ನವದೆಹಲಿ: ನೈಋತ್ಯ ದಿಲ್ಲಿಯ ಸತ್ಯ ನಿಕೇತನದಲ್ಲಿ ರವಿವಾರ ಕಟ್ಟಡವೊಂದು ಕುಸಿದುಬಿದ್ದಿದೆ. ಕಟ್ಟಡದೊಳಗೆ ಇದ್ದ ಹಲವರು ಅವಶೇಷಗಳಡಿ (Building Collapse) ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿದ್ದ ಕಟ್ಟಡ ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡ ಕುಸಿದಾಗ ಕನಿಷ್ಠ 50 ವಿದ್ಯಾರ್ಥಿಗಳು ಒಳಗೆ ಇದ್ದರು ಎಂದು ಹೇಳಲಾಗಿದೆ. ಸದ್ಯ ರಕ್ಷಣಾಕಾರ್ಯ ನಡೆಯುತ್ತಿದೆ.
ದಿಲ್ಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಸಮೀಪ ಸತ್ಯ ನಿಕೇತನ ಇದೆ. ಈ ಪ್ರದೇಶದಲ್ಲಿ ಹಲವು ಕಾಲೇಜು ವಿದ್ಯಾರ್ಥಿಗಳು ವಾಸಿಸುತ್ತಾರೆ. ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಎನ್ಎಸ್ಯುಐ (NSUI) ಮತ್ತು ಎಐಎಸ್ಎ (AISA) ಸೇರಿದಂತೆ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಕೂಡ ಸ್ಥಳಕ್ಕೆ ತೆರಳುತ್ತಿದ್ದಾರೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದ್ದರೂ, ಇದುವರೆಗೆ ಯಾವುದೇ ಸಾವುನೋವು ವರದಿಯಾಗಿಲ್ಲ.
ಆನ್ಲೈನ್ನಲ್ಲಿ ಹಂಚಿಕೊಳ್ಳಲಾದ ಒಂದು ವೀಡಿಯೊದಲ್ಲಿ, ಕಾಂಕ್ರೀಟ್ ಸ್ಲ್ಯಾಬ್ ಅಡಿಯಲ್ಲಿ ಒಬ್ಬ ವ್ಯಕ್ತಿ ಸಿಲುಕಿಕೊಂಡಿರುವುದನ್ನು ಮತ್ತು ಇತರರು ಅದನ್ನು ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು ಕನಿಷ್ಠ 12 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಚಪ್ಪಡಿಗಳು ಮತ್ತು ಗಿರ್ಡರ್ಗಳನ್ನು ತೆಗೆದುಹಾಕಲು ಅಗೆಯುವ ಯಂತ್ರವನ್ನು ಸ್ಥಳಕ್ಕೆ ತರಲಾಗಿದೆ. ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗ್ನಿಶಾಮಕ ತಂಡಗಳಿಗೆ ಸಹಾಯ ಮಾಡಲು ವಿಪತ್ತು ನಿರ್ವಹಣಾ ತಂಡಗಳನ್ನು ಸಹ ನಿಯೋಜಿಸಲಾಗಿದೆ.
ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗಲೇ ಮೇಲ್ಚಾವಣಿ ಕುಸಿತ; ಹಲವು ಮಕ್ಕಳಿಗೆ ಗಾಯ!
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು. ಮುನ್ನೆಚ್ಚರಿಕೆ ಕ್ರಮವಾಗಿ ಹತ್ತಿರದ ಕಟ್ಟಡವೊಂದನ್ನು ಸ್ಥಳಾಂತರಿಸಲಾಗಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.