Thursday, 19th September 2024

CM Siddaramaiah: ಮೋದಿ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ: ಸಿಎಂ ಸಿದ್ದರಾಮಯ್ಯ ಕಿಡಿ

CM Siddaramaiah

ಮಾಗಡಿ: ಬಿಜೆಪಿಯವರು ಬಡವರು ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿರುವ ಮೋದಿ (Narendra Modi) ಅವರು ಬಂಡವಾಳಶಾಹಿಗಳ ಪರವಾಗಿದ್ದು, ಇವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ. ಆದರೆ, ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮಾಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದು ತಿಳಿಸಿದರು.

ಮೋದಿ ಬಂಡವಾಳಶಾಹಿಗಳ ಪರ

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದು, ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5 ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಎಸ್‌ಸಿಎಸ್‌ಪಿ-ಟಿಎಸ್‌ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ, 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್‌ಸಿ ಎಸ್‌ಪಿ / ಟಿಎಸ್‌ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಈ ಸುದ್ದಿಯನ್ನೂ ಓದಿ | Milk Price Hike: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌; ಹಾಲಿನ ದರ ಹೆಚ್ಚಳ ಸುಳಿವು ಕೊಟ್ಟ ಸಿಎಂ!

ಮಾಗಡಿ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ

ಮಾಗಡಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.