ನವದೆಹಲಿ, ಜು. 23: ಸರ್ಕಾರದ ಪ್ರತಿಭಟನಾ ದಮನದ ಕುರಿತು ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಪತ್ರ ಬರೆದಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ಪೊಲೀಸ್ ಕ್ರಮದ ಕುರಿತು ಪ್ರಸ್ತಾವಿಸಿದ ಅವರು, ಹಿಂಸಾಚಾರ ಎಂದಿಗೂ ಭಿನ್ನಾಭಿಪ್ರಾಯಗಳಿಗೆ ಪರಿಹಾರವಾಗಬಾರದು ಎಂದು ಪ್ರತಿಪಾದಿಸಿದರು.
ದೇಶದ ಅತ್ಯುನ್ನತ ಹುದ್ದೆಯನ್ನು ಹೊಂದಿರುವ ಕಾರಣ ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದರು. ನರೇಂದ್ರ ಮೋದಿ ದೇಶದ ಪ್ರಮುಖ ಮತ್ತು ಗೌರವಾನ್ವಿತ ನಾಯಕ. ಹಿಂಸಾಚಾರ ಎಂದಿಗೂ ಮುಂದುವರಿಯುವ ಮಾರ್ಗವಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹಜಾರೆ ತಿಳಿಸಿದರು. ಸಿಜೆಪಿಯ ಆಂದೋಲನವನ್ನು ಕೇಂದ್ರ ಸರ್ಕಾರ ನಿರ್ವಹಿಸಿದ ರೀತಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದರು. ಆದರೆ, ಕೈಗೊಂಡ ಕ್ರಮ ಮಾತ್ರ ಸರಿಯಲ್ಲ ಎಂಬುದನ್ನು ಅವರು ಪುನರುಚ್ಚರಿಸಿದರು.
ಅಹಿಂಸೆಯ ತತ್ವದ ಮೇಲಿನ ತಮ್ಮ ನಂಬಿಕೆಯನ್ನು ಅವರು ಪುನರುಚ್ಚರಿಸಿದರು. ʼʼನಾನು 22 ಉಪವಾಸ ಸತ್ಯಾಗ್ರಹಗಳನ್ನು ನಡೆಸಿದ್ದೇನೆ. ಅವುಗಳಲ್ಲಿ ಎಂದಿಗೂ ಹಿಂಸಾಚಾರ ನಡೆದಿಲ್ಲʼʼ ಎಂದು ಹಜಾರೆ ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರನ್ನು ಭೇಟಿ ಮಾಡಬೇಕು ಎಂದು ಅವರು ಒತ್ತಿ ಹೇಳಿದರು. ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಅವರ ಕಳವಳಗಳನ್ನು ಪರಿಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿಪಕ್ಷಗಳಿಗೆ ಸವಾಲ್; ನೀಟ್ ವಿವಾದದ ಕುರಿತು ಚರ್ಚೆಗೆ ಆಹ್ವಾನ ನೀಡಿದ ಕಿರಣ್ ರಿಜುಜು
ಅಣ್ಣಾ ಹಜಾರೆ ಪ್ರಧಾನಿ ಮೋದಿಗೆ ಹೇಳಿದ್ದೇನು?
ಬುಧವಾರ (ಜು. 22) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ, ಹಿಂಸಾಚಾರ ಮತ್ತು ಪೊಲೀಸ್ ಕ್ರಮದ ವರದಿಗಳು ನೋವುಂಟು ಮಾಡಿವೆ ಎಂದು ಹಜಾರೆ ಹೇಳಿದ್ದಾರೆ. ಹಿಂಸಾಚಾರ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಅನಗತ್ಯ ಬಲಪ್ರಯೋಗಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಎಂದು ಅವರು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಪ್ರಕ್ರಿಯೆಗಳಲ್ಲಿನ ವಿಳಂಬ, ನಿರುದ್ಯೋಗ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದ್ದಾರೆ.
ಸಿಜೆಪಿ ನೇತೃತ್ವದ ಆಂದೋಲನದ ಕೇಂದ್ರಬಿಂದುವಾಗಿರುವ ನೀಟ್ ವಿವಾದವನ್ನು ಉಲ್ಲೇಖಿಸಿದ ಹಜಾರೆ, ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕವನ್ನುಂಟು ಮಾಡಿದೆ ಎಂದು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ಅವುಗಳನ್ನು ಮಾತುಕತೆ, ಸೂಕ್ಷ್ಮತೆ ಮತ್ತು ಪರಸ್ಪರ ಗೌರವದ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.