Friday, 20th September 2024

Emergency Movie: ಹೈಕೋರ್ಟ್‌ನಲ್ಲೂ ಕಂಗನಾ ಸಿನಿಮಾ ʻಎಮರ್ಜೆನ್ಸಿʼಗೆ ಹಿನ್ನಡೆ

emergency Movie

ಮುಂಬೈ: ಸೆನ್ಸಾರ್‌ ಮಂಡಳಿ(CBFC) ಇನ್ನೂ ಪ್ರಮಾಣ ಪತ್ರ ನೀಡದಿರುವ ಹಿನ್ನೆಲೆ ಹೈಕೋರ್ಟ್‌ ಮೆಟ್ಟಿಲೇರಿರುವ ಕಂಗನಾ ರಣಾವತ್‌(Kangana Ranaut) ನಟಿಸಿ ನಿರ್ದೇಶಿಸಿರುವ ಬಾಲಿವುಡ್‌ನ ‘ಎಮರ್ಜೆನ್ಸಿ’  (Emergency Movie) ಚಿತ್ರತಂಡಕ್ಕೆ ಅಲ್ಲೂ ಹಿನ್ನಡೆಯಾಗಿದೆ. ಪ್ರಮಾಣ ಪತ್ರ ನೀಡುವಂತೆ ಸೆನ್ಸಾರ್‌ ಮಂಡಳಿಗೆ ಆದೇಶ ನೀಡಲು ಕೋರ್ಟ್‌ ನಿರಾಕರಿಸಿದೆ.

ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಕಾರ, ಸೆನ್ಸಾರ್ ಮಂಡಳಿಯು ನಿರಂಕುಶವಾಗಿ ಮತ್ತು ಕಾನೂನುಬಾಹಿರವಾಗಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ತಡೆಹಿಡಿದಿದೆ. ಸೆನ್ಸಾರ್ ಮಂಡಳಿಯು ಪ್ರಮಾಣಪತ್ರದೊಂದಿಗೆ ಸಿದ್ಧವಾಗಿದೆ ಆದರೆ ಅದನ್ನು ನೀಡುತ್ತಿಲ್ಲ ಎಂದು ಝೀ ಎಂಟರ್‌ಟೈನ್ಮೆಂಟ್‌ ಎಂಟರ್‌ಪ್ರೈಸಸ್‌, ಚಿತ್ರ ಸಹ ನಿರ್ಮಾಪಕ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ ಪಿ ಕೊಲಬಾವಾಲಾ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ ಅದನ್ನು ತಿರಸ್ಕರಿಸಿದೆ.

ಮಧ್ಯಪ್ರದೇಶ ಹೈಕೋರ್ಟ್ ಈಗಾಗಲೇ ಸಿಬಿಎಫ್‌ಸಿಗೆ ನಿರ್ದೇಶನ ನೀಡಿದೆ. ಇಂದು ನಾವು ಯಾವುದೇ ಆದೇಶ ಹೊರಡಿಸಿದರೆ ನೀಡಿದರೆ ಅದು ನೇರವಾಗಿ ಆದೇಶಕ್ಕೆ ವಿರುದ್ಧವಾಗಿರುತ್ತದೆ. ನಾವು ಇಂದು ಯಾವುದೇ ಆದೇಶವನ್ನು ಜಾರಿಗೊಳಿಸಿದರೆ ಮತ್ತೊಂದು ಹೈಕೋರ್ಟ್‌ ಆದೇಶವನ್ನು ಉಲ್ಲಂಘಿಸಲು ನಾವು CBFC ಗೆ ಹೇಳಿದಂತಾಗುತ್ತದೆ. ನಾವು ಅದನ್ನು ಮಾಡಲು ಸಾಧ್ಯವಿಲ್ಲ. ಸೆನ್ಸಾರ್ ಮಂಡಳಿಯು ಚಿತ್ರದ ವಿರುದ್ಧ ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಿ ನಂತರ ಸೆಪ್ಟೆಂಬರ್ 18 ರೊಳಗೆ ಪ್ರಮಾಣೀಕರಿಸುವಂತೆ ಬಾಂಬೆ ಹೈಕೋರ್ಟ್ ಹೇಳಿದೆ.

ಮಧ್ಯಪ್ರದೇಶ ಕೋರ್ಟ್‌ ಹೇಳೋದೇನು?

ಮಂಗಳವಾರ, ಮಧ್ಯಪ್ರದೇಶ ಹೈಕೋರ್ಟ್ ಕಂಗನಾ ರಣಾವತ್ ಅಭಿನಯದ ಚಿತ್ರದಲ್ಲಿ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ದೃಶ್ಯಗಳನ್ನು ಒಳಗೊಂಡಿದೆ ಮತ್ತು ಆದ್ದರಿಂದ ಅಶಾಂತಿಯನ್ನು ಉಂಟುಮಾಡಬಹುದು ಎಂದು ಸಿಖ್ ಗುಂಪುಗಳು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡುವ ಮೊದಲು ಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅರ್ಜಿದಾರ ಸಿಖ್ ಗುಂಪುಗಳ ಪ್ರಾತಿನಿಧ್ಯವನ್ನು ಪರಿಗಣಿಸುವಂತೆ ಸೆನ್ಸಾರ್ ಮಂಡಳಿಗೆ ನ್ಯಾಯಾಲಯ ಸೂಚಿಸಿದೆ.

ಕಂಗನಾ ರಾಣಾವತ್‌ ಮೊದಲ ಬಾರಿಗೆ ಏಕಾಂಗಿಯಾಗಿ ಆ್ಯಕ್ಷನ್‌ ಕಟ್‌ ಹೇಳಿರುವ ʼಎಮರ್ಜೆನ್ಸಿʼ ಸಿನಿಮಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನ್ನಾಧರಿಸಿದೆ. ಅದರಲ್ಲಿಯೂ ಅವರು 1975 ರಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಬಗ್ಗೆ ಈ ಚಿತ್ರ ಬೆಳಕು ಚೆಲ್ಲಲಿದೆ. ಇದೇ ಕಾರಣಕ್ಕೆ ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸದ್ದು ಮಾಡುತ್ತಿದೆ.

ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ  ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಹೇಳಿದೆ. ಅಲ್ಲದೇ ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಮಾತ್ರವಲ್ಲ ಸಿಖ್​ ಸಮುದಾಯದವರೂ ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Kangana Ranaut: ಪೊಲೀಸ್‌ ಕೇಸ್‌ ಆಗ್ತಿದ್ದಂತೆ ಭಾವಿ ಅತ್ತೆ-ಮಾವ ಓಡಿ ಹೋದ್ರು- ಮದ್ವೆ ಬಗ್ಗೆ ಕಂಗನಾ ಮಾತು