ಸಿಜೆಪಿ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ ಆರೋಪ; ಜುಲೈ 27 ರಂದು ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
protest pleas: ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾದ ಎರಡು ಪ್ರತ್ಯೇಕ ಅರ್ಜಿಗಳನ್ನು ಜುಲೈ 27 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ತುರ್ತು ವಿಚಾರಣೆಯನ್ನು ಕೋರಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಅತಿಯಾದ ಬಲಪ್ರಯೋಗ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಸಿಜೆಪಿ ಪ್ರತಿಭಟನೆಯ ಚಿತ್ರಣ -
ನವದೆಹಲಿ, ಜು.24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET question paper leak) ಮತ್ತು ಇತರ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ (CJP Protest) ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾದ ಎರಡು ಪ್ರತ್ಯೇಕ ಅರ್ಜಿಗಳನ್ನು ಜುಲೈ 27 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ತಿಳಿಸಿದೆ. ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುವುದಾಗಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠವು ನ್ಯಾಯಾಲಯದ ಮುಂದೆ ಈ ವಿಷಯ ಪ್ರಸ್ತಾಪವಾದ ನಂತರ ಈ ವಿಷಯವನ್ನು ಪರಿಶೀಲಿಸುವುದಾಗಿ ಒಪ್ಪಿಕೊಂಡಿತು. ತುರ್ತು ವಿಚಾರಣೆಯನ್ನು ಕೋರಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಅತಿಯಾದ ಬಲಪ್ರಯೋಗ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಸುಪ್ರೀಂ ಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿದ ಶಂಕರನಾರಾಯಣನ್, ಇಂತಹ ಘಟನೆಗಳು ಪ್ರತಿದಿನವೂ ನಡೆಯುತ್ತಿರುವುದರಿಂದ ತುರ್ತು ಪರಿಸ್ಥಿತಿ ಇದೆ ಎಂದು ಹೇಳಿದರು. ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದೆ. ಎರಡಕ್ಕೂ ನ್ಯಾಯಾಲಯದ ನೋಂದಣಿ ಸಂಖ್ಯೆ ನೀಡಲಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.
ಜಂತರ್ ಮಂತರ್ನಲ್ಲಿ ಪ್ರತಿಭಟನೆ; ಸ್ಥಳದ ಸುತ್ತಮುತ್ತ ಇಂದು ಮಧ್ಯರಾತ್ರಿಯವರೆಗೆ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ
ಜುಲೈ 27 ರಂದು ಅರ್ಜಿಗಳನ್ನು ವಿಚಾರಣೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಹಲವಾರು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜುಲೈ 20 ರಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆಗಳು ನಡೆದವು.
ಸಂಸತ್ತಿನ ಕಡೆಗೆ ಸಾಗಲು ಯತ್ನಿಸಿದ ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.
ಜುಲೈ 20 ರಂದು ಸಂಸತ್ತಿಗೆ ನಡೆದ ಮೆರವಣಿಗೆಯಲ್ಲಿ ಪ್ರತಿಭಟನಾಕಾರರ ಮೇಲೆ ಅತಿಯಾದ ಬಲಪ್ರಯೋಗ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾದ ಎರಡು ಪ್ರತ್ಯೇಕ ಅರ್ಜಿಗಳ ಕುರಿತು ಜುಲೈ 22 ರಂದು ದೆಹಲಿ ಹೈಕೋರ್ಟ್ ಕೇಂದ್ರ ಮತ್ತು ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೋರಿತು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಮತ್ತು ಯಾವುದೇ ವಿಡಿಯೋಗ್ರಫಿ ಸೇರಿದಂತೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಸಂಬಂಧಿತ ದಾಖಲೆಗಳನ್ನು ಸಂರಕ್ಷಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.