ನಾವು ಇದರಿಂದಲೂ ಹೊರಬರುತ್ತೇವೆ" ಎಂಬ ಭರವಸೆ ಇದೆ ಎಂದು ಮೋದಿ ಹೇಳಿದ್ದಾರೆ.
ಇಂಧನ ಬಳಕೆಯನ್ನು ಕಡಿಮೆ ಮಾಡುವಲ್ಲಿ ತಂತ್ರಜ್ಞಾನದ ಪಾತ್ರವನ್ನು ಒತ್ತಿ ಹೇಳಿದ ಅವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ವರ್ಚುವಲ್ ಸಭೆಗಳನ್ನು ನಡೆಸುವಂತೆ ಸೂಚಿಸಿದ್ದಾರೆ. ದೇಶದ ಸಂಪನ್ಮೂಲಗಳ ಮೇಲಿನ ಹೊರೆ ಕಡಿಮೆ ಮಾಡಲು ಸಾಮೂಹಿಕ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ನಾಗರಿಕರನ್ನು ಮೋದಿ ಒತ್ತಾಯಿಸಿದ್ದಾರೆ. "ದೇಶದ ಸಂಪನ್ಮೂಲಗಳ ಮೇಲಿನ ಹೊರೆ ಕಡಿಮೆ ಮಾಡಲು ನಾವೆಲ್ಲರೂ ಒಗ್ಗೂಡಿ ನಮ್ಮ ಜವಾಬ್ದಾರಿಯನ್ನು ಪೂರೈಸುವ ಅವಶ್ಯಕತೆಯಿದೆ. ವಿದೇಶಗಳಿಂದ ಅನೇಕ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಭಾರತವು ಲಕ್ಷಾಂತರ ಕೋಟಿ ರೂಪಾಯಿಗಳನ್ನು ವಿದೇಶಿ ವಿನಿಮಯದಲ್ಲಿ ಖರ್ಚು ಮಾಡುತ್ತದೆ. ಅದೇ ಸಮಯದಲ್ಲಿ, ಆಮದು ಮಾಡಿಕೊಂಡ ಸರಕುಗಳ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ಜಾಗತಿಕ ಪೂರೈಕೆ ಸರಪಳಿಗಳು ಸಹ ತೀವ್ರವಾಗಿ ಅಸ್ತವ್ಯಸ್ತಗೊಂಡಿವೆ. ಪ್ರತಿ ಹನಿಯೂ ಒಂದು ಪಾತ್ರೆಯನ್ನು ತುಂಬುವಂತೆಯೇ, ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಪ್ರಯತ್ನವೂ ಮುಖ್ಯವಾಗಿದೆ" ಎಂದು ಪ್ರಧಾನಿ ಹೇಳಿದರು.
ಪೆಟ್ರೋಲ್ ಡಿಸೇಲ್ ಕೊರತೆ ಇಲ್ಲ
ಪಶ್ಚಿಮ ಏಷ್ಯಾ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವನ್ನು ಕಡಿಮೆ ಮಾಡಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಉದ್ವಿಗ್ನತೆಯ ನಡುವೆ ಇಂಧನವನ್ನು ಸಂರಕ್ಷಿಸುವಂತೆ ಕರೆ ನೀಡಿದ ಬೆನ್ನಲ್ಲೇ ದೇಶದಲ್ಲಿ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಅಥವಾ ಕಚ್ಚಾ ತೈಲದ ಕೊರತೆ ಇರುವ ಬಗ್ಗೆ ಊಹಾಪೋಹಗಳು ಹೆಚ್ಚಾಗುವ ಕಾರಣ ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಿದೆ.