ನವದೆಹಲಿ: ಲೋಕಸಭೆಯಲ್ಲಿ (Lok Sabha) ಸೋಮವಾರ ಕಾಂಗ್ರೆಸ್ ನಾಯಕ (Opposition Leader) ರಾಹುಲ್ ಗಾಂಧಿ (Rahul Gandhi) ತೋರ್ಪಡಿಸಿದ್ದ ನಡೆಗೆ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam terror attack) ಬಳಿಕ ಭಾರತೀಯ ಸೇನೆ (Indian army) ಪ್ರದರ್ಶಿಸಿದ ಶೌರ್ಯಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯಾವುದೇ ರೀತಿಯ ಗೌರವ ಸಲ್ಲಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಲೋಕಸಭೆಯಲ್ಲಿ ಸೋಮವಾರ ಆಪರೇಷನ್ ಸಿಂದೂರ್ ಕುರಿತು ವಿಶೇಷ ಚರ್ಚೆ ಆರಂಭಕ್ಕೂ ಮೊದಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎಲ್ಲ ಸಂಸತ್ ಸದಸ್ಯರು ಎದ್ದು ನಿಂತು ಭಾರತೀಯ ಸೇನೆಯ ಶೌರ್ಯವನ್ನು ಗೌರವಿಸುವಂತೆ ಮನವಿ ಮಾಡಿದರು. ಆದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನೆ ಕುಳಿತಿದ್ದರು. ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ನಡೆಸಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಯನ್ನು ಧ್ವಂಸ ಮಾಡಿತ್ತು. ಮೇ ೭ರಿಂದ ನಾಲ್ಕು ದಿನಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದರು.
ರಾಹುಲ್ ಹೇಳಿದ್ದೇನು?
ಲೋಕಸಭೆಯಲ್ಲಿ ಮಂಗಳವಾರ ಆಪರೇಷನ್ ಸಿಂದೂರ್ ಕುರಿತ ಚರ್ಚೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅನಂತರದ ಆಪರೇಷನ್ ಸಿಂದೂರ್ ಘಟನೆಗಳನ್ನು ಸರ್ಕಾರ ನಿರ್ವಹಿಸಿದ ರೀತಿಯ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿಯವರು ತಮ್ಮ ವೈಯಕ್ತಿಕ ಇಮೇಜ್ ಅನ್ನು ರಕ್ಷಿಸಲು ಸಶಸ್ತ್ರ ಪಡೆಗಳನ್ನು ಬಳಸಿಕೊಂಡಿದ್ದಾರೆ ಮತ್ತು ನಿರ್ಣಾಯಕ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಲು ರಾಜಕೀಯ ಇಚ್ಛಾಶಕ್ತಿಯನ್ನು ಹೊಂದಿಲ್ಲ ಎಂದು ಅವರು ಆರೋಪಿಸಿದರು. ಪಾಕಿಸ್ತಾನವು ಉದ್ವಿಗ್ನತೆಯನ್ನು ಬಯಸುವುದಿಲ್ಲ. ಮಿಲಿಟರಿ ಗುರಿಗಳನ್ನು ಹೊಡೆಯುವುದಿಲ್ಲ ಎಂದು ಸರ್ಕಾರಕ್ಕೆ ತಿಳಿಸಿ ಆ ಮೂಲಕ ರಾಜಕೀಯವಾಗಿ ಶರಣಾಯಿತು ಎಂದು ಹೇಳಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿರುವ ಹೇಳಿಕೆಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ಇದರ ಕುರಿತು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು. ಮುಂದಿನ ದಿನಗಳಲ್ಲಿ ಚೀನಾ ಮತ್ತು ಪಾಕಿಸ್ತಾನವನ್ನು ಸಂಯೋಜಿತ ಏಕೀಕೃತ ಮಿಲಿಟರಿ ಬೆದರಿಕೆಯಿಂದ ಭಾರತಕ್ಕೆ ಆತಂಕವಿದೆ ಎಂದು ಅವರು ವಿದೇಶಾಂಗ ನೀತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು